ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ವಿರೋಧ

ಸರ್ಕಾರದ ನಡೆ ಖಂಡನೀಯ: ದಲಿತ ಸಂಘರ್ಷ ಸಮಿತಿ ಸದಸ್ಯರ ಆಕ್ರೋಶ
Last Updated 11 ಜುಲೈ 2020, 12:16 IST
ಅಕ್ಷರ ಗಾತ್ರ

ಕೋಲಾರ: ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ನಿರ್ಧಾರದಿಂದ ಹಿಂದೆ ಸರಿಯುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯರು ಇಲ್ಲಿ ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಶನಿವಾರ ನಡೆಸಿದರು.

‘ಸರ್ಕಾರ ರಿಯಲ್‌ ಎಸ್ಟೇಟ್‌ ದಂಧೆಕೋರರು, ಬಂಡವಾಳಶಾಹಿಗಳು ಹಾಗೂ ಬಹುರಾಷ್ಟ್ರೀಯ ಕಂಪನಿಗಳ ಒತ್ತಡಕ್ಕೆ ಮಣಿದು 1961ರ ಕರ್ನಾಟಕ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ. ಸರ್ಕಾರದ ಈ ನಡೆ ಖಂಡನೀಯ’ ಎಂದು ಸಂಘಟನೆ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.

‘ಭೂಮಿ ಒಡೆತನ ಸೇರಿದಂತೆ ರೈತ ಹಾಗೂ ಕೃಷಿ ಕಾರ್ಮಿಕರ ಹಿತಾಸಕ್ತಿಗೆ ಬದ್ಧವಾಗಿದ್ದ ಕರ್ನಾಟಕ ಭೂ ಸುಧಾರಣಾ ಕಾಯ್ದೆಯು ಇಡೀ ದೇಶಕ್ಕೆ ಮಾದರಿಯಾಗಿತ್ತು. ರೈತರ ಮತ್ತು ಕೃಷಿ ಕಾರ್ಮಿಕರ ಪರವಾಗಿದ್ದ ಜನಪರ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವುದು ಖಂಡನೀಯ’ ಎಂದು ಸಮಿತಿಯ ರಾಜ್ಯ ಘಟಕದ ಸಂಘಟನಾ ಸಂಚಾಲಕ ವಿ.ನಾರಾಯಣಸ್ವಾಮಿ ಕಿಡಿಕಾರಿದರು.

‘ಸರ್ಕಾರ ಕೃಷಿಕರು, ಭೂರಹಿತ ಕೃಷಿ ಕಾರ್ಮಿಕರ ಹಿತಾಸಕ್ತಿ ಬಲಿ ಕೊಡಲು ಹೊರಟಿದೆ. ಭೂರಹಿತ ಬಡಜನರ ಭೂ ಒಡೆತನದ ಕನಸಿಗೆ ಕೊಳ್ಳಿ ಇಡುತ್ತಿದೆ. ಅನ್ನ ಕೊಡುವ ಭೂಮಿಯನ್ನು ರೈತರಿಂದ ಕಿತ್ತುಕೊಂಡು ಲೂಟಿಕೋರ ಬಂಡವಾಳಶಾಹಿಗಳಿಗೆ ಪರಭಾರೆ ಮಾಡುವ ಹುನ್ನಾರ ಅಡಗಿದೆ’ ಎಂದು ಆರೋಪಿಸಿದರು.

ಒಕ್ಕಲೆಬ್ಬಿಸುತ್ತಿದೆ: ‘ಸರ್ಕಾರ ಆರ್ಥಿಕವಾಗಿ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ಪೂರಕವಾಗಿರುವ ಕೃಷಿ ಚಟುವಟಿಕೆಯಿಂದ ರೈತರು ಮತ್ತು ಕೃಷಿ ಕಾರ್ಮಿಕರನ್ನು ದುಡಿಮೆಯ ನೆಲೆಯಿಂದ ಶಾಶ್ವತವಾಗಿ ಒಕ್ಕಲೆಬ್ಬಿಸುತ್ತಿದೆ. ಬಂಡವಾಳಶಾಹಿ ರಾಜಕಾರಣಕ್ಕೆ ರೈತರನ್ನು ಗುಲಾಮರಾಗಿಸುವ ಸಂಚು ನಡೆದಿದೆ. ತಿದ್ದುಪಡಿ ಕಾಯ್ದೆ ಜಾರಿಯಾದರೆ ಉಳ್ಳವರೇ ಭೂ ಒಡೆಯರಾಗುತ್ತಾರೆ’ ಎಂದು ಧರಣಿನಿರತರು ಆತಂಕ ವ್ಯಕ್ತಪಡಿಸಿದರು.

‘ಆಹಾರದ ಸಾರ್ವಭೌಮತ್ವ ಹೊಂದಿದ್ದ ಭಾರತ ದೇಶವು ಆಳುವವರ ಕೃಷಿ ವಿರೋಧಿ ಧೋರಣೆಯಿಂದ ಕೃಷಿ ಬಿಕ್ಕಟ್ಟು ಹಾಗೂ ಆಹಾರದ ಸಮಸ್ಯೆ ಎದುರಿಸುತ್ತಿದೆ. ಬಡ ಜನರು ಹಸಿವಿನಿಂದ ಸಾಯುತ್ತಿದ್ದಾರೆ. ದೂರದೃಷ್ಟಿಯಿಲ್ಲದ ರಾಜಕಾರಣಿಗಳ ಅಪ್ರಬುದ್ಧ ನಿರ್ಧಾರಗಳಿಂದ ಕೃಷಿ ಭೂಮಿ ನಾಶವಾಗಿ ಆಹಾರದ ಸಮಸ್ಯೆ ಮತ್ತಷ್ಟು ಗಂಭೀರವಾಗುತ್ತಿದೆ’ ಎಂದು ದೂರಿದರು.

ಹೋರಾಟ ನಡೆಸುತ್ತೇವೆ: ‘ದೇಶದಲ್ಲಿ ಶೇ 80ರಷ್ಟು ಸಣ್ಣ ಮತ್ತು ಅತಿ ಸಣ್ಣ ರೈತರಿದ್ದಾರೆ. ಇವರು ಹಣದಾಸೆಗೆ ಭೂಮಿ ಮಾರಾಟ ಮಾಡಿದರೆ ಭವಿಷ್ಯದಲ್ಲಿ ಎಂದಿಗೂ ಜಮೀನು ಖರೀದಿಸಲು ಸಾಧ್ಯವಾಗುವುದಿಲ್ಲ. ರೈತ ಕುಲಕ್ಕೆ ಮಾರಕವಾಗಿರುವ ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು. ಇಲ್ಲದಿದ್ದರೆ ರಾಜ್ಯದೆಲ್ಲೆಡೆ ಹೋರಾಟ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಸಮಿತಿಯ ಜಿಲ್ಲಾ ಘಟಕದ ಸಂಘಟನಾ ಸಂಚಾಲಕರಾದ ಎಸ್.ಡಿ.ಮುನಿಸ್ವಾಮಿ, ಕೆ.ಆರ್.ಮುನಿಯಪ್ಪ, ಎಚ್.ವೆಂಕಟರವಣ, ಪ್ರಕಾಶ್, ಟಿ.ನಾರಾಯಣಸ್ವಾಮಿ, ರವೀಂದ್ರಕುಮಾರ್, ಮುನಿರಾಜು, ರಾಜಣ್ಣ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT