ಕೋಲಾರ: ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯಾಲಯಕ್ಕೆ ಕಟ್ಟಡ ಮಂಜೂರು ಮಾಡುವಂತೆ ಸಂಸ್ಥೆ ಸದಸ್ಯರು ಇಲ್ಲಿ ಶನಿವಾರ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರಿಗೆ ಮನವಿ ಸಲ್ಲಿಸಿದರು.
‘ಈ ಹಿಂದೆ ಸಂಸ್ಥೆಯ ಕಾರ್ಯಾಲಯವು ಎಸ್ಎನ್ಆರ್ ಜಿಲ್ಲಾ ಆಸ್ಪತ್ರೆ ಆವರಣದಲ್ಲಿನ ಆರೋಗ್ಯ ಇಲಾಖೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿತ್ತು. ಕೋವಿಡ್ ಹಿನ್ನೆಲೆಯಲ್ಲಿ ಕಚೇರಿಯನ್ನು ಆಸ್ಪತ್ರೆ ವಶಕ್ಕೆ ಪಡೆಯಲಾಗಿದೆ. ಹೀಗಾಗಿ ಸಂಸ್ಥೆಗೆ ಸದ್ಯ ಕಚೇರಿ ಇಲ್ಲವಾಗಿದೆ’ ಎಂದು ಸಂಸ್ಥೆಯ ಜಿಲ್ಲಾ ಅಧ್ಯಕ್ಷ ಗೋಪಾಲಕೃಷ್ಣಗೌಡ ತಿಳಿಸಿದರು.
‘ಸಂಸ್ಥೆಯ ಜಿಲ್ಲಾ ಶಾಖೆಯು ಸುಮಾರು 20 ವರ್ಷಗಳಿಂದ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ರಕ್ತದಾನ ಶಿಬಿರ, ನೇತ್ರದಾನ ಶಿಬಿರ, ಆಟೊ ಚಾಲಕರಿಗೆ ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ ಆಯೋಜಿಸುತ್ತಿದೆ. ಅಂಗವಿಕಲರಿಗೆ ಅಗತ್ಯ ಸಲಕರಣೆ ವಿತರಿಸುತ್ತಿದೆ. ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಸ್ವಚ್ಛತಾ ಆಂದೋಲನ ನಡೆಸುತ್ತಿದೆ’ ಎಂದು ವಿವರಿಸಿದರು.
‘ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳಲ್ಲಿ ಜೂನಿಯರ್ ರೆಡ್ಕ್ರಾಸ್ ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. ಕೋವಿಡ್ ಸಂದರ್ಭದಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಮಾಸ್ಕ್, ಸ್ಯಾನಿಟೈಸರ್್ ಸೇರಿದಂತೆ ವೈದ್ಯಕೀಯ ಪರಿಕರಗಳನ್ನು ವಿತರಿಸಲಾಗಿದೆ. ಅಸಂಘಟಿತ ಕಾರ್ಮಿಕರಿಗೆ ಸಂಸ್ಥೆಯಿಂದ ಆಹಾರ ಪದಾರ್ಥಗಳ ಕಿಟ್ ನೀಡಲಾಗಿದೆ’ ಎಂದು ಹೇಳಿದರು.
‘ಸಂಸ್ಥೆಯ ಕಾರ್ಯ ಚಟುವಟಿಕೆ ನಡೆಸಲು, ಸಲಕರಣೆ ಮತ್ತು ದಾಖಲೆಪತ್ರಗಳನ್ನು ದಾಸ್ತಾನು ಮಾಡಲು ಕಟ್ಟಡ ಇಲ್ಲದೆ ತೊಂದರೆಯಾಗಿದೆ. ಜಿಲ್ಲಾಧಿಕಾರಿಗಳ ಹಳೆಯ ಕಾರ್ಯಾಲಯದ ಜಾಗದಲ್ಲಿ ಖಾಲಿಯಿರುವ ಯಾವುದಾದರೂ ಸುಸಜ್ಜಿತ ಕಟ್ಟಡವನ್ನು ಸಂಸ್ಥೆಗೆ ಮಂಜೂರು ಮಾಡಬೇಕು’ ಎಂದು ಕೋರಿದರು.
ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಯು, ‘ಸದ್ಯಕ್ಕೆ ಸಂಸ್ಥೆಗೆ ಒಂದು ಕಟ್ಟಡ ನೀಡುತ್ತೇವೆ. ಮುಂದೆ ಸ್ವಂತ ಕಟ್ಟಡಕ್ಕೆ ನಿವೇಶನ ಮಂಜೂರು ಮಾಡುತ್ತೇವೆ’ ಎಂದು ಭರವಸೆ ನೀಡಿದರು.ಸಂಸ್ಥೆಯ ಜಿಲ್ಲಾ ಉಪಾಧ್ಯಕ್ಷ ಆರ್.ಶ್ರೀನಿವಾಸನ್, ಕಾರ್ಯದರ್ಶಿ ನಂದೀಶ್ಕುಮಾರ್, ರಾಜ್ಯ ಪರಿಷತ್ ಸದಸ್ಯ ಎಸ್.ಸಿ.ವೆಂಕಟಕೃಷ್ಣ ಹಾಜರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.