ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ಲಾಸ್ಟಿಕ್ ಮುಕ್ತ ಭಾರತಕ್ಕೆ ಸಂಕಲ್ಪ ಮಾಡಿ

Last Updated 2 ಅಕ್ಟೋಬರ್ 2019, 14:21 IST
ಅಕ್ಷರ ಗಾತ್ರ

ಕೋಲಾರ: ‘ಪ್ಲಾಸ್ಟಿಕ್ ಮುಕ್ತ ಭಾರತ ನಿರ್ಮಾಣವು ಪ್ರಧಾನಿ ನರೇಂದ್ರ ಮೋದಿಯವರ ಕನಸಾಗಿದ್ದು, ಇದನ್ನು ನನಸು ಮಾಡಲು ದೃಢ ಸಂಕಲ್ಪ ಮಾಡಿ’ ಎಂದು ಸಂಸದ ಎಸ್.ಮುನಿಸ್ವಾಮಿ ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

ಗಾಂಧಿ ಜಯಂತಿ ಅಂಗವಾಗಿ ಬಿಜೆಪಿ ವತಿಯಿಂದ ಇಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪಾದಯಾತ್ರೆ ಮತ್ತು ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ‘ಮನುಷ್ಯನ ದುರಾಸೆಯ ಫಲವಾಗಿ ಪರಿಸರ ನಾಶವಾಗಿದೆ. ಪ್ರಕೃತಿ ಮುನಿದಿರುವುದರಿಂದ ಅತಿವೃಷ್ಟಿ, ಅನಾವೃಷ್ಟಿ ಸಮಸ್ಯೆ ಎದುರಾಗುತ್ತಿದೆ’ ಎಂದು ಅಭಿಪ್ರಾಯಪಟ್ಟರು.

‘ಗಿಡ ಮರ ಬೆಳೆಸದಿದ್ದರೆ ಭವಿಷ್ಯದಲ್ಲಿ ಮತ್ತಷ್ಟು ಸಂಕಷ್ಟ ಎದುರಾಗುತ್ತದೆ. ಮಹಾತ್ಮ ಗಾಂಧೀಜಿ ಸಮಾಜಕ್ಕೆ ಶ್ರಮದಾನದ ಮಹತ್ವ ತಿಳಿಸಿಕೊಟ್ಟರು. ಸ್ವದೇಶಿ ವಸ್ತುಗಳ ಬಳಕೆ ಮತ್ತು ಉತ್ಪಾದನೆಗೆ ಹೆಚ್ಚು ಒತ್ತು ಕೊಟ್ಟರು. ವಿದೇಶಿ ಬಟ್ಟೆ ತ್ಯಜಿಸಿ ದೇಸಿ ಬಟ್ಟೆ ಬಳಕೆಗೆ ಕರೆ ಕೊಟ್ಟರು. ಚರಕದ ಬಳಕೆ ಪರಿಚಯಿಸಿ ಸ್ವತಃ ಚರಕದಿಂದ ಬಟ್ಟೆ ನೇಯ್ದು ಬಳಸುತ್ತಿದ್ದರು. ಗಾಂಧೀಜಿಯ ಸರಳತೆ ಹಾಗೂ ಚಿಂತನೆ ಅನುಕರಣೀಯ’ ಎಂದು ಶ್ಲಾಘಿಸಿದರು.

‘ಕಾರ್ಯಕರ್ತರು ಗ್ರಾಮೀಣ ಪ್ರದೇಶದಲ್ಲಿ ಜಾಗೃತಿ ಅಭಿಯಾನ ನಡೆಸಿ ಪ್ಲಾಸ್ಟಿಕ್‌ ಬಳಕೆಯ ದುಷ್ಪರಿಣಾಮದ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು. ಮೋದಿಯವರು ಗ್ರಾಮೀಣ ಭಾಗದ ಕುಟುಂಬಗಳಿಗೆ ಅಡುಗೆ ಅನಿಲ ಸಂಪರ್ಕ ನೀಡಿದ್ದರಿಂದ ಸೌದೆಗೆ ಗಿಡ ಮರ ಬಳಕೆ ಕಡಿಮೆಯಾಗಿದೆ’ ಎಂದು ತಿಳಿಸಿದರು.

ಜೂನಿಯರ್ ಕಾಲೇಜು ಮೈದಾನದಿಂದ ಆರಂಭವಾದ ಪಾದಯಾತ್ರೆ ಕಾಲೇಜು ವೃತ್ತ, ಚಂಪಕ್ ವೃತ್ತ, ಎಂ.ಜಿ ರಸ್ತೆ, ಗಾಂಧಿವನ, ಗೌರಿಪೇಟೆ, ಕುರುಬರಪೇಟೆ ರಸ್ತೆ, ಇಟಿಸಿಎಂ ವೃತ್ತ, ಅಂಬೇಡ್ಕರ್ ವೃತ್ತ ಸೇರಿದಂತೆ ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಸಾಗಿತು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಪಿ.ವೆಂಕಟಮುನಿಯಪ್ಪ, ವಿಭಾಗ ಪ್ರಭಾರಿ ಗೀತಾ, ಸಹ ವಿಭಾಗ ಪ್ರಭಾರಿ ಶಿವಕುಮಾರ್, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಕಾಂತರಾಜ್, ಮಾಜಿ ಶಾಸಕರಾದ ವೈ.ಸಂಪಂಗಿ, ಎ.ನಾಗರಾಜ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್.ಬಿ.ಮುನಿವೆಂಕಟಪ್ಪ, ರಾಜ್ಯ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಓಂಶಕ್ತಿ ಚಲಪತಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT