ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರ ಆರೋಪಿಗೆ ಪೊಲೀಸರ ಗುಂಡೇಟು

ಬಾಲಕಿ ಮೇಲೆ ಅತ್ಯಾಚಾರ: ಕಲ್ಲು ತೂರಿ ಪರಾರಿಯಾಗಲು ಯತ್ನ
Last Updated 11 ಅಕ್ಟೋಬರ್ 2019, 13:47 IST
ಅಕ್ಷರ ಗಾತ್ರ

ಕೆಜಿಎಫ್: ಪೊಲೀಸರ ಮೇಲೆ ಕಲ್ಲು ತೂರಿ ಪರಾರಿಯಾಗಲೆತ್ನಿಸಿದ ಅತ್ಯಾಚಾರ ಪ್ರಕರಣದ ಆರೋಪಿ ಕುಟ್ಟಿ ಉರುಫ್‌ ತಮಿಳರಸನ್‌ (26) ಎಂಬಾತನ ಮೇಲೆ ರಾಬರ್ಟ್‌ಸನ್‌ಪೇಟೆ ಠಾಣೆ ಇನ್‌ಸ್ಪೆಕ್ಟರ್‌ ಸೂರ್ಯಪ್ರಕಾಶ್‌ ಶುಕ್ರವಾರ ಗುಂಡು ಹಾರಿಸಿ ಬಂಧಿಸಿದ್ದಾರೆ.

ನಗರದ ಊರಿಗಾಂಪೇಟೆ ಬಳಿಯ ಜನತಾ ಕಾಲೊನಿ ನಿವಾಸಿಯಾದ ತಮಿಳರಸನ್‌ ತನ್ನ ಪಕ್ಕದ ಮನೆಯ 8 ವರ್ಷದ ಬಾಲಕಿ ಮೇಲೆ ಗುರುವಾರ ರಾತ್ರಿ ಅತ್ಯಾಚಾರ ಎಸಗಿದ್ದ.

ಪೋಷಕರು ರಾತ್ರಿ ಬಾಲಕಿಯನ್ನು ಮನೆಯಲ್ಲಿ ಬಿಟ್ಟು ಹೊರಗೆ ಹೋಗಿದ್ದರು. ಆಗ ಏಕಾಏಕಿ ಮನೆಗೆ ನುಗ್ಗಿದ ಆರೋಪಿಯು ಬಾಲಕಿಯ ಬಾಯಿಗೆ ಬಟ್ಟೆ ತುರುಕಿ, ಕೈಗಳನ್ನು ಕಟ್ಟಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದ. ಬಾಲಕಿಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ತಾಯಿಯು ಶುಕ್ರವಾರ ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ಮಾಡಿಸಿದಾಗ ಅತ್ಯಾಚಾರದ ಸಂಗತಿ ಗೊತ್ತಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಯಿಯು ಬಾಲಕಿಯನ್ನು ವಿಚಾರಿಸಿದಾಗ ತಮಿಳರಸನ್‌ ಬಗ್ಗೆ ಮಾಹಿತಿ ನೀಡಿದ್ದಾಳೆ. ಈ ಮಾಹಿತಿ ಆಧರಿಸಿ ಬಾಲಕಿಯ ತಾಯಿ ಠಾಣೆಗೆ ದೂರು ನೀಡಿದರು. ನಂತರ ಸಿಬ್ಬಂದಿಯು ಆರೋಪಿಗಾಗಿ ಶೋಧ ನಡೆಸುತ್ತಿದ್ದಾಗ ಆತ ಜನತಾ ಕಾಲೊನಿ ಸಮೀಪದ ಯರನಾಗನಹಳ್ಳಿ– ಪೆದ್ದಪಲ್ಲಿ ರಸ್ತೆಯಲ್ಲಿ ಇರುವುದು ಗೊತ್ತಾಯಿತು. ಇನ್‌ಸ್ಪೆಕ್ಟರ್‌ ನೇತೃತ್ವದಲ್ಲಿ ಅಲ್ಲಿಗೆ ಹೋದ ಸಿಬ್ಬಂದಿಯು ಆತನನ್ನು ಬಂಧಿಸಲು ಮುಂದಾಗಿದ್ದಾರೆ. ಆಗ ಆರೋಪಿಯು ಸಿಬ್ಬಂದಿ ಮೇಲೆ ಕಲ್ಲು ತೂರಿದ್ದಾನೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.

ಘಟನೆಯಲ್ಲಿ ಕಾನ್‌ಸ್ಟೆಬಲ್‌ ಮುನಿಸ್ವಾಮಿ ಅವರ ಕೈಗೆ ಪೆಟ್ಟಾಗಿದೆ. ಆಗ ಇನ್‌ಸ್ಪೆಕ್ಟರ್‌ ಸೂರ್ಯಪ್ರಕಾಶ್‌ ಸರ್ವಿಸ್‌ ಪಿಸ್ತೂಲ್‌ನಿಂದ ಆರೋಪಿ ಮೇಲೆ 2 ಸುತ್ತು ಗುಂಡು ಹಾರಿಸಿದ್ದಾರೆ. ಇದರಲ್ಲಿ ಒಂದು ಗುಂಡು ತಮಿಳರಸನ್‌ನ ಬಲಗಾಲಿಗೆ ತಗುಲಿದ್ದರಿಂದ ಆತ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಸಿಬ್ಬಂದಿಯು ಆತನನ್ನು ಬಂಧಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮುನಿಸ್ವಾಮಿ ಅವರಿಗೆ ಚಿಕಿತ್ಸೆ ಕೊಡಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯು ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ. ಮಕ್ಕಳ ವಿರುದ್ಧದ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಹಾಗೂ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ತಮಿಳರಸನ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT