ಕೋಲಾರ: ‘ನಾನು ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ. ಎಲ್ಲವನ್ನೂ ವರಿಷ್ಠರು ತೀರ್ಮಾನಿಸುತ್ತಾರೆ. ಕಾಂಗ್ರೆಸ್ನ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಆದೇಶ ಪಾಲಿಸುವುದಷ್ಟೇ ನನ್ನ ಕೆಲಸ’ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಸ್ಪಷ್ಟಪಡಿಸಿದರು.
ಇಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿ, ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಜತೆ ಇತ್ತೀಚೆಗೆ ಮಾತುಕತೆ ನಡೆಸಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಬಲವರ್ಧನೆಗಾಗಿ ರಾಜ್ಯ ರಾಜಕಾರಣಕ್ಕೆ ಬರುವಂತೆ ಉಭಯ ನಾಯಕರು ನನಗೆ ಸಲಹೆ ನೀಡಿದ್ದಾರೆ’ ಎಂದರು.
‘ಕರ್ನಾಟಕದಲ್ಲಿ ಕಾಂಗ್ರೆಸ್ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ನಾನು ರಾಜ್ಯ ರಾಜಕಾರಣದತ್ತ ಗಮನ ಹರಿಸಬೇಕೆಂದು ಹಲವು ಮುಖಂಡರು ಹಾಗೂ ಕಾರ್ಯಕರ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸದ್ಯ ನಾನು ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯನಾಗಿದ್ದು, ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ತೀರ್ಮಾನ ಮಾಡಿಲ್ಲ’ ಎಂದು ಹೇಳಿದರು.