ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಶನಿವಾರ ರಾತ್ರಿ ಭಾರಿ ಮಳೆ ಸುರಿದಿದೆ. ವ್ಯಾಪಕವಾಗಿ ಸುರಿದ ಪರಿಣಾಮ ಕೆರೆ ಕುಂಟೆಗಳಿಗೆ ನೀರು ಹರಿದು ಬಂದಿದೆ.
ಕಳೆದ ಮೂರು ದಿನಗಳಿಂದ ರಾತ್ರಿ ಹೊತ್ತು ಸುರಿಯುತ್ತಿರುವ ಮಳೆಯಿಂದಾಗಿ ನೆಲದಲ್ಲಿ ತೇವಾಂಶ ಹೆಚ್ಚಿ, ಉಳುಮೆ ಹಾಗೂ ಬಿತ್ತನೆ ಕಾರ್ಯ ಸ್ಥಗಿತಗೊಂಡಿದೆ. ರೈತರು ಮಾವಿನ ತೋಟಗಳಲ್ಲಿ ಬೆಳೆದು ನಿಂತಿರುವ ಗಿಡಗಂಟಿಗಳನ್ನು ಕೀಳುವ ಕಾರ್ಯದಲ್ಲಿ ತೊಡಗಿದ್ದಾರೆ.
ಕೆಲವು ಕಡೆ ತಗ್ಗು ಪ್ರದೇಶದಲ್ಲಿ ಬೆಳೆಯಲಾಗಿರುವ ಟೊಮೆಟೊ, ಕೋಸು, ಮತ್ತಿತರ ತೋಟದ ಬೆಳೆಗಳಿಗೆ ಹಾನಿ ಉಂಟಾಗಿದೆ. ಮೊದಲ ಮಳೆಗೆ ಬಿತ್ತನೆ ಮಾಡಲಾಗಿದ್ದ ರಾಗಿ ಹೊಲಗಳಲ್ಲಿ ನೀರು ನಿಂತು ಸಮಸ್ಯೆ ಉಂಟಾಗಿದೆ.
ತಾಲ್ಲೂಕಿನಲ್ಲಿ ನಿರ್ಮಿಸಲಾಗಿರುವ ರೈಲ್ವೆ ಕೆಳ ಸೇತುವೆಗಳಲ್ಲಿ ನೀರು ತುಂಬಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸೇತುವೆಗಳ ಕೆಳಗೆ ವಾಹನ ಸಂಚಾರ ಸಾಧ್ಯವಾಗದೆ ಸಮಸ್ಯೆ ಉಂಟಾಗಿದೆ. ಕಳಪೆ ಕಾಮಗಾರಿಯ ಪರಿಣಾಮ ಈ ಅವಾಂತರ ಸೃಷ್ಟಿಯಾಗಿದೆ ಎಂದು ಸಾರ್ವಜನಿಕರು ದೂರಿದರು.