ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ ಬಂದ್‌: ಪ್ರತಿಭಟನಾಕಾರರ ಎಚ್ಚರಿಕೆ

ಜಿಲ್ಲಾ ಕೇಂದ್ರದ ರಸ್ತೆಗಳ ದುಸ್ಥಿತಿ ಖಂಡಿಸಿ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ
Last Updated 13 ಅಕ್ಟೋಬರ್ 2020, 15:12 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲಾ ಕೇಂದ್ರದ ರಸ್ತೆಗಳ ದುಸ್ಥಿತಿ ಖಂಡಿಸಿ ಪ್ರಗತಿಪರ ಸಂಘಟನೆಗಳ ಸದಸ್ಯರು ಇಲ್ಲಿ ಮಂಗಳವಾರ ಎಂ.ಬಿ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದರು.

ಜಿಲ್ಲಾಡಳಿತ, ನಗರಸಭೆ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ರಸ್ತೆಗಳನ್ನು ಶೀಘ್ರವೇ ದುರಸ್ತಿ ಮಾಡದಿದ್ದರೆ ಕೋಲಾರ ಬಂದ್‌ಗೆ ಕರೆ ಕೊಡುವುದಾಗಿ ಎಚ್ಚರಿಕೆ ನೀಡಿದರು.

‘ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಅಮೃತ್‌ ಯೋಜನೆಯಡಿ ನಗರದಲ್ಲಿ ಕೈಗೊಂಡಿರುವ ಒಳಚರಂಡಿ ಕಾಮಗಾರಿಯು ನಗರವಾಸಿಗಳಿಗೆ ಶಾಪವಾಗಿದೆ. ಕಾಮಗಾರಿಗಾಗಿ ರಸ್ತೆಗಳನ್ನು ಮನಸೋಇಚ್ಛೆ ಅಗೆಯಲಾಗಿದೆ. ಕಾಮಗಾರಿ ಪೂರ್ಣಗೊಂಡ ನಂತರ ಗುತ್ತಿಗೆದಾರರು ರಸ್ತೆ ದುರಸ್ತಿ ಮಾಡಿಲ್ಲ’ ಎಂದು ಸಂಘಟನೆ ಸದಸ್ಯ ಪ್ರಕಾಶ್‌ ದೂರಿದರು.

‘ಕೋಲಾರ ಕ್ಷೇತ್ರದ ಶಾಸಕರು ನಗರದ ಅಭಿವೃದ್ಧಿ ಮರೆತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಮುಳಬಾಗಿಲು ಕ್ಷೇತ್ರಕ್ಕಷ್ಟೇ ಸೀಮಿತವಾಗಿದ್ದಾರೆ. ಗುಂಡಿಮಯ ರಸ್ತೆಗಳಿಂದ ನಗರದ ಸೌಂದರ್ಯ ಹಾಳಾಗಿದ್ದು, ದೂಳಿನ ಆರ್ಭಟ ಹೆಚ್ಚಿದೆ. ನಗರವಾಸಿಗಳು ಹಾಗೂ ವಾಹನ ಸವಾರರು ಪ್ರತಿನಿತ್ಯ ಬವಣೆ ಪಡುವಂತಾಗಿದೆ’ ಎಂದು ಸಂಘಟನೆ ಸದಸ್ಯ ವೆಂಕಟೇಶ್‌ ಕಿಡಿಕಾರಿದರು.

ಮೃತ್ಯುಕೂಪ: ‘ಗುಂಡಿಮಯ ರಸ್ತೆಗಳು ಜನರ ಪಾಲಿಗೆ ಮೃತ್ಯುಕೂಪವಾಗಿ ಪರಿಣಮಿಸಿವೆ. ಅಧಿಕಾರಿಗಳು ನೆಪಕ್ಕೆ ಗುಂಡಿಗಳಿಗೆ ಜಲ್ಲಿ ಪುಡಿ ಹಾಗೂ ಮಣ್ಣು ಸುರಿಸಿ ರಸ್ತೆಗೆ ಡಾಂಬರು ಹಾಕಿರುವುದಾಗಿ ಬಿಲ್‌ ಮಂಜೂರು ಮಾಡಿದ್ದಾರೆ. ಈ ಅಕ್ರಮದಲ್ಲಿ ಗುತ್ತಿಗೆದಾರರು ಹಾಗೂ ಅಧಿಕಾರಿಗಳು ಕೋಟಿಗಟ್ಟಲೆ ಹಣ ದೋಚಿದ್ದಾರೆ’ ಎಂದು ಸಂಘಟನೆ ಸದಸ್ಯ ರಾಮುಶಿವಣ್ಣ ಆರೋಪಿಸಿದರು.

‘ರಸ್ತೆಗಳ ಅಕ್ಕಪಕ್ಕದ ಹೋಟೆಲ್‌, ಬೇಕರಿ, ಅಂಗಡಿ ಕೆಲಸಗಾರರು ಹಾಗೂ ವರ್ತಕರಿಗೆ ದೂಳಿನ ಸಮಸ್ಯೆಯಿಂದ ಕಿರಿಕಿರಿಯಾಗುತ್ತಿದೆ. ಜನಪ್ರತಿನಿಧಿಗಳು ಸಮಸ್ಯೆ ಪರಿಹಾರಕ್ಕೆ ಗಮನ ಹರಿಸುತ್ತಿಲ್ಲ. ಗುಂಡಿಮಯ ರಸ್ತೆಗಳಲ್ಲೇ ಸಂಚರಿಸುವ ಅವರಿಗೆ ಸಮಸ್ಯೆಯ ಅರಿವಿಲ್ಲ. ಅಧಿಕಾರಿಗಳು ರಸ್ತೆಗಳ ವಿಚಾರದಲ್ಲಿ ಕಣ್ಣಿದ್ದು ಕುರುಡಾಗಿದ್ದಾರೆ’ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಪಾಠ ಕಲಿಸುತ್ತಾರೆ: ‘ಜಿಲ್ಲಾ ಕೇಂದ್ರದ ರಸ್ತೆಗಳಿಗೆ ಶೀಘ್ರವೇ ಡಾಂಬರು ಹಾಕಬೇಕು. ನಗರದ ಮತ್ತು ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು. ಇಲ್ಲವಾದರೆ ಜನ ಬೀದಿಗಿಳಿದು ತಕ್ಕ ಪಾಠ ಕಲಿಸುತ್ತಾರೆ’ ಎಂದು ಗುಡುಗಿದರು.

ರೈತ ಸಂಘ ಮತ್ತು ಹಸಿರು ಸೇನೆ, ಕರ್ನಾಟಕ ರಕ್ಷಣಾ ವೇದಿಕೆ, ಮಾನವ ಹಕ್ಕುಗಳ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT