ಕೋಲಾರ: ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ನೇಮಕಾತಿ ಅಕ್ರಮದ ಸಂಬಂಧ ಜಿಲ್ಲೆಯ ಕೆಜಿಎಫ್ನ ಅಂಡರ್ಸನ್ಪೇಟೆ ಠಾಣೆಯ ಎಸ್ಐ ಸುನಿಲ್ಕುಮಾರ್ ಅವರನ್ನು ಸಿಐಡಿ ಪೊಲೀಸರು ವಿಚಾರಣೆಗೆ ಕರೆದೊಯ್ದಿದ್ದು, ಅಕ್ರಮದ ಜಾಲ ಜಿಲ್ಲೆಗೂ ವ್ಯಾಪಿಸಿರುವ ಶಂಕೆ ವ್ಯಕ್ತವಾಗಿದೆ.
ಪ್ರೊಬೇಷನರಿ ಹಂತದಲ್ಲಿರುವ ಸುನಿಲ್ಕುಮಾರ್ ಅವರು ಸುಮಾರು ಒಂದು ತಿಂಗಳಿನಿಂದ ಅಂಡರ್ಸನ್ಪೇಟೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪಿಎಸ್ಐ ನೇಮಕಾತಿ ಅಕ್ರಮದ ಆರೋಪಿಗಳ ಜತೆ ನಂಟು ಹೊಂದಿರುವ ಆರೋಪದ ಮೇಲೆ ಅವರನ್ನು ಸಿಐಡಿ ಅಧಿಕಾರಿಗಳು ಗುರುವಾರ ರಾತ್ರಿ ಕರೆದೊಯ್ದಿದ್ದಾರೆ ಎಂದು ಗೊತ್ತಾಗಿದೆ.
ಮೂಲತಃ ಮಂಡ್ಯ ಜಿಲ್ಲೆಯ ಕೆ.ಎಂ ದೊಡ್ಡಿ ಗ್ರಾಮದ ಸುನಿಲ್ಕುಮಾರ್ ಅವರು 2019ರಲ್ಲಿ ಎಸ್ಐ ನೇಮಕಾತಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದರು. ತರಬೇತಿ ಅವಧಿ ಪೂರ್ಣಗೊಳಿಸಿದ ನಂತರ ಅವರನ್ನು ಅಂಡರ್ಸನ್ಪೇಟೆ ಠಾಣೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.
‘ಸಿಐಡಿ ಅಧಿಕಾರಿಗಳು ಸುನಿಲ್ಕುಮಾರ್ ಅವರನ್ನು ಪಿಎಸ್ಐ ನೇಮಕಾತಿ ಅಕ್ರಮದ ವಿಚಾರಣೆಗಾಗಿ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಆ ನಂತರ ಅಧಿಕಾರಿಗಳು ಹೆಚ್ಚಿನ ಮಾಹಿತಿ ಕೊಟ್ಟಿಲ್ಲ’ ಎಂದು ಕೆಜಿಎಫ್ ಪೊಲೀಸ್ ಜಿಲ್ಲಾ ವರಿಷ್ಠಾಧಿಕಾರಿ ಧರಣಿದೇವಿ ‘ಪ್ರಜಾವಾಣಿ’ಗೆ ತಿಳಿಸಿದರು.