ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕಿನ ಮಹಾ ಸ್ಫೋಟ: ಸಾವಿನ ನಾಗಾಲೋಟ

Last Updated 18 ಮೇ 2021, 15:10 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ನಾಗಾಲೋಟ ಮುಂದುವರಿದಿದ್ದು, ಮಂಗಳವಾರ ಸೋಂಕಿನ ಮಹಾ ಸ್ಫೋಟವಾಗಿದೆ.

ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಕೋಲಾರ ಮತ್ತು ಮಾಲೂರು ತಾಲ್ಲೂಕಿನ ತಲಾ ಒಬ್ಬರು ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸೋಂಕಿತರ ಸಾವಿನ ಸಂಖ್ಯೆ 311ಕ್ಕೆ ಏರಿಕೆಯಾಗಿದೆ. ಮತ್ತೊಂದೆಡೆ ಸೋಂಕು ಹರಡುವಿಕೆಯು ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಹೊಸದಾಗಿ 1,021 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 274 ಮಂದಿಗೆ ಸೋಂಕು ತಗುಲಿದೆ. ಮಾಲೂರು ತಾಲ್ಲೂಕಿನ 153 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 181 ಮಂದಿಗೆ, ಕೆಜಿಎಫ್‌ ತಾಲ್ಲೂಕಿನ 230 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 70 ಮಂದಿಗೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ 113 ಮಂದಿಗೆ ಸೋಂಕು ಬಂದಿದೆ. ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 7,593ಕ್ಕೆ ಜಿಗಿದಿದೆ.

ಹೊಸದಾಗಿ ಪತ್ತೆಯಾದ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ಹೊಸದಾಗಿ ಪತ್ತೆಯಾಗುತ್ತಿರುವ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 173 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮಂಗಳವಾರ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ 67 ಮಂದಿ, ಮಾಲೂರು ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ 6 ಮಂದಿ, ಬಂಗಾರಪೇಟೆ ತಾಲ್ಲೂಕಿನ 13, ಕೆಜಿಎಫ್‌ ತಾಲ್ಲೂಕಿನ 62, ಶ್ರೀನಿವಾಸಪುರ ತಾಲ್ಲೂಕಿನ 19 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ಚೌಡದೇನಹಳ್ಳಿ ಸೀಲ್‌ಡೌನ್‌: ತಾಲ್ಲೂಕಿನ ಚೌಡದೇನಹಳ್ಳಿಯಲ್ಲಿ 10ಕ್ಕೂ ಹೆಚ್ಚು ಕೊರೊನಾ ಸೋಂಕಿನ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಗ್ರಾಮವನ್ನು ಮಂಗಳವಾರ ಕಂಟೈನ್‌ಮೆಂಟ್‌ ವಲಯವಾಗಿ ಘೋಷಿಸಿ ಸೀಲ್‌ಡೌನ್‌ ಮಾಡಿತು.

ಆರೋಗ್ಯ ಇಲಾಖೆ ಸಿಬ್ಬಂದಿಯು ಗ್ರಾಮದ 10 ಸೋಂಕಿತರ ಪೈಕಿ ೫ ಮಂದಿಯನ್ನು ಆಂಬುಲೆನ್ಸ್‌ನಲ್ಲಿ ಮಂಗಸಂದ್ರದ ಕೋವಿಡ್‌ ಆರೈಕೆ ಸ್ಥಳಾಂತರಿಸಿದರು. ಗ್ರಾಮಸ್ಥರಿಗೆ ಕೋವಿಡ್‌ ಪರೀಕ್ಷೆ ನಡೆಸಿದ್ದು, ಸೋಂಕಿತರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಯಿದೆ.

ಗ್ರಾಮಕ್ಕೆ ಭೇಟಿ ನೀಡಿದ ತಹಶೀಲ್ದಾರ್‌ ಶೋಭಿತಾ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸುವಂತೆ ಗ್ರಾಮದ ಮುಖಂಡರಿಗೆ ಸಲಹೆ ನೀಡಿದರು. ಸೋಂಕಿತರು ಸಂಪೂರ್ಣ ಗುಣಮುಖರಾಗುವವರೆಗೂ ಮನೆಯಿಂದ ಹೊರಬಾರದು ಎಂದು ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT