ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಕಲಿ ಕ್ಲಿನಿಕ್‌: ಕಡಿವಾಣ ಹಾಕಲು ಮನವಿ

Last Updated 3 ಡಿಸೆಂಬರ್ 2021, 15:43 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ನಕಲಿ ಕ್ಲಿನಿಕ್‌ಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ (ಪುಟ್ಟಣ್ಣಯ್ಯ ಬಣ) ಸದಸ್ಯರು ಇಲ್ಲಿ ಶುಕ್ರವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಗದೀಶ್‌ ಅವರಿಗೆ ಮನವಿ ಸಲ್ಲಿಸಿದರು.

‘ಜಿಲ್ಲೆಯ ಪಟ್ಟಣ ಹಾಗೂ ನಗರ ಪ್ರದೇಶದಲ್ಲಿ ನಕಲಿ ವೈದ್ಯರು ಮತ್ತು ಆರ್‌ಎಂಪಿ ಕ್ಲಿನಿಕ್‌ಗಳ ಹಾವಳಿ ಮಿತಿ ಮೀರಿದೆ. ನಕಲಿ ಕ್ಲಿನಿಕ್‌ಗಳು ನಾಯಿ ಕೊಡೆಗಳಂತೆ ಹಾದಿ ಬೀದಿಯಲ್ಲಿ ತಲೆ ಎತ್ತಿವೆ. ನಕಲಿ ವೈದ್ಯರು ಹಣದಾಸೆಗೆ ಜನರ ಜೀವದ ಜತೆ ಚೆಲ್ಲಾಟವಾಡುತ್ತಿದ್ದಾರೆ’ ಎಂದು ಸಂಘದ ಸದಸ್ಯರು ದೂರಿದರು.

‘ನಕಲಿ ವೈದ್ಯರು ಚಿಕಿತ್ಸೆ ಸೋಗಿನಲ್ಲಿ ರೋಗಿಗಳನ್ನು ಸುಲಿಗೆ ಮಾಡುತ್ತಿದ್ದಾರೆ. ಜಿಲ್ಲೆಯ ಗಡಿ ಭಾಗದಲ್ಲಿ ಇವರ ಹಾವಳಿ ಹೆಚ್ಚಿದೆ. ಈ ದಂಧೆಗೆ ಕಡಿವಾಣ ಹಾಕುವಲ್ಲಿ ಆರೋಗ್ಯ ಇಲಾಖೆ ವಿಫಲವಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ’ ಎಂದು ಸಂಘದ ಜಿಲ್ಲಾ ಅಧ್ಯಕ್ಷ ಎಂ.ಶ್ರೀನಿವಾಸ್ ಆರೋಪಿಸಿದರು.

ಜಿಲ್ಲೆಯಲ್ಲಿ ಸರ್ಕಾರದ ನೀತಿ ನಿಯಮಗಳನ್ನು ಗಾಳಿಗೆ ತೂರಿ ಕ್ಲಿನಿಕ್‌ಗಳನ್ನು ತೆರೆಯಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಗುಣಮಟ್ಟದ ವೈದ್ಯಕೀಯ ಸೇವೆ ಸಿಗುತ್ತಿಲ್ಲ. ಹೀಗಾಗಿ ರೋಗಿಗಳು ಖಾಸಗಿ ಆಸ್ಪತ್ರೆಗಳಿಗೆ ಹೋಗುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳ ವೈದ್ಯರು ಪರಿಸ್ಥಿತಿಯ ಲಾಭ ಪಡೆದು ದುಪ್ಪಟ್ಟು ಹಣ ಪಡೆಯುತ್ತಿವೆ’ ಎಂದು ಕಿಡಿಕಾರಿದರು.

ಒಳ ಒಪ್ಪಂದ: ರೋಗ ಉಲ್ಬಣ: ‘ಇತ್ತೀಚೆಗೆ ಸುರಿದ ಮಳೆಯಿಂದ ಡೆಂಗಿ, ಚಿಕೂನ್‌ ಗುನ್ಯಾ ರೋಗಗಳು ಉಲ್ಬಣಗೊಂಡಿವೆ. ಕೊರೊನಾ ಸೋಂಕಿನಿಂದ ಇಡೀ ದೇಶ ತಲ್ಲಣಗೊಂಡಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಹಣದಾಸೆಗೆ ನಕಲಿ ವೈದ್ಯರ ಜತೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ’ ಎಂದು ಸಂಘಟನೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

‘ನಕಲಿ ಕ್ಲಿನಿಕ್‌ಗಳನ್ನು ಬಂದ್‌ ಮಾಡಿಸಬೇಕು. ನಕಲಿ ವೈದ್ಯರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು. ಸಾಂಕ್ರಾಮಿಕ ರೋಗಗಳ ಚಿಕಿತ್ಸೆಗಾಗಿ ಗ್ರಾಮ ಪಂಚಾಯಿತಿಗೊಂದು ಫೀವರ್ ಕ್ಲಿನಿಕ್‌ ತೆರೆಯಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು. ಹೊರಗಡೆ ಔಷಧ ಮತ್ತು ಮಾತ್ರೆ ಖರೀದಿಸುವಂತೆ ಚೀಟಿ ಬರೆದುಕೊಡುವ ಪದ್ಧತಿ ತಪ್ಪಬೇಕು’ ಎಂದು ಮನವಿ ಮಾಡಿದರು.

ರೈತ ಸಂಘ ತಾಲ್ಲೂಕು ಘಟಕದ ಅಧ್ಯಕ್ಷ ರವಿ, ಜಿಲ್ಲಾ ಘಟಕದ ಸಂಚಾಲಕ ಉದಯ್‌ಗೌಡ, ಸದಸ್ಯ ನವಾಜ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT