ಕೋಲಾರ: ಭಾರತೀಯ ಜೀವ ವಿಮಾ ನಿಗಮ (ಎಲ್ಐಸಿ) ಖಾಸಗೀಕರಣಗೊಳಿಸದಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿ ಗುರುವಾರ ಎಲ್ಐಸಿ ಕಚೇರಿ ಎದುರು ಧರಣಿ ನಡೆಸಿದರು.
‘ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎಲ್ಐಸಿ ಖಾಸಗೀಕರಣಗೊಳಿಸುವುದಾಗಿ ಬಜೆಟ್ನಲ್ಲಿ ಘೋಷಿಸಿದ್ದಾರೆ. ಕೇಂದ್ರವು ವಿಮೆದಾರರ ಜೀವನದ ಜತೆ ಚೆಲ್ಲಾಟವಾಡುತ್ತಿದೆ’ ಎಂದು ಧರಣಿನಿರತರು ಕೇಂದ್ರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
‘ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರದ ಬಜೆಟ್ ಮಂಡಿಸುವಾಗ ಎಲ್ಐಸಿಯನ್ನು ಷೇರು ಬಂಡವಾಳ ಮಾರುಕಟ್ಟೆಯಲ್ಲಿ ನೋಂದಾಯಿಸಿ ಸ್ವಲ್ಪ ಪ್ರಮಾಣದ ಷೇರುಗಳನ್ನು ಖಾಸಗಿ ಕಂಪನಿಗಳಿಗೆ ಮಾರಾಟ ಮಾಡಿ ಬರುವ ಹಣದಿಂದ ವಿತ್ತಿಯ ಕೊರತೆ ಸರಿದೂಗಿಸುವುದಾಗಿ ಹೇಳಿದ್ದಾರೆ. ಎಲ್ಐಸಿಯನ್ನು ಹಂತ ಹಂತವಾಗಿ ಖಾಸಗೀಕರಣಗೊಳಿಸುವ ಹುನ್ನಾರ ನಡೆದಿದೆ’ ಎಂದು ಸಂಘಟನೆ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ದೂಡಿದರು.
‘ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ಅವೈಜ್ಞಾನಿಕ ಆರ್ಥಿಕ ನೀತಿಗಳಿಂದ ದೇಶದ ಅರ್ಥ ವ್ಯವಸ್ಥೆ ಬುಡಮೇಲಾಗಿದೆ. ನೋಟು ಅಮಾನ್ಯೀಕರಣ, ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಜಾರಿಯಿಂದ ದೇಶದ ಆರ್ಥಿಕ ವೃದ್ಧಿ ದರ (ಜಿಡಿಪಿ) ಪಾತಾಳಕ್ಕೆ ಕುಸಿದಿದೆ. ಸರ್ಕಾರದ ಬಳಿ ಹಣವಿಲ್ಲ. ಹೀಗಾಗಿ ಎಲ್ಐಸಿ ಷೇರು ಮಾರಾಟ ಮಾಡಿ ಅದರಿಂದ ಬರುವ ಹಣದಲ್ಲಿ ಮಾಡುವ ಸರ್ಕಾರ ನಡೆಸುವ ದುರಾಲೋಚನೆ ಮಾಡಿದೆ’ ಎಂದು ಟೀಕಿಸಿದರು.
ಜೀವನೋಪಾಯಕ್ಕೆ ಸಂಚಕಾರ: ‘ಎಲ್ಐಸಿಯಲ್ಲಿ 1.20 ಲಕ್ಷ ನೌಕರರು, 12 ಲಕ್ಷ ಮಂದಿ ಪ್ರತಿನಿಧಿಗಳು ಹಾಗೂ 30 ಕೋಟಿ ಪಾಲಿಸಿದಾರರು ಇದ್ದಾರೆ. ಕೇಂದ್ರವು ಈ ನೌಕರರು ಹಾಗೂ ಪಾಲಿಸಿದಾರರ ಜೀವನೋಪಾಯಕ್ಕೆ ಸಂಚಕಾರ ತರಲು ಹೊರಟಿದೆ. ಕೇಂದ್ರವು ಬಂಡವಾಳಶಾಹಿಗಳು ಹಾಗೂ ಬಹುರಾಷ್ಟ್ರೀಯ ಕಂಪನಿಗಳ ಪರವಾದ ಧೋರಣೆ ಅನುಸರಿಸುತ್ತಿದೆ’ ಎಂದು ಧರಣಿನಿರತರು ಕಿಡಿಕಾರಿದರು.
‘ಕೇಂದ್ರದ ಆರ್ಥಿಕ ನೀತಿಗಳು ಬ್ರಿಟೀಷರ ಕಾಲದ ಗುಲಾಮಗಿರಿ ನೆನಪಿಸುತ್ತಿವೆ. ಕೇಂದ್ರವು ಈಗಾಗಲೇ ಶಿಕ್ಷಣ, ಆರೋಗ್ಯ, ಕೃಷಿ ಕ್ಷೇತ್ರಗಳನ್ನು ಖಾಸಗೀಕರಣಗೊಳಿಸಿ ದೇಶದಲ್ಲಿ ಅರಾಜಕತೆ ಸೃಷ್ಟಿಸಿದೆ. ವಿಮಾ ಕ್ಷೇತ್ರದ ದೈತ್ಯ ಸಂಸ್ಥೆ ಹಾಗೂ ಕೋಟ್ಯಂತರ ಗ್ರಾಹಕರ ಜೀವನಾಡಿಯಾಗಿರುವ ಎಲ್ಐಸಿಯನ್ನು ಖಾಸಗೀಕರಣಗೊಳಿಸುವ ನಿರ್ಧಾರ ಕೈಬಿಡಬೇಕು. ಇಲ್ಲವಾದರೆ ತೀವ್ರ ಹೋರಾಟ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.
ರೈತ ಸಂಘ ಜಿಲ್ಲಾ ಘಟಕದ ಸಂಚಾಲಕ ಕೆ.ಶ್ರೀನಿವಾಸಗೌಡ, ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿ, ಕೋಲಾರ ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ್, ಶ್ರೀನಿವಾಸಪುರ ತಾಲ್ಲೂಕು ಘಟಕದ ಆಂಜಿನಪ್ಪ, ಸದಸ್ಯರಾದ ನಾಗೇಶ್, ರವಿ, ಕಿರಣ್, ಸುಧಾಕರ್, ಹರೀಶ್, ದನುಷ್, ಶಿವ, ಹನುಮಯ್ಯ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.