ಕೋಲಾರ: ಕೊರೊನಾ ವೈರಸ್ ಹಾಗೂ ಸಾಂಕ್ರಾಮಿಗಳ ರೋಗಗಳು ಹರಡುವುದನ್ನು ನಿಯಂತ್ರಿಸಲು ಆರೋಗ್ಯ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ನಡೆಸಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಆರೋಗ್ಯ ಇಲಾಖೆ ಎದುರು ಶನಿವಾರ ಧರಣಿ ನಡೆಸಿದರು.
ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಗೌಡ ಮಾತನಾಡಿ, ‘ಬದಲಾಗುತ್ತಿರುವ ವಾತಾವರಣ, ಪರಿಸರ ಮಾಲಿನ್ಯದಿಂದ ಸಾಂಕ್ರಾಮಿಕ ರೋಗಗಳು ಹರಡುತ್ತಿವೆ. ಕೊರೊನಾ ವೈರಸ್ ಭೀತಿ ಶುರುವಾಗಿದೆ. ಇದರ ಪರಿಣಾಮ ಜನರ ಮೇಲೆ ಪರಿಣಾಮ ಬೀರುವ ಮೊದಲೇ ಮುಂಜಾಗ್ರತಾ ಕ್ರಮಕಗಳ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದು ಒತ್ತಾಯಿಸಿದರು.
‘ಖಾಸಗಿ ನರ್ಸಿಂಗ್ ಹೋಂಗಳಲ್ಲಿ ವಿನಾಕಾರಣ ರಕ್ತ ಪರೀಕ್ಷೆ ಮಾಡಿಸಿ ಬಡವರಿಂದ ಸಾವಿರಾರು ರೂಪಾಯಿ ದೋಚುತ್ತಿದ್ದಾರೆ. ಯಾವುದೇ ಕಾಯಿಲೆಗೆ ಚಿಕಿತ್ಸೆಗೆ ಆಸ್ಪತ್ರೆಗೆ ಬಂದರೆ ರೋಗಿಯನ್ನು ನಿರ್ಲಕ್ಷಿಸದಂತೆ ನೋಟೀಸ್ ನೀಡಬೇಕು’ ಎಂದು ಮನವಿ ಮಾಡಿದರು.
ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿ ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸೇವೆಯೂ ವುಳ್ಳವರ ಪಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸುವಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಸಂಪೂರ್ಣವಾಗಿ ವಿಫಲರಾಗಿದ್ದಾರೆ’ ಎಂದು ಆರೋಪಿಸಿದರು.
‘ಸರ್ಕಾರಿ ಆಸ್ಪತ್ರೆಗಳ ಅವ್ಯವಸ್ಥೆ ಸೂಜಿಯಿಂದ ಮಾತ್ರೆಯವರೆಗೂ ಖಾಸಗಿ ಮೆಡಿಕಲ್ ಸ್ಟೋರ್ಗಳಿಗೆ ಬರೆದುಕೊಡುವ ವ್ಯವಸ್ಥೆ ನಿರ್ಮಾಣವಾಗಿದೆ. ಗಡಿಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಪರಿಸ್ಥಿತಿಯಂತು ಕೇಳುವಂತಿಲ್ಲ. ಸಾಂಕ್ರಾಮಿಕ ರೋಗಗಳಿಗೆ ತುತ್ತಾಗಿ ರೋಸಿ ಹೋಗಿದ್ದಾರೆ’ ಎಂದು ಅತಂಕ ವ್ಯಕ್ತಪಡಿಸಿದರು.
ಸಂಘದ ಜಿಲ್ಲಾ ಘಟಕದ ಸಂಚಾಲಕ ಕೆ.ಶ್ರೀನಿವಾಸಗೌಡ, ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್, ಗೌರವಾಧ್ಯಕ್ಷ ತಿಮ್ಮಣ್ಣ, ಪದಾಧಿಕಾರಿಗಳಾಧ ವೆಂಕಟೇಶಪ್ಪ, ಹನುಮಯ್ಯ, ಮಂಜುನಾಥ, ಅನುಶ್ರೀ, ಕೇಶವ, ವೇಣು, ರಾಜು, ವೆಂಕಟೇಶಪ್ಪ ಪಾಲ್ಗೊಂಡಿದ್ದರು.