ಕೋಲಾರ: ‘ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಹಿಂದೇಟು ಹಾಕುವ ಖಾಸಗಿ ಆಸ್ಪತ್ರೆ ವೈದ್ಯರ ವಿರುದ್ಧ ಮುಲಾಜಿಲ್ಲದೆ ಶಿಸ್ತುಕ್ರಮ ಜರುಗಿಸಬೇಕು’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಖಡಕ್ ಸೂಚನೆ ನೀಡಿದರು.
ನಗರದ ಇಟಿಸಿಎಂ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷಾ ಕೇಂದ್ರ ಮತ್ತು ಲಸಿಕಾ ಕೇಂದ್ರ ತೆರೆಯುವ ಸಂಬಂಧ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿ, ‘ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಕೋವಿಡ್ ಬಗ್ಗೆ ಜನರಿಗೆ ಗಂಭೀರತೆಯಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
‘ಸರ್ಕಾರ ಯಾರ ಲಾಭಕ್ಕೂ ಲಾಕ್ಡೌನ್ ಘೋಷಣೆ ಮಾಡಿಲ್ಲ. ಕೋವಿಡ್ ನಿಯಂತ್ರಣ ಹಾಗೂ ಜನರ ಆರೋಗ್ಯದ ದೃಷ್ಟಿಯಿಂದ ಲಾಕ್ಡೌನ್ ಜಾರಿ ಮಾಡಲಾಗಿದೆ. ಆದರೂ ಆಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಜನರು ಈ ಅವಕಾಶ ದುರ್ಬಳಕೆ ಮಾಡಿಕೊಂಡು ಅನಗತ್ಯವಾಗಿ ಮನೆಯಿಂದ ಹೊರಬಂದು ಓಡಾಡಿದರೆ ಹೇಗೆ?’ ಎಂದು ಪ್ರಶ್ನಿಸಿದರು.
‘ಜನರ ಜೀವದ ಜತೆ ಯಾರೂ ಚೆಲ್ಲಾಟವಾಡಬಾರದು. ಖಾಸಗಿ ಆಸ್ಪತ್ರೆಗಳಲ್ಲಿ ಪ್ರತಿ ಸೋಂಕಿತರಿಗೂ ಚಿಕಿತ್ಸೆ ನೀಡಬೇಕು. ಸರ್ಕಾರಿ ಆಸ್ಪತ್ರೆ ಶಿಫಾರಸ್ಸಿನೊಂದಿಗೆ ಯಾವುದೇ ಸೋಂಕಿತ ವ್ಯಕ್ತಿ ಕೆಪಿಎಂಇ ಕಾಯ್ದೆಯಡಿ ನೋಂದಾಯಿತವಾಗಿರುವ ಆಸ್ಪತ್ರೆಗಳಿಗೆ ಬಂದರೆ ಚಿಕಿತ್ಸೆ ನೀಡಬೇಕು. ಚಿಕಿತ್ಸೆ ನಿರಾಕರಿಸಿದರೆ ಆಸ್ಪತ್ರೆಯ ಪರವಾನಗಿ ರದ್ದುಪಡಿಸಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.
ಸ್ಥಳಾಂತರ: ‘ಜಿಲ್ಲಾ ಕೇಂದ್ರದ ಎಸ್ಎನ್ಆರ್ ಆಸ್ಪತ್ರೆ ಆವರಣದಲ್ಲಿರುವ ಕೋವಿಡ್ ಲಸಿಕೆ ಮತ್ತು ಕೋವಿಡ್ ಪರೀಕ್ಷೆ ಕೇಂದ್ರಗಳನ್ನು ಇಟಿಸಿಎಂ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈ ಕೇಂದ್ರಗಳು ಗುರುವಾರದಿಂದ (ಮೇ 6) ಇಟಿಸಿಎಂ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸಲಿವೆ’ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಮಾಹಿತಿ ನೀಡಿದರು.
‘ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಪ್ರತಿಯೊಬ್ಬರು ಸಹಕಾರ ನೀಡಬೇಕು. ಈ ವಿಚಾರದಲ್ಲಿ ಉದಾಸೀನ ಬೇಡ. ಎಸ್ಎನ್ಆರ್ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವವರ ಮತ್ತು ಲಸಿಕೆ ಪಡೆಯುವವರ ಸಂಖ್ಯೆ ಹೆಚ್ಚಿದೆ. ಲಸಿಕೆ ಮತ್ತು ಪರೀಕ್ಷೆಗಾಗಿ ಜನರು ಗುಂಪುಗೂಡುತ್ತಿದ್ದು, ಇದರಿಂದ ಸೋಂಕು ಹರಡುವಿಕೆ ಹೆಚ್ಚಳವಾಗುವ ಸಾಧ್ಯತೆಯಿದೆ. ಈ ಕಾರಣಕ್ಕೆ ಲಸಿಕೆ ಮತ್ತು ಕೋವಿಡ್ ಪರೀಕ್ಷಾ ಕೇಂದ್ರವನ್ನು ಇಟಿಸಿಎಂ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ’ ಎಂದು ವಿವರಿಸಿದರು.
‘ಇಟಿಸಿಎಂ ಆಸ್ಪತ್ರೆ ಸಿಬ್ಬಂದಿಯೂ ಲಸಿಕೆ ಮತ್ತು ಕೋವಿಡ್ ಪರೀಕ್ಷಾ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುವುದರಿಂದ ಹೆಚ್ಚಿನ ಮಾನವ ಸಂಪನ್ಮೂಲ ಸಿಕ್ಕಿದಂತಾಗುತ್ತದೆ. ಈ ಹಿಂದೆ ಸಹ ಇಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಅವಕಾಶ ಕಲ್ಪಿಸಿದ್ದರು. ಈ ಬಾರಿ ಕೊರೊನಾ ಸೋಂಕಿತರಲ್ಲದ ಇತರೆ ರೋಗಿಗಳಿಗೆ ಚಿಕಿತ್ಸೆ ನೀಡುವುದಾಗಿ ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ’ ಎಂದು ಹೇಳಿದರು.
‘ಇಟಿಸಿಎಂ ಆಸ್ಪತ್ರೆಯಲ್ಲಿ ತಜ್ಞ ವೈದ್ಯರು ಲಭ್ಯರಿಲ್ಲದಿದ್ದರೆ ಎಸ್ಎನ್ಆರ್ ಆಸ್ಪತ್ರೆಯಿಂದ ಕಳುಹಿಸಲಾಗುವುದು. ಎಸ್ಎನ್ಆರ್ ಆಸ್ಪತ್ರೆಯಿಂದ ಶಿಫಾರಸ್ಸಾಗಿ ಖಾಸಗಿ ಆಸ್ಪತ್ರೆಗೆ ಹೋದರೆ ಉಚಿತವಾಗಿ ಚಿಕಿತ್ಸೆ ನೀಡಬೇಕು. ಸರ್ಕಾರಿ ಆಸ್ಪತ್ರೆಯಿಂದ ಶಿಫಾರಸ್ಸಾಗಿ ಬರುವ ರೋಗಿಗಳಿಂದ ಶುಲ್ಕ ಪಡೆದರೆ ಕ್ರಮ ಕೈಗೊಳ್ಳುತ್ತೇವೆ’ ಎಂದರು.
ದೂರು ಬಂದಿವೆ: ‘ಕೋವಿಡ್ ಸಂದರ್ಭವನ್ನು ಕೆಲ ಖಾಸಗಿ ಆಸ್ಪತ್ರೆಗಳು ಬಂಡವಾಳವಾಗಿಸಿಕೊಂಡಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರು ಬಂದಿವೆ. ಈ ದೂರುಗಳನ್ನು ಪರಿಶೀಲಿಸಿ ಖಾಸಗಿ ಆಸ್ಪತ್ರೆಯವರಿಂದ ಹಣ ವಾಪಸ್ ಕೊಡಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಕೊರೊನಾ ಸೋಂಕಿತರ ಚಿಕಿತ್ಸೆಗೆ ಹಣ ಪಡೆಯುತ್ತಿದ್ದರೆ ಆ ಬಗ್ಗೆ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.
‘ನರಸಾಪುರ ಮತ್ತು ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿನ ಕೈಗಾರಿಕೆಗಳು ಸೀಮಿತ ಸಂಖ್ಯೆಯ ಕಾರ್ಮಿಕರಿಂದ ಕೆಲಸ ಮಾಡಿಸಬೇಕು. ಕೈಗಾರಿಕೆಗಳವರು ಕಾರ್ಮಿಕರನ್ನು ಕೋವಿಡ್ ಪರೀಕ್ಷೆಗಾಗಿ ಎಸ್ಎನ್ಆರ್ ಆಸ್ಪತ್ರೆಗೆ ಕಳುಹಿಸುತ್ತಿದ್ದಾರೆ. ಇದರಿಂದ ಜನದಟ್ಟಣೆ ಹೆಚ್ಚುತ್ತಿದೆ’ ಎಂದು ವಿವರಿಸಿದರು.
ಇಟಿಸಿಎಂ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಜಾನ್ಸನ್ ಕುಂದರ್, ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ರೂಸ್ಮೇರಿ, ವೈದ್ಯ ಡಾ.ನವೀನ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.