ಕೋಲಾರ: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಮಂಗಳವಾರ (ಮೇ 23) ಆರಂಭವಾಗಲಿದ್ದು, ಜೂನ್ 3ರವರೆಗೆ ಜಿಲ್ಲೆಯ 8 ಕೇಂದ್ರಗಳಲ್ಲಿ ನಡೆಯಲಿದೆ.
ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಡಿಡಿಪಿಯು ರಾಮಚಂದ್ರಪ್ಪ ತಿಳಿಸಿದರು.
‘ಮಾರ್ಚ್ನಲ್ಲಿ ಹಾಗೂ ಹಿಂದಿನ ವರ್ಷಗಳಲ್ಲಿ ದ್ವಿತೀಯ ಪಿಯುಸಿ ಅನುತ್ತೀರ್ಣರಾದ ಅಭ್ಯರ್ಥಿಗಳು ಈ ಪರೀಕ್ಷೆ ಬರೆಯುತ್ತಿದ್ದು, ಕೋಲಾರದಲ್ಲಿ 3 ಕೇಂದ್ರ, ಮಾಲೂರು, ಬಂಗಾರಪೇಟೆ, ಕೆಜಿಎಫ್, ಮುಳಬಾಗಿಲು ಮತ್ತು ಶ್ರೀನಿವಾಸಪುರದಲ್ಲಿ ತಲಾ ಒಂದೊಂದು ಕೇಂದ್ರದಲ್ಲಿ ಮಾತ್ರ ಪರೀಕ್ಷೆ ನಡೆಯಲಿದೆ’ ಎಂದು ಹೇಳಿದರು.
‘ಸುಗಮ ಪರೀಕ್ಷೆಗಾಗಿ ಎಲ್ಲಾ ಸಿದ್ಧತೆ ಕೈಗೊಂಡಿದ್ದು, ಕೇಂದ್ರಗಳಲ್ಲಿ ಮೂಲ ಸೌಲಭ್ಯ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಸೇರಿದಂತೆ ಎಲ್ಲಾ ಅಗತ್ಯಗಳ ಕುರಿತು ಗಮನಹರಿಸಲಾಗಿದೆ’ ಎಂದರು.
ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ನಿಷೇಧಾಜ್ಞೆಯನ್ನು ಜಿಲ್ಲಾಧಿಕಾರಿ ಜಾರಿ ಮಾಡಿದ್ದು, ಈ ಭಾಗದಲ್ಲಿನ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಬಂದ್ ಮಾಡಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್, ಕೈಗಡಿಯಾರ, ಎಲೆಕ್ಟ್ರಾನಿಕ್ ವಸ್ತುಗಳನ್ನು ತರುವುದಕ್ಕೂ ನಿಷೇಧವಿದೆ.
ಸುಗಮ ಪರೀಕ್ಷೆಗಾಗಿ ಕೇಂದ್ರ ಕಚೇರಿಯ ಜಾಗೃತದಳ, ಉಪನಿರ್ದೇಶಕರ ಕಚೇರಿಯ ಜಾಗೃದಳ, ಇಲಾಖೆಯ ತಾಲ್ಲೂಕು ಜಾಗೃದಳ ಹಾಗೂ ಪ್ರತಿ ಕೇಂದ್ರಕ್ಕೂ ಸ್ಥಾನಿಕ ಜಾಗೃತ ದಳ ಕಾರ್ಯನಿರ್ವಹಿಸಲಿವೆ ಎಂದು ಹೇಳಿದರು.