ಕೋಲಾರ: ‘ಪ್ರಧಾನಿ ನರೇಂದ್ರ ಮೋದಿ ಯಾವ ನಟರಿಗಿಂತ ಕಡಿಮೆ ಇಲ್ಲ. ಅವರನ್ನು ನೋಡಲು ಜನ ಮುಗಿಬೀಳುತ್ತಾರೆ, ಸಣ್ಣ ಹಳ್ಳಿಯ ಕೂಲಿಕಾರರಿಂದ ಹಿಡಿದು ಮಹಾನಗರದ ಜನರು ಇಷ್ಟಪಡುತ್ತಾರೆ. ಬಿಜೆಪಿ ಅಭ್ಯರ್ಥಿಗಳ ಪಾಲಿಗೆ ಟಾನಿಕ್ ಆಗಿದ್ದಾರೆ’ ಎಂದು ವಿಧಾನ ಪರಿಷತ್ ಸದಸ್ಯ ಬಿಜೆಪಿಯ ವೈ.ಎ.ನಾರಾಯಣಸ್ವಾಮಿ ಬಣ್ಣಿಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಮಾಧ್ಯಮ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ‘ಏ.30ರ ಭಾನುವಾರ ಬೆಳಿಗ್ಗೆ ಮೋದಿ ಕೋಲಾರದಲ್ಲಿ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ ಸುಮಾರು 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಇದೆ. ಸಿದ್ಧತೆ ಭರದಿಂದ ಸಾಗಿದೆ’ ಎಂದರು.