ಕೋಲಾರ: ಖಾಸಗಿ ಡೇರಿಗಳ ಹಾವಳಿಗೆ ಕಡಿವಾಣ ಹಾಕಿ ಹೈನೋದ್ಯಮ ಉಳಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿ ಬುಧವಾರ ಧರಣಿ ನಡೆಸಿದರು.
‘ಕೋಚಿಮುಲ್ ವ್ಯಾಪ್ತಿಯ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹಾಲು ಸಂಗ್ರಹಣೆ ಪ್ರಮಾಣ ಗಣನೀಯವಾಗಿ ಕುಸಿದಿದೆ. ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ಕೋಚಿಮುಲ್ನಲ್ಲಿ ಅಕ್ರಮ ನಡೆಯುತ್ತಿದ್ದು, ಹೈನೋದ್ಯಮ ಸಂಕಷ್ಟ ಸಿಲುಕಿದೆ’ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.
‘ಜಿಲ್ಲೆಯ ರೈತರು ಕೃಷಿಯ ಜತೆ ಉಪ ಕಸುಬಾಗಿ ಹೈನೋದ್ಯಮ ನಿರ್ವಹಣೆ ಮಾಡುತ್ತಿದ್ದಾರೆ. ಹೈನೋದ್ಯಮವು ರೈತರ ಜೀವನಾಡಿಯಾಗಿದೆ. ಮೇವು ಹಾಗೂ ನೀರಿನ ಸಮಸ್ಯೆ ನಡುವೆಯೂ ರೈತರು ರಾಸುಗಳನ್ನು ಸಾಕಿ ಬದುಕು ಸಾಗಿಸುತ್ತಿದ್ದಾರೆ. ಆದರೆ, ಹಾಲು ಉತ್ಪಾದನೆ ಕುಸಿತದಿಂದ ರೈತರಿಗೆ ದಿಕ್ಕು ತೋಚದಂತಾಗಿದೆ’ ಎಂದು ಸಂಘಟನೆ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ಹೇಳಿದರು.
‘ಜಿಲ್ಲೆಯಲ್ಲಿ ಹೈನೋದ್ಯಮ ಕ್ಷೀಣಿಸುತ್ತಿದೆ. ದಿನಕ್ಕೆ 11 ಲಕ್ಷವಿದ್ದ ಹಾಲು ಉತ್ಪಾದನೆ ಪ್ರಮಾಣ 7 ಲಕ್ಷಕ್ಕೆ ಕುಸಿದಿದೆ. ಕೋಚಿಮುಲ್ ಬೇಜವಾಬ್ದಾರಿಯೇ ಇದಕ್ಕೆ ಕಾರಣ. ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗಿದೆ. ಪಶು ಆಹಾರ ಹಾಗೂ ಮೇವಿನ ಬೆಲೆ ಗಗನಕ್ಕೇರಿದೆ. ಘನ ಕೊಬ್ಬಿನ ಅಂಶ (ಎಸ್ಎನ್ಎಫ್) ಆಧರಿಸಿ ಡೇರಿಗಳಲ್ಲಿ ಹಾಲು ಖರೀದಿ ದರ ಕಡಿಮೆ ಮಾಡಲಾಗುತ್ತಿದೆ’ ಎಂದು ಕಿಡಿಕಾರಿದರು.
ಆದಾಯ ಸೋರಿಕೆ: ‘ಒಂದು ಲೀಟರ್ ಹಾಲು ಉತ್ಪಾದನೆಗೆ ಅಂದಾಜು ₹ 35 ವೆಚ್ಚವಾಗುತ್ತಿದೆ. ಆದರೆ, ಒಕ್ಕೂಟವು ಉತ್ಪಾದನಾ ವೆಚ್ಚಕಿಂತಲೂ ಕಡಿಮೆ ದರಕ್ಕೆ ಹಾಲು ಖರೀದಿಸಿ ರೈತರನ್ನು ಶೋಷಿಸುತ್ತಿದೆ. ಮತ್ತೊಂದೆಡೆ ಒಕ್ಕೂಟದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಆದಾಯ ಸೋರಿಕೆಯಾಗುತ್ತಿದೆ’ ಎಂದು ಧರಣಿನಿರತರು ದೂರಿದರು.
‘ಕೋಚಿಮುಲ್ ಆಡಳಿತ ಮಂಡಳಿ ಹಾಗೂ ಅಧಿಕಾರಿ ವರ್ಗದಿಂದ ನ್ಯಾಯ ಸಿಗದ ಕಾರಣ ರೈತರು ನಂಬಿಕೆ ಕಳೆದುಕೊಂಡು ಖಾಸಗಿ ಡೇರಿಗಳತ್ತ ಮುಖ ಮಾಡಿದ್ದಾರೆ. ಹಾಲು ಉತ್ಪಾದಕರ ಸಹಕಾರ ಸಂಘಗಳು ಮುಚ್ಚುವ ಹಂತ ತಲುಪಿವೆ. ಹೈನೋದ್ಯಮ ಸಂಕಷ್ಟ ಎದುರಿಸುತ್ತಿದ್ದರೂ ಸರ್ಕಾರ ರೈತರ ನೆರವಿಗೆ ಧಾವಿಸಿಲ್ಲ. ಕೋಚಿಮುಲ್ ಆಡಳಿತ ಮಂಡಳಿಗೆ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳಿಗೆ ರೈತರ ಬಗ್ಗೆ ಸ್ವಲ್ಪವೂ ಕಾಳಜಿಯಿಲ್ಲ’ ಎಂದು ಆರೋಪಿಸಿದರು.
ಏಕರೂಪ ದರ: ‘ಖಾಸಗಿ ಡೇರಿಗಳತ್ತ ಮುಖ ಮಾಡದಂತೆ ರೈತರಿಗೆ ಕರಪತ್ರದ ಮೂಲಕ ಜಾಗೃತಿ ಮೂಡಿಸಿ ಹೈನೋದ್ಯಮ ಉಳಿಸಬೇಕು. ಬೇಸಿಗೆ ಮುಗಿಯುವವರೆಗೆ ಉಚಿತವಾಗಿ ಮೇವು ಮತ್ತು ಪಶು ಆಹಾರ ನೀಡಬೇಕು. ಹಾಲು ಉತ್ಪಾದನಾ ವೆಚ್ಚಕ್ಕೆ ತಕ್ಕಂತೆ ಖರೀದಿ ದರ ಹೆಚ್ಚಿಸಬೇಕು. ರಾಜ್ಯದೆಲ್ಲೆಡೆ ಎಲ್ಲಾ ಒಕ್ಕೂಟಗಳಲ್ಲೂ ಹಾಲಿಗೆ ಏಕರೂಪ ಖರೀದಿ ದರ ನಿಗದಿಪಡಿಸಬೇಕು’ ಎಂದು ಒತ್ತಾಯಿಸಿದರು.
ಸಂಘಟನೆಯ ಜಿಲ್ಲಾ ಘಟಕದ ಸಂಚಾಲಕ ಕೆ.ಶ್ರೀನಿವಾಸಗೌಡ, ಮಹಿಳಾ ಘಟಕದ ಎ.ನಳಿನಿ, ಸದಸ್ಯರಾದ ಸಹದೇವಣ್ಣ, ವೆಂಕಟೇಶಪ್ಪ, ಹನುಮಯ್ಯ, ನಾಗೇಶ್, ತಿಮ್ಮಣ್ಣ, ಮಂಜುನಾಥ್ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.