ಕೋಲಾರ: ಸುರಕ್ಷತೆ ದೃಷ್ಟಿಯಿಂದ ಕೃಷಿ ಹೊಂಡ ಹಾಗೂ ಚೆಕ್ಡ್ಯಾಂಗಳಲ್ಲಿ ಗೌರಿ–ಗಣೇಶ ಮೂರ್ತಿ ವಿಸರ್ಜನೆ ಮಾಡದಂತೆ ಆದೇಶ ಹೊರಡಿಸಬೇಕೆಂದು ರೈತ ಸಂಘದ ಸದಸ್ಯರು ಇಲ್ಲಿ ಬುಧವಾರ ಕೃಷಿ ಇಲಾಖೆ ಅಧಿಕಾರಿಗಳಿಗೆ ಪರಿಸರಸ್ನೇಹಿ ಗಣೇಶ ಮೂರ್ತಿಯೊಂದಿಗೆ ಮನವಿ ಸಲ್ಲಿಸಿದರು.
‘ಕೃಷಿ ಹೊಂಡಗಳ ಸುತ್ತ ಕಡ್ಡಾಯವಾಗಿ ತಂತಿ ಬೇಲಿ ಅಳವಡಿಸಬೇಕೆಂದು ಸರ್ಕಾರದ ಆದೇಶವಿದೆ. ಆದರೂ ಜಿಲ್ಲೆಯಲ್ಲಿ ಬಹುಪಾಲು ಕೃಷಿ ಹೊಂಡಗಳ ಸುತ್ತ ತಂತಿ ಬೇಲಿ ಹಾಕಿಲ್ಲ. ಕೃಷಿ ಹೊಂಡಗಳಲ್ಲಿ ಈಜಲು, ನೀರು ಕುಡಿಯಲು ಹೋಗಿ ಸಾಕಷ್ಟು ಮಂದಿ ಮೃತಪಟ್ಟಿದ್ದಾರೆ. ಜಾನುವಾರು ಸಹ ಮೃತಪಟ್ಟಿವೆ’ ಎಂದು ಸಂಘಟನೆ ಸದಸ್ಯರು ಹೇಳಿದರು.
‘ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿರುವುದರಿಂದ ಕೃಷಿ ಹೊಂಡ ಹಾಗೂ ಚೆಕ್ಡ್ಯಾಂಗಳು ಭರ್ತಿಯಾಗಿವೆ. ಕೃಷಿ ಹೊಂಡಗಳ ಬಳಿ ಸುರಕ್ಷತಾ ಕ್ರಮ ಕೈಗೊಳ್ಳದ ಕಾರಣ ಮೂರ್ತಿ ವಿಸರ್ಜನೆ ವೇಳೆ ಪ್ರಾಣಾಪಾಯ ಸಂಭವಿಸುವ ಸಾಧ್ಯತೆ ಹೆಚ್ಚು. ಆದ ಕಾರಣ ಕೃಷಿ ಹೊಂಡದಲ್ಲಿ ಮೂರ್ತಿ ವಿಸರ್ಜನೆಗೆ ಅವಕಾಶ ಕೊಡಬಾರದು’ ಎಂದು ಸಂಘಟನೆ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ಮನವಿ ಮಾಡಿದರು.
‘ಕೊರೊನಾ ಸೋಂಕಿನ ಕಾರಣಕ್ಕೆ ನಗರ ಪ್ರದೇಶದಿಂದ ಸಾಕಷ್ಟು ಮಂದಿ ಗ್ರಾಮೀಣ ಭಾಗಕ್ಕೆ ವಲಸೆ ಬಂದಿದ್ದು, ಈ ಬಾರಿ ಗೌರ–ಗಣೇಶ ಹಬ್ಬದ ಆಚರಣೆ ಜೋರಾಗಿರುತ್ತದೆ. ಇದರಿಂದ ಮೂರ್ತಿ ವಿಸರ್ಜನೆ ವೇಳೆ ಅಪಾಯದ ಸಾಧ್ಯತೆಯೂ ಹೆಚ್ಚು’ ಎಂದು ಹೇಳಿದರು.
ಕರಪತ್ರ ಹೊರಡಿಸಿ: ‘ಕೃಷಿ ಹೊಂಡ ಹಾಗೂ ಚೆಕ್ಡ್ಯಾಂಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮಾಡದಂತೆ ಇಲಾಖೆಯಿಂದ ಕರಪತ್ರ ಹೊರಡಿಸಿ ಜಾಗೃತಿ ಮೂಡಿಸಬೇಕು. ಮೂರ್ತಿ ವಿಸರ್ಜನೆ ವೇಳೆ ಯಾವುದೇ ಅನಾಹುತ ಸಂಭವಿಸಿದರೆ ಅದಕ್ಕೆ ಮಾಲೀಕರನ್ನೇ ಹೊಣೆಗಾರರನ್ನಾಗಿಸಿ ಶಿಸ್ತುಕ್ರಮ ಜರುಗಿಸಬೇಕು’ ಎಂದು ಸಂಘಟನೆ ಸದಸ್ಯರು ಕೋರಿದರು.
ಮನವಿ ಸ್ವೀಕರಿಸಿದ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜ್, ‘ಗಣೇಶ ಮೂರ್ತಿ ವಿಸರ್ಜನೆ ವೇಳೆ ಕೃಷಿ ಹೊಂಡ, ಕೆರೆ, ಕುಂಟೆ, ಚೆಕ್ಡ್ಯಾಂಗಳಲ್ಲಿ ಮಕ್ಕಳ ಬಗ್ಗೆ ಜಾಗೃತಿ ವಹಿಸುವಂತೆ ಮಾಧ್ಯಮಗಳ ಮೂಲಕ ಪ್ರಕಟಣೆ ನೀಡಲಾಗುತ್ತದೆ. ಜತೆಗೆ ಕರಪತ್ರ ಹಂಚಿ ಜಾಗೃತಿ ಮೂಡಿಸುತ್ತೇವೆ’ ಎಂದು ಭರವಸೆ ನೀಡಿದರು.
ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿಗೌಡ, ತಾಲ್ಲೂಕು ಘಟಕದ ಅಧ್ಯಕ್ಷ ಇ.ಮಂಜುನಾಥ್, ಸದಸ್ಯರಾದ ನಾಗೇಶ್, ಹರೀಶ್, ಮುನಿಯಪ್ಪ, ಯಲ್ಲಪ್ಪ ಹಾಜರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.