ಕೋಲಾರ: ‘ಜಿಲ್ಲೆಯ ಎಲ್ಲಾ ಪ್ರೌಢ ಶಾಲಾ ವಿದ್ಯಾರ್ಥಿಗಳು ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ ಜ್ಞಾನ ಹೆಚ್ಚಿಸಿಕೊಳ್ಳಬೇಕು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೃಷ್ಣಮೂರ್ತಿ ಸಲಹೆ ನೀಡಿದರು.
ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಶಾಖೆಯ ಜ್ಞಾನ ವಿಜ್ಞಾನ ಚಟುವಟಿಕೆಗಳಿಗೆ ಇಲ್ಲಿ ಬುಧವಾರ ಚಾಲನೆ ನೀಡಿ ಮಾತನಾಡಿ, ‘ಇಲಾಖೆಯು ಜ್ಞಾನ ಜ್ಞಾನ ಸಮಿತಿಯ ಕಾರ್ಯಕ್ರಮಗಳಿಗೆ ಸಂಪೂರ್ಣ ಸಹಕಾರ ನೀಡುತ್ತದೆ’ ಎಂದು ಹೇಳಿದರು.
‘ಸರ್ಕಾರಗಳು ಮೂಲ ವಿಜ್ಞಾನಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿವೆ. ವಿಜ್ಞಾನ ವಿದ್ಯಾರ್ಥಿಗಳು ಪಠ್ಯಕ್ಕೆ ಸೀಮಿತವಾಗದೆ ಸಂಶೋಧನೆಯತ್ತ ಗಮನಹರಿಸುವ ಮೂಲಕ ಸಮಾಜದ ಆಸ್ತಿಯಾಗಬೇಕು. ಅಧ್ಯಯನ ಮತ್ತು ಸಂಶೋಧನೆಯಿಲ್ಲದೆ ವಿಚಾರ ಮಂಡಿಸಲು ಸಾಧ್ಯವಿಲ್ಲ. ರಾಮನ್ ಅವರ ಸಾಧನೆ ಸ್ಫೂರ್ತಿಯಾಗಿ ತೆಗೆದುಕೊಂಡರೆ ವಿದ್ಯಾರ್ಥಿಗಳು ಜೀವನದ ಗುರಿ ಸಾಧಿಸಬಹುದು’ ಎಂದು ಅಭಿಪ್ರಾಯಪಟ್ಟರು.
‘ನಾವೆಲ್ಲ ಇಂದು ವೈಜ್ಞಾನಿಕ ಯುಗದಲ್ಲಿ ಇದ್ದೇವೆ. ವಿಜ್ಞಾನ ಕ್ಷೇತ್ರ ವ್ಯಾಪಕವಾಗಿ ಬೆಳೆಯುತ್ತಿದೆ. ಇದರತ್ತ ವಿದ್ಯಾರ್ಥಿನಿಯರು ಗಮನ ಹರಿಸಬೇಕು. ಯುವ ಮನಸ್ಸಿನಲ್ಲಿ ನೂರಾರು ಕನಸುಗಳು ಇರುತ್ತವೆ. ಇವುಗಳನ್ನು ಸಾಕಾರಗೊಳಿಸಲು ಅಧ್ಯಯನ, ಪರಿಶ್ರಮ ಹಾಗೂ ಕಾಲಮಿತಿ ಹಾಕಿಕೊಂಡು ಕೆಲಸ ಮಾಡಬೇಕು’ ಎಂದರು.
‘ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಹಾಗೂ ಚಿಂತನೆ ಹೆಚ್ಚಿಸಲು ಜ್ಞಾನ ವಿಜ್ಞಾನ ಸಮಿತಿ ಉತ್ತಮ ಕಾರ್ಯಕ್ರಮ ಹಮ್ಮಿಕೊಂಡಿದೆ. ವಿದ್ಯಾರ್ಥಿಗಳನ್ನು ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಪೋಷಕರು ಪ್ರೋತ್ಸಾಹಿಸಬೇಕು’ ಎಂದು ತಿಳಿಸಿದರು.
ಉತ್ತಮ ಸ್ಪಂದನೆ: ‘ರಾಜ್ಯದೆಲ್ಲೆಡೆ ರಸಪ್ರಶ್ನೆ ಸ್ಪರ್ಧೆ ಹಮ್ಮಿಕೊಂಡಿದ್ದು, ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಜಿಲ್ಲೆಯ ಎಲ್ಲಾ ಪ್ರೌಢ ಶಾಲಾ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬೇಕು. ವಿದ್ಯಾರ್ಥಿಗಳು ತಮ್ಮ ಬೌದ್ಧಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ರಸಪ್ರಶ್ನೆ ಸ್ಪರ್ಧೆ ಸಹಕಾರಿ’ ಎಂದು ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಶಾಖೆ ಅಧ್ಯಕ್ಷ ವೆಂಕಟಶಿವಪ್ಪ ಹೇಳಿದರು.
ಜಿಲ್ಲಾ ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್, ಸಮಿತಿ ಗೌರವಾಧ್ಯಕ್ಷ ಜಿ.ಶ್ರೀನಿವಾಸ್, ಉಪಾಧ್ಯಕ್ಷ ಎಸ್.ಬಸವರಾಜ, ಜಿಲ್ಲಾ ಸಂಯೋಜಕ ಶರಣಪ್ಪ ಗಬ್ಬೂರ್, ಖಜಾಂಚಿ ಅಶ್ವತ್ಥಪ್ಪ ಪಾಲ್ಗೊಂಡರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.