ಮಾಲೂರು: ತಾಲ್ಲೂಕಿನ 26 ಕೆರೆಗಳಿಗೆ ನೀರು ಹರಿಸುವ ಸರ್ಕಾರದ ಕೆ.ಸಿ ವ್ಯಾಲಿ ಯೋಜನೆ ಸ್ಥಗಿತಗೊಂಡಿದ್ದು, ಜಿಲ್ಲಾಡಳಿತ ಕೂಡಲೇ ಕೆರೆಗಳಿಗೆ ನೀರು ಹರಿಸಬೇಕೆಂದು ಒತ್ತಾಯಿಸಿ ಜನ ಜಾಗೃತಿ ವೇದಿಕೆ ತಾಲ್ಲೂಕು ಘಟಕ ಕಾರ್ಯಕರ್ತರು ಪಟ್ಟಣದ ತಾಲ್ಲೂಕು ಕಚೇರಿ ಎದುರು ಸೋಮವಾರ ಧರಣಿ ನಡೆಸಿ ತಹಶೀಲ್ದಾರ್ ಮುನಿರಾಜು ಅವರಿಗೆ ಮನವಿ ಸಲ್ಲಿಸಿದರು.
ಜನ ಜಾಗೃತಿ ವೇದಿಕೆಯ ಸಂಚಾಲಕ ತ್ಯಾವನಹಳ್ಳಿ ಡಾ.ಗೊಪಾಲ್ ಗೌಡ ಮಾತನಾಡಿ, ಕೋಲಾರ ಜಿಲ್ಲೆಯ ಕೆರೆಗಳಿಗೆ ಬೆಂಗಳೂರಿನ ಕೊಳಚೆ ನೀರು ತುಂಬಿಸುವ ಉದ್ದೇಶದಿಂದ ಸರ್ಕಾರ ₹1400 ಕೋಟಿ ವೆಚ್ಚದಲ್ಲಿ ಕೆಸಿ ವ್ಯಾಲಿ ಯೋಜನೆಯನ್ನು ಜಾರಿಗೆ ತಂದಿತು. ಇದರಿಂದ ಪ್ರಥಮ ಹಂತದಲ್ಲಿ ತಾಲ್ಲೂಕಿನ 26 ಕೆರೆಗಳಿಗೆನೀರು ಹರಿಸುವ ಕಾರ್ಯಕ್ಕೆ ಚಾಲನೆ ಸಿಕ್ಕಿ ಸುಮಾರು ಐದಾರು ತಿಂಗಳು ಕಳೆದಿವೆ. ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಿಂದ ಇಲ್ಲಿನ ರೈತರು ಮತ್ತು ನಾಗರಿಕರು ಕುಡಿಯುವ ನೀರು ಸೇರಿದಂತೆ ಕೃಷಿ ಭೂಮಿಗಳಿಗೆ ಕೊಳವೆ ಬಾವಿಗಳಲ್ಲಿ ಅಂತರ್ಜಲ ವೃದ್ದಿಯಾಗುತ್ತದೆ ಎಂದು ನಿಟ್ಟುಸಿರು ಬಿಟ್ಟಿದ್ದರು. ಆದರೆ ಇತ್ತೀಚೆಗೆ ಸುಮಾರು ಎರಡ್ಮೂರು ತಿಂಗಳಿನಿಂದ ತಾಲ್ಲೂಕು ಕೆರೆಗಳಿಗೆ ನೀರು ಹರಿಸುವುದನ್ನು ನಿಲ್ಲಿಸಿರುವುದು ಆತಂಕ ಮೂಡಿಸಿದೆ ಎಂದರು.
ಜಿಲ್ಲಾಡಳಿತ ಈ ಕೂಡಲೇ ಗಮನವಹಿಸಿ ಸರ್ಕಾರದ ಯೋಜನೆಯನ್ನು ಸಮರ್ಪಕವಾಗಿ ಜಾರಿಗೆ ತರಬೇಕೆಂದು ಒತ್ತಾಯಿಸಿದ ಅವರು ಬಿಸಿಲಿನ ತಾಪ ಹೆಚ್ಚಾಗಿದ್ದು, ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಆರಂಭವಾಗುತ್ತಿದೆ. ಕೆರೆಗಳಿಗೆ ಸಮರ್ಕವಾಗಿ ನೀರು ಹರಿಸುವ ಕಾರ್ಯ ನಡೆಸಿದ್ದರೇ ಕೆರೆಗಳು ತುಂಬಿಕೊಳ್ಳುತ್ತಿದ್ದವು. ಆ ಮೂಲಕ ಅಂತರ್ಜಲ ವೃದ್ಧಿಯಾಗಿ ಕೊಳವೆ ಬಾವಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿ ಕುಡಿಯುವ ನೀರಿನ ಕೊರತೆ ನೀಗುತ್ತಿತ್ತು ಎಂದರು.