ಕೋಲಾರ: ರಾಜ್ಯದಲ್ಲಿ ಆನ್ಲೈನ್ ಮೂಲಕ ಐಟಿಐ ವಿದ್ಯಾರ್ಥಿಗಳಿಗೆ ಸಿಬಿಟಿ ಪರೀಕ್ಷೆಯನ್ನು ರದ್ದುಪಡಿಸುವಂತೆ ಒತ್ತಾಯಿಸಿ ಶನಿವಾರ ನಗರದ ಬಸ್ ನಿಲ್ದಾಣದ ವೃತ್ತದಲ್ಲಿ ಜಿಲ್ಲಾ ಖಾಸಗಿ ಐಟಿಐ ಆಡಳಿತ ಮಂಡಳಿಯ ಸದಸ್ಯರು ಹಾಗೂ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಖಾಸಗಿ ಐಟಿಐ ಆಡಳಿತ ಮಂಡಳಿಯ ಅಧ್ಯಕ್ಷ ಬೈಚಪ್ಪ ಮಾತನಾಡಿ, ಐಟಿಐ ವಿದ್ಯಾರ್ಥಿಗಳಿಗೆ ಮೊದಲು ಪರೀಕ್ಷೆ ನಡೆದಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸುವುದು ಸೂಕ್ತವಾಗಿಲ್ಲ ಸಿಬಿಟಿ ಪರೀಕ್ಷೆಯನ್ನು ಸಂಪೂರ್ಣ ರದ್ದುಗೊಳಿಸಿ ಫಲಿತಾಂಶ ಘೋಷಣೆ ಮಾಡಬೇಕು. ಬಡ ವಿದ್ಯಾರ್ಥಿಗಳು ಐಟಿಐಗೆ ದಾಖಲಾಗಿದ್ದು ಅವರಿಗೆ ಎರಡು ಬಾರಿ ಶುಲ್ಕ ಎರಡು ಬಾರಿ ಪರೀಕ್ಷೆ ನಡೆಸುವುದರಿಂದ ಹೆಚ್ಚಿನ ವಿದ್ಯಾರ್ಥಿಗಳಿಗೆ ಹೊರೆಯಾಗುತ್ತದೆ ಎಂದರು.
ವಿದ್ಯಾರ್ಥಿಗಳಿಗೆ ಆನ್ಲೈನ್ ಕಂಪ್ಯೂಟರ್ ಪರೀಕ್ಷೆಯಲ್ಲಿ ಹಲವಾರು ತಾಂತ್ರಿಕದೋಷಗಳು ಕಂಡುಬಂದಿದ್ದು ಸುಮಾರು ವಿದ್ಯಾರ್ಥಿಗಳು ಪ್ರವೇಶ ಪತ್ರ ಪಡೆಯಲು ಸಾಧ್ಯವಾಗಿಲ್ಲ. ವಿದ್ಯಾರ್ಥಿಗಳು ಸಕಾಲಕ್ಕೆ ಶುಲ್ಕ ಪಾವತಿಸಲೂ ಸಮಯ ನೀಡದೆ ಬಹಳಷ್ಟು ತೊಂದರೆಯಾಗಿದೆ. ಹಳ್ಳಿಗಳಲ್ಲಿ ಮತ್ತು ನಗರದಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಪೂರ್ಣ ಪ್ರಮಾಣದ ಪರೀಕ್ಷೆ ಬರೆಯಲು ಸಾಧ್ಯವಾಗಿಲ್ಲ. ಇದರಿಂದ ವಿದ್ಯಾರ್ಥಿಗಳಲ್ಲಿ ಸಾಕಷ್ಟು ಗೊಂದಲಗಳನ್ನು ಉಂಟಾಗಿದೆ ಎಂದು ದೂರಿದರು.
ಬಹುಬೇಗ ಉದ್ಯೋಗ ಸಿಗಬಹುದು ಎಂಬ ಆಸೆಯಿಂದ ಐಟಿಐ ಓದಲು ಬರುವ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಪಾಸ್ ಹಾಗೂ ಫೇಲ್ ಆದವರು ಸೇರುತ್ತಾರೆ. ಅವರುಗಳಿಗೆ ಕಂಪ್ಯೂಟರ್ ಜ್ಞಾನ ಅಷ್ಟಾಗಿ ಇರುವುದಿಲ್ಲ. ಎಂಜಿನಿಯರಿಂಗ್ ಮಾಡುವ ವಿದ್ಯಾರ್ಥಿಗಳಿಗೆ ಆನ್ಲೈನ್ ಕಂಪ್ಯೂಟರ್ ಪರೀಕ್ಷೆ ನಡೆಸುತ್ತಿಲ್ಲ. ಇಂತಹದುರಲ್ಲಿ ಐಟಿಐ ವಿದ್ಯಾರ್ಥಿಗಳಿಗೆ ಏಕೆ ಆನ್ಲೈನ್ ಪರೀಕ್ಷೆ ನಡೆಸಬೇಕೆಂದು ಪ್ರಶ್ನಿಸಿದರು.
ಜಿಲ್ಲೆಯಲ್ಲಿ 27 ಖಾಸಗಿ ಐಟಿಐಗಳು ಇದೆ. 1,730 ಜನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಅವರ ಹಿತ ಕಾಪಾಡುವ ಕೆಲಸ ಕೇಂದ್ರದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮೇಲಿದೆ ಎಂದರು.
ಪ್ರತಿಭಟನೆ ನಡೆಸಿದ ನಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಖಾಸಗಿ ಐಟಿಐ ಸಂಸ್ಥೆಗಳ ಮುಖ್ಯಸ್ಥರಾದ ಮಂಜುನಾಥಗೌಡ, ಎಂ ವಿ ನಾರಾಯಣಸ್ವಾಮಿ, ರಾಮನಾಥ್, ರವಿ, ವಿಶ್ವನಾಥ್, ಮಂಜುನಾಥ್ ಇದ್ದರು.