ಬಂಗಾರಪೇಟೆ: ರೈತರ ಕೃಷಿ ಪಂಪ್ಸೆಟ್ಗಳಿಗೆ 7 ಗಂಟೆ ತ್ರಿಫೇಸ್ ವಿದ್ಯುತ್ ಪೂರೈಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘದ ಕೆ.ಎಸ್. ಪುಟ್ಟಣ್ಣಯ್ಯ ಬಣದ ಸದಸ್ಯರು ಬೆಸ್ಕಾಂ ಎಇಇ ರಾಮಕೃಷ್ಣಪ್ಪಗೆ ಮನವಿ ಸಲ್ಲಿಸಿದರು.
ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮರಗಲ್ ಶ್ರೀನಿವಾಸ್ ಮಾತನಾಡಿ, ಬೆಸ್ಕಾಂ ಅಧಿಕಾರಿಗಳು ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. ನೆಪಮಾತ್ರಕ್ಕೆ 4 ಗಂಟೆ ವಿದ್ಯುತ್ ಪೂರೈಕೆ ಮಾಡುತ್ತೇವೆ ಎಂದು ಹೇಳುತ್ತಾರೆ. ಆದರೆ, ಹಲವು ಬಾರಿ ವಿದ್ಯುತ್ ಕಡಿತ ಆಗುತ್ತಿದೆ. ಇದರ ಪರಿಣಾಮ ರೈತರ ಪಂಪ್ಸೆಟ್ ಮೋಟಾರ್ ಹಾಗೂ ವಿದ್ಯುತ್ ಪರಿವರ್ತಕಗಳು ಸುಟ್ಟು ಹೋಗುತ್ತಿವೆ ಎಂದು ದೂರಿದರು.
ರೈತರು ಎರಡು ವರ್ಷದಿಂದ ಕೋವಿಡ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗ ವಿದ್ಯುತ್ ಕಡಿತ ಮಾಡುತ್ತಿರುವುದರಿಂದ ಬೆಳೆ ಬೆಳೆಯಲಾಗದೆ ಮತ್ತೆ ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ಎದುರಾಗಿದೆ. ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ತಾಲ್ಲೂಕು ಅಧ್ಯಕ್ಷ ಐತಾಂಡಹಳ್ಳಿ ಅಮರೇಶ್ ಮಾತನಾಡಿ, ಇನ್ನಾದರೂ ಹಗಲಿನಲ್ಲಿ ನಾಲ್ಕು ತಾಸು, ರಾತ್ರಿ ವೇಳೆ 3 ತಾಸು ವಿದ್ಯುತ್ ಪೂರೈಕೆ ಮಾಡಬೇಕು. ಒಂದು ವಾರದಲ್ಲಿ ಸಮಸ್ಯೆ ನೀಗಿಸದಿದ್ದರೆ ಜಾನುವಾರುಗಳೊಂದಿಗೆ ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.