ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಹಾಲು ಖರೀದಿ ದರ ಕಡಿತ, ಕೋಚಿಮುಲ್‌ ವಿರುದ್ಧ ರೈತ ಸಂಘ ಸದಸ್ಯರ ಆಕ್ರೋಶ

Last Updated 16 ಜುಲೈ 2020, 17:13 IST
ಅಕ್ಷರ ಗಾತ್ರ

ಕೋಲಾರ: ಹಾಲು ಖರೀದಿ ದರ ಕಡಿತಗೊಳಿಸಿರುವ ಕ್ರಮ ಖಂಡಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿ ಗುರುವಾರ ಕೋಚಿಮುಲ್‌ ಕೇಂದ್ರ ಕಚೇರಿ ಎದುರು ಧರಣಿ ನಡೆಸಿದರು.

‘ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಮೇಲ್ಮೈ ನೀರಿನ ಮೂಲವಿಲ್ಲ. ಬರ ಪರಿಸ್ಥಿತಿ ನಡುವೆಯೂ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ಹೈನೋದ್ಯಮ ನಿರ್ವಹಣೆ ಮಾಡುತ್ತಿದ್ದಾರೆ. ಕೋವಿಡ್‌–19 ಪರಿಸ್ಥಿತಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಕೋಚಿಮುಲ್‌ ಹಾಲು ಖರೀದಿ ದರದಲ್ಲಿ ಲೀಟರ್‌ಗೆ ₹ 2 ಕಡಿಮೆ ಮಾಡಿದೆ’ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.

‘ಕೃಷಿ ಪ್ರಧಾನ ಜಿಲ್ಲೆಯಲ್ಲಿ ಹೈನೋದ್ಯಮವು ರೈತರ ಬೆನ್ನೆಲುಬು. ರೈತರು ನಿರೀಕ್ಷೆಗೂ ಮೀರಿ ಹಾಲು ಉತ್ಪಾದನೆ ಮಾಡಿ ಒಕ್ಕೂಟಕ್ಕೆ ಪೂರೈಸುತ್ತಿದ್ದಾರೆ. ಆದರೆ, ಒಕ್ಕೂಟದ ಆಡಳಿತ ಮಂಡಳಿಯು ನಷ್ಟದ ಸಬೂಬು ಹೇಳಿ ಹಾಲು ಖರೀದಿ ದರ ಕಡಿತಗೊಳಿಸಿದೆ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ಅಸಮಾಧಾನ ವ್ಯಕ್ತಪಡಿಸಿದರು.

‘ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಸಮಸ್ಯೆಯಿದೆ. ಪಶು ಆಹಾರ ಹಾಗೂ ಮೇವಿನ ಬೆಲೆ ಗಗನಕ್ಕೇರಿದೆ. ಮೇವಿನ ಸಮಸ್ಯೆಯಿಂದಾಗಿ ಗುಣಮಟ್ಟದ ಹಾಲು ಪೂರೈಕೆಯಾಗುತ್ತಿಲ್ಲ. ಘನ ಕೊಬ್ಬಿನ ಅಂಶ (ಎಸ್‌ಎನ್‌ಎಫ್‌) ಆಧರಿಸಿ ಡೇರಿಗಳಲ್ಲಿ ಹಾಲು ಖರೀದಿ ದರ ಕಡಿಮೆ ಮಾಡಲಾಗುತ್ತಿದೆ’ ಎಂದು ಕಿಡಿಕಾರಿದರು.

ಆದಾಯ ಸೋರಿಕೆ: ‘ಒಂದು ಲೀಟರ್ ಹಾಲು ಉತ್ಪಾದನೆಗೆ ಅಂದಾಜು ₹ 35 ವೆಚ್ಚವಾಗುತ್ತಿದೆ. ಆದರೆ, ಒಕ್ಕೂಟವು ಉತ್ಪಾದನಾ ವೆಚ್ಚಕಿಂತಲೂ ಕಡಿಮೆ ದರಕ್ಕೆ ಹಾಲು ಖರೀದಿಸಿ ರೈತರನ್ನು ಶೋಷಿಸುತ್ತಿದೆ. ಮತ್ತೊಂದೆಡೆ ಒಕ್ಕೂಟದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಆದಾಯ ಸೋರಿಕೆಯಾಗುತ್ತಿದೆ’ ಎಂದು ಧರಣಿನಿರತರು ಆರೋಪಿಸಿದರು.

‘ದೇಶದ ಸಂಪತ್ತು ಲೂಟಿ ಮಾಡುವ ಲೂಟಿಕೋರರನ್ನು ಸರ್ಕಾರಗಳು ರಕ್ಷಿಸುತ್ತವೆ. ಆದರೆ, ದೇಶಕ್ಕೆ ಆರ್ಥಿಕ ಸಂಪನ್ಮೂಲ ಕಲ್ಪಿಸುವ ರೈತರು ಸಂಕಷ್ಟದ ಸ್ಥಿತಿಯಲ್ಲಿದ್ದರೂ ಸರ್ಕಾರಗಳು ನೆರವಿಗೆ ಧಾವಿಸುವುದಿಲ್ಲ. ಸರ್ಕಾರಗಳಿಗೆ ರೈತರ ಬಗ್ಗೆ ಸ್ವಲ್ಪವೂ ಕಾಳಜಿಯಿಲ್ಲ’ ಎಂದು ದೂರಿದರು.

ಏಕರೂಪ ದರ: ‘ದರ ಕಡಿತದ ಆದೇಶ ಹಿಂಪಡೆಯಬೇಕು. ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹಧನ ಬಿಡುಗಡೆ ಮಾಡಬೇಕು. ಪಶು ಆಹಾರದ ಬೆಲೆ ಕಡಿತಗೊಳಿಸಬೇಕು ಮತ್ತು ಖರೀದಿಗೆ ಸಬ್ಸಿಡಿ ನೀಡಬೇಕು. ರಾಜ್ಯದೆಲ್ಲೆಡೆ ಎಲ್ಲಾ ಒಕ್ಕೂಟಗಳಲ್ಲೂ ಹಾಲಿಗೆ ಏಕರೂಪ ಖರೀದಿ ದರ ನಿಗದಿಪಡಿಸಬೇಕು. ಹಾಲು ಉತ್ಪಾದನಾ ವೆಚ್ಚಕ್ಕೆ ತಕ್ಕಂತೆ ಖರೀದಿ ದರ ಹೆಚ್ಚಿಸಬೇಕು’ ಎಂದು ಒತ್ತಾಯಿಸಿದರು.

ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ್, ಸದಸ್ಯರಾದ ತಿಮ್ಮಣ್ಣ, ವೆಂಕಟೇಶಪ್ಪ, ಸುಪ್ರೀಂಚಲ, ಕೇಶವ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT