ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರದಲ್ಲಿ ಮುಂದುವರಿದ ಭಾಗಶಃ ಲಾಕ್‌ಡೌನ್‌

ತೆರೆಯದ ಅಂಗಡಿಗಳು: ಹೋಟೆಲ್‌ಗಳಲ್ಲಿ ಪಾರ್ಸಲ್‌ ಸೇವೆ
Last Updated 23 ಏಪ್ರಿಲ್ 2021, 14:22 IST
ಅಕ್ಷರ ಗಾತ್ರ

ಕೋಲಾರ: ಕೋವಿಡ್‌ ಎರಡನೇ ಅಲೆ ಆರ್ಭಟದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಶುಕ್ರವಾರ ಸಹ ಭಾಗಶಃ ಲಾಕ್‌ಡೌನ್‌ ಮುಂದುವರಿಸಲಾಯಿತು.

ಪೊಲೀಸರ ಎಚ್ಚರಿಕೆ ಹಿನ್ನೆಲೆಯಲ್ಲಿ ಬಹುಪಾಲು ವರ್ತಕರು ಶುಕ್ರವಾರ ಮಳಿಗೆ ತೆರೆಯುವ ಧೈರ್ಯ ಮಾಡಲಿಲ್ಲ. ಬೆರಳೆಣಿಕೆ ವ್ಯಾಪಾರಿಗಳು ಕದ್ದುಮುಚ್ಚಿ ಅಂಗಡಿ ಬಾಗಿಲು ತೆರೆದು ವಹಿವಾಟು ನಡೆಸಿದರು. ಆಹಾರ ಪದಾರ್ಥಗಳು, ಹಾಲು, ಹಣ್ಣು, ತರಕಾರಿ, ಔಷಧ ಸೇರಿದಂತೆ ಅಗತ್ಯ ವಸ್ತುಗಳ ಮಾರಾಟ ಮಳಿಗೆಗಳು ಪ್ರತಿನಿತ್ಯದಂತೆ ತೆರೆದಿದ್ದವು.

ರೇಷ್ಮೆ ಮಾರುಕಟ್ಟೆ ಮತ್ತು ಎಪಿಎಂಸಿಗಳಲ್ಲಿ ಅಡೆತಡೆಯಿಲ್ಲದೆ ವಹಿವಾಟು ನಡೆಯಿತು. ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ಗಳು, ಆಟೊಗಳು, ಸರಕು ಸಾಗಣೆ ವಾಹನಗಳು ಸೇವೆ ಒದಗಿಸಿದವು. ಆದರೆ, ಸಾಮಾನ್ಯ ದಿನಗಳಿಗೆ ಹೋಲಿಸಿದರೆ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ತುಂಬಾ ಕಡಿಮೆಯಿತ್ತು.

ಕೃಷಿ ಚಟುವಟಿಕೆಗೆ ಸಂಬಂಧಿಸಿದ ಗೊಬ್ಬರ, ಕೀಟನಾಶಕ ಸೇರಿದಂತೆ ಕೃಷಿ ಉಪಕರಣ ಮಾರಾಟ ಮಳಿಗೆಗಳಿಗೆ ವಿನಾಯಿತಿ ನೀಡಲಾಯಿತು. ಬಟ್ಟೆ, ಚಿನ್ನಾಭರಣ, ಸ್ಟೇಷನರಿ, ಮೊಬೈಲ್‌ ಮಾರಾಟ ಮಳಿಗೆಗಳು, ಬೈಕ್‌ ಮತ್ತು ಕಾರು ಶೋರೂಂಗಳು ಸಂಪೂರ್ಣ ಬಂದ್‌ ಆಗಿದ್ದವು. ಬ್ಯಾಂಕ್‌ ಸೇರಿದಂತೆ ಸರ್ಕಾರಿ ಕಚೇರಿಗಳಲ್ಲಿ ಜನರ ಮತ್ತು ಸಿಬ್ಬಂದಿಯ ಸಂಖ್ಯೆ ಕಡಿಮೆಯಿತ್ತು.

ಪೆಟ್ರೋಲ್‌ ಬಂಕ್‌ಗಳು ತೆರೆದರೂ ಗ್ರಾಹಕರ ಸಂಖ್ಯೆ ತೀರಾ ಕಡಿಮೆಯಿತ್ತು. ಬೆರಳೆಣಿಕೆ ಜನರು ಬೈಕ್‌, ಕಾರು ಸೇರಿದಂತೆ ಸ್ವಂತ ವಾಹನಗಳಲ್ಲಿ ಓಡಾಡುತ್ತಿದ್ದ ದೃಶ್ಯ ಕಂಡುಬಂತು. ಸದಾ ಜನಜಂಗುಳಿ, ವಾಹನ ದಟ್ಟಣೆಯಿಂದ ಗಿಜಿಗುಡುತ್ತಿದ್ದ ವಾಣಿಜ್ಯ ಪ್ರದೇಶಗಳು, ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ವಾಹನಗಳ ಮತ್ತು ಜನರ ಓಡಾಟ ಕಡಿಮೆಯಿತ್ತು. ಹೋಟೆಲ್‌ ಮತ್ತು ಮದ್ಯದಂಗಡಿಗಳಲ್ಲಿ ಪಾರ್ಸಲ್‌ಗೆ ಮಾತ್ರ ಅವಕಾಶ ನೀಡಲಾಯಿತು.

ಚರ್ಚ್‌, ಮಸೀದಿ ಸೇರಿದಂತೆ ಎಲ್ಲಾ ಧಾರ್ಮಿಕ ಸ್ಥಳಗಳಲ್ಲಿ ಜನರಿಗೆ ಪ್ರವೇಶ ನಿರ್ಬಂಧಿಸಲಾಯಿತು. ಎಲ್ಲೆಡೆ ಪೊಲೀಸ್ ಗಸ್ತು ಹೆಚ್ಚಿಸಲಾಗಿತ್ತು. ಆಯಕಟ್ಟಿನ ಸ್ಥಳಗಳು, ವಾಣಿಜ್ಯ ಪ್ರದೇಶಗಳು, ಧಾರ್ಮಿಕ ಕೇಂದ್ರಗಳ ಸುತ್ತಮುತ್ತ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿತ್ತು. ಹಿರಿಯ ಪೊಲೀಸ್‌ ಅಧಿಕಾರಿಗಳು ನಿಯಮಿತವಾಗಿ ಗಸ್ತು ನಡೆಸಿದರು.

ಆಟಕ್ಕುಂಟು ಲೆಕ್ಕಕ್ಕಿಲ್ಲ: ಎಪಿಎಂಸಿಗಳಲ್ಲಿ ಹಾಗೂ ಮಾರುಕಟ್ಟೆಗಳಲ್ಲಿ ಕೋವಿಡ್‌ ಸುರಕ್ಷತಾ ಮಾರ್ಗಸೂಚಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬ ಪರಿಸ್ಥಿತಿಯಿತ್ತು. ಎಪಿಎಂಸಿ ಮಂಡಿಗಳು ರೈತರು, ದಲ್ಲಾಳಿಗಳಿಂದ ತುಂಬಿ ಹೋಗಿದ್ದವು. ಎಪಿಎಂಸಿಗಳಲ್ಲಿ ಬಹುಪಾಲು ರೈತರು, ಮಂಡಿ ಮಾಲೀಕರು, ವರ್ತಕರು ಹಾಗೂ ದಲ್ಲಾಳಿಗಳು ಮಾಸ್ಕ್‌ ಧರಿಸಿರಲಿಲ್ಲ. ಮತ್ತೊಂದೆಡೆ ಅಂತರ ಕಾಯ್ದುಕೊಳ್ಳದೆ ವಹಿವಾಟು ನಡೆಸುತ್ತಿದ್ದ ದೃಶ್ಯ ಕಂಡುಬಂತು.

ಎಪಿಎಂಸಿ ಅಧಿಕಾರಿಗಳು ಧ್ವನಿವರ್ಧಕದ ಮೂಲಕ ಎಚ್ಚರಿಕೆ ಸಂದೇಶ ನೀಡಿದರೂ ರೈತರು, ವರ್ತಕರು ಕೋವಿಡ್‌ ಮಾರ್ಗಸೂಚಿ ಪಾಲಿಸದೆ ನಿರ್ಲಕ್ಷ್ಯ ತೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT