ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಕ್‌ಡೌನ್‌: ಮೊದಲ ದಿನ ಜಿಲ್ಲೆ ಸ್ತಬ್ಧ

ವಹಿವಾಟು–ಬಸ್‌ ಸೇವೆ ಸಂಪೂರ್ಣ ಸ್ಥಗಿತ: ಜನರಿಂದ ಉತ್ತಮ ಸ್ಪಂದನೆ
Last Updated 10 ಮೇ 2021, 13:56 IST
ಅಕ್ಷರ ಗಾತ್ರ

ಕೋಲಾರ: ಕೊರೊನಾ ಸೋಂಕು ತಡೆಗಾಗಿ ರಾಜ್ಯ ಸರ್ಕಾರ ಘೋಷಿಸಿರುವ ಲಾಕ್‌ಡೌನ್‌ ಆದೇಶಕ್ಕೆ ಸೋಮವಾರ ಇಡೀ ಜಿಲ್ಲೆ ಸ್ತಬ್ಧವಾಯಿತು.

ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶ ಸೇರಿದಂತೆ ಜಿಲ್ಲೆಯಾದ್ಯಂತ ಜನರು ಮನೆಗಳಲ್ಲೇ ಉಳಿದು ಲಾಕ್‌ಡೌನ್‌ಗೆ ಬೆಂಬಲ ಸೂಚಿಸಿದರು. ವರ್ತಕರು ಸ್ವಇಚ್ಛೆಯಿಂದ ಅಂಗಡಿಗಳನ್ನು ಮುಚ್ಚಿ ವಹಿವಾಟು ಸ್ಥಗಿತಗೊಳಿಸಿದರು.

ಹಾಲು, ಹಣ್ಣು, ತರಕಾರಿ, ಮಾಂಸ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6 ಗಂಟೆಯಿಂದ 10ರವರೆಗೆ ಅವಕಾಶ ನೀಡಲಾಯಿತು. ಮದ್ಯದಂಗಡಿಗಳು ಸೀಮಿತ ಅವಧಿವರೆಗೆ ತೆರೆದಿದ್ದರಿಂದ ಗ್ರಾಹಕರು ಮದ್ಯ ಖರೀದಿಗೆ ಮುಗಿಬಿದ್ದರು. ಮದ್ಯದಂಗಡಿಗಳಲ್ಲಿ ಪಾರ್ಸೆಲ್‌ ಸೇವೆ ಮಾತ್ರ ನೀಡಲಾಯಿತು. ಹೋಟೆಲ್‌ಗಳಲ್ಲೂ ಪಾರ್ಸೆಲ್‌ ಸೇವೆ ಮಾತ್ರ ಲಭ್ಯವಿತ್ತು. ಔಷಧ ಮಾರಾಟ ಮಳಿಗೆಗಳು ಎಂದಿನಂತೆ ತೆರೆದಿದ್ದವು.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಬಸ್‌ ಸೇವೆ ಸಂಪೂರ್ಣ ಸ್ಥಗಿತಗೊಂಡಿತು. ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ಗಳು, ಸರಕು ಸಾಗಣೆ ವಾಹನಗಳು ರಸ್ತೆಗೆ ಇಳಿಯಲೇ ಇಲ್ಲ. ಸದಾ ಜನಜಂಗುಳಿ ಹಾಗೂ ವಾಹನ ದಟ್ಟಣೆಯಿಂದ ಗಿಜಿಗುಡುತ್ತಿದ್ದ ಮಾರುಕಟ್ಟೆಗಳು, ವಾಣಿಜ್ಯ ಪ್ರದೇಶಗಳು ಹಾಗೂ ರಸ್ತೆಗಳು ಭಣಗುಡುತ್ತಿದ್ದವು.

ರೈಲು ನಿಲ್ದಾಣಗಳು, ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ ನಿಲ್ದಾಣಗಳು ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿದ್ದವು. ತುರ್ತು ಕಾರ್ಯ ನಿಮಿತ್ತ ಹೊರ ಊರುಗಳಿಗೆ ಹೋಗಲು ನಿಲ್ದಾಣಕ್ಕೆ ಬಂದಿದ್ದ ಸಾರ್ವಜನಿಕರು ಪ್ರಯಾಣ ಮೊಟಕುಗೊಳಿಸಿ ಮನೆಗೆ ಹಿಂದಿರುಗಿದರು.

ಸಲೂನ್‌, ಚಿತ್ರಮಂದಿರಗಳು, ಬೇಕರಿ, ತಂಪು ಪಾನೀಯ ಅಂಗಡಿಗಳು, ಐಸ್‌ಕ್ರೀಮ್‌, ಚಾಟ್ಸ್‌ ಮಾರಾಟ ಮಳಿಗೆಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಬಂದ್‌ ಮಾಡಲಾಗಿತ್ತು. ಪೆಟ್ರೋಲ್‌ ಬಂಕ್‌ಗಳು ಇಡೀ ದಿನ ತೆರೆದಿದ್ದರೂ ಗ್ರಾಹಕರ ಸಂಖ್ಯೆ ತೀರಾ ಕಡಿಮೆಯಿತ್ತು. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಸೇವೆ ಒದಗಿಸಿದವು.

ಶೇ 50ರಷ್ಟು ಸಿಬ್ಬಂದಿ: ಬ್ಯಾಂಕ್‌ಗಳು, ಅಂಚೆ ಕಚೇರಿಗಳು ಹಾಗೂ ಸರ್ಕಾರಿ ಕಚೇರಿಗಳು ಸೇವೆ ಒದಗಿಸಿದವು. ಕೋವಿಡ್‌ ಮಾರ್ಗಸೂಚಿಯಂತೆ ಬ್ಯಾಂಕ್‌ ಮತ್ತು ಸರ್ಕಾರಿ ಕಚೇರಿಗಳಲ್ಲಿ ಶೇ 50ರಷ್ಟು ಸಿಬ್ಬಂದಿಯೊಂದಿಗೆ ದೈನಂದಿನ ಕಾರ್ಯ ನಿರ್ವಹಿಸಲಾಯಿತು. ಆದರೆ, ಸಾಮಾನ್ಯ ದಿನಗಳಿಗೆ ಹೋಲಿಸಿದರೆ ಬ್ಯಾಂಕ್‌ಗಳಲ್ಲಿ ಸಾರ್ವಜನಿಕರ ಸಂಖ್ಯೆ ಕಡಿಮೆಯಿತ್ತು.

ಹೋಟೆಲ್‌ಗಳಲ್ಲಿ ಆಹಾರ ಪದಾರ್ಥಗಳ ಪಾರ್ಸೆಲ್‌ಗೆ ಸರ್ಕಾರ ಅವಕಾಶ ನೀಡಿದೆಯಾದರೂ ಮಾಲೀಕರು ಹೋಟೆಲ್‌ಗಳ ಬಾಗಿಲು ತೆರೆಯುವ ಮನಸ್ಸು ಮಾಡಲಿಲ್ಲ. ರಸ್ತೆ ಬದಿಯ ಫಾಸ್ಟ್‌ಫುಡ್‌, ಪೆಟ್ಟಿಗೆ ಅಂಗಡಿಗಳು ಬಂದ್‌ ಆಗಿದ್ದರಿಂದ ಜನರಿಗೆ ಟೀ, ಕಾಫಿ ಸಹ ಸಿಗಲಿಲ್ಲ. ಹೀಗಾಗಿ ಜನ ಜೀವನಕ್ಕೆ ತೀವ್ರ ತೊಂದರೆಯಾಯಿತು. ಹೋಟೆಲ್‌ಗಳ ಮೇಲೆ ಅವಲಂಬಿತರಾದ ಕೂಲಿ ಕಾರ್ಮಿಕರು ಹಾಗೂ ಗ್ರಾಹಕರು ಊಟ, ತಿಂಡಿಗಾಗಿ ಅಲೆದಾಡಿದರು.

ವಾಹನ ಜಪ್ತಿ: ಜಿಲ್ಲಾ ಕೇಂದ್ರ ಸೇರಿದಂತೆ ಜಿಲ್ಲೆಯ ಹಲವೆಡೆ ಕೆಲ ಜನರು ಲಾಕ್‌ಡೌನ್‌ ಆದೇಶ ಲೆಕ್ಕಿಸದೆ ರಸ್ತೆಗಿಳಿದರು. ಸರ್ಕಾರದ ಆದೇಶ ಉಲ್ಲಂಘಿಸಿ ಬೈಕ್‌ ಹಾಗೂ ಕಾರುಗಳಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕರಿಗೆ ಪೊಲೀಸರು ಲಾಠಿ ರುಚಿ ತೋರಿಸಿದರು. ಮತ್ತೆ ಕೆಲವೆಡೆ ಪೊಲೀಸರು ಮಾರ್ಗ ಮಧ್ಯೆಯೇ ವಾಹನಗಳನ್ನು ಜಪ್ತಿ ಮಾಡಿ ದಂಡ ವಿಧಿಸಿದರು. ಆಟೊ ಚಾಲಕರನ್ನು ಕೆಳಗಿಳಿಸಿ ವಾಹನ ವಶಕ್ಕೆ ಪಡೆದರು. ಆದರೂ ಕೆಲ ಮಂದಿ ಮನೆಯಿಂದ ಹೊರ ಬಂದು ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದ ದೃಶ್ಯ ಕಂಡುಬಂತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT