ಕೋಲಾರ: ಪಠ್ಯಪುಸ್ತಕ ವಿತರಣೆಯಲ್ಲಿ ಅಕ್ರಮ ನಡೆಸಿರುವ ಶಿಕ್ಷಕರಾದ ರಮಣಪ್ಪನನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ನಗರದಲ್ಲಿ ಶಿಕ್ಷಣ ಸಚಿವ ಸುರೇಶ್ಕುಮಾರ್ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.
ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಗೌಡ ಮಾತನಾಡಿ, ‘2018–18ನೇ ಶೈಕ್ಷಣಿಕ ಸಾಲಿನಲ್ಲಿ ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ ವಿತರಿಸದೆ ಖಾಸಗಿ ಶಾಲೆಗಳಿಗೆ ಕಳುಹಿಸಿಕೊಟ್ಟಿದ್ದಾರೆ. ಆಗಿನ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲತಾ ಕುಮಾರಿ ಪರಿಶೀಲನೆ ನಡೆಸಿ ಅಕ್ರಮದ ಬಗ್ಗೆ ತನಿಖೆ ನಡೆಸಲು ತಂಡ ರಚನೆ ಮಾಡಿದ್ದರು, ತನಿಖೆ ನಡೆಸಿ ವರದಿ ತಯಾರಿಸಿ ಸರ್ಕಾರಕ್ಕೆ ಕಳುಹಿಸಿದ್ದರು’ ಎಂದರು.
‘ಇಲಾಖೆಯ ರಾಜ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಅಕ್ರಮ ಅಗಿರುವುದು ಬೆಳಕಿಗೆ ಬಂದಿದ್ದು, ಅವರ ವಿರುದ್ಧ ದೂರು ದಾಖಲಿಸಿ ಹಣ ವಸೂಲಿ ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಶಿಫಾರಸ್ಸು ಮಾಡಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ’ ಎಂದು ದೂರಿದರು.
‘ಸರ್ಕಾರದಿಂದ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುಮತಿ ನೀಡುತ್ತಿರುವುದರಿಂದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ನೋಂದಣಿ ಕಡಿಮೆಯಾಗಿ ಮುಚ್ಚುವ ಸ್ಥಿತಿಗೆ ಬಂದಿವೆ. ಇನ್ನು ಮುಂದೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು, ಸರ್ಕಾರಿಗಳ ಶಾಲೆಗಳ ಉನ್ನತೀಕರಣಕ್ಕೆ ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.
‘ಗ್ರಾಮೀಣ ಭಾಗದಲ್ಲಿ ಶಾಲೆಗಳ ಜಾಗ ಒತ್ತುವರಿಯಾಗಿದ್ದು ತೆರವುಗೊಳಿಸಬೇಕು. ಆರ್ಟಿಇ ಅಡಿ ಮಕ್ಕಳನ್ನು ವಂಚಿಸುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.
ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿ, ಜಿಲ್ಲಾ ಘಟಕದ ಸಂಚಾಲಕ ಕೆ.ಶ್ರೀನಿವಾಸಗೌಡ, ಸದಸ್ಯರಾದ ನಾಗೇಶ್, ತಿಮ್ಮಣ್ಣ, ವೆಂಕಟೇಶಪ್ಪ, ಮಂಜುನಾಥ್, ರವಣಪ್ಪ ಹಾಜರಿದ್ದರು.