ಕೋಲಾರ: ಜಿಲ್ಲೆಯ ಮಾಲೂರು ತಾಲ್ಲೂಕಿನ ಉಳ್ಳೇರಹಳ್ಳಿ ಗ್ರಾಮದಲ್ಲಿ ದೇವರ ಗುಜ್ಜಕೋಲು ಮುಟ್ಟಿದ ಕಾರಣಕ್ಕೆ ಪರಿಶಿಷ್ಟ ಜಾತಿಯ ಬಾಲಕನ ಮೇಲೆ ಹಲ್ಲೆ ಮಾಡಿ, ದಂಡ ವಿಧಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಗ್ರಾಮದ ಎಂಟು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸೆ.8ರಂದು ಘಟನೆ ನಡೆದಿದ್ದು, ಬಾಲಕನ ತಾಯಿ ಶೋಭಾ ಸೆ.20ರಂದು ಮಾಸ್ತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಆದರೆ, ಆರೋಪಿಗಳು ತಲೆಮರೆಸಿಕೊಂಡಿದ್ದರು.
‘ಗ್ರಾಮದ ನಾರಾಯಣಸ್ವಾಮಿ, ರಮೇಶ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾರಾಯಣಸ್ವಾಮಿ, ವೆಂಕಟೇಶಪ್ಪ, ಕೋಟೆಪ್ಪ, ಚಲಪತಿ, ಅರ್ಚಕ ಮೋಹನರಾವ್, ಚಿನ್ನಯ್ಯ ಅವರನ್ನು ಬಂಧಿಸಲಾಗಿದೆ. ತನಿಖೆ ಮುಂದುವರಿದಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ್ ಹೇಳಿದರು.