ಕೋಲಾರ: ‘ಸರ್ಕಾರಿ ನೌಕರರು ಜನರನ್ನು ಕಚೇರಿಗೆ ಅಲೆಸದೆ ಸಕಾಲಕ್ಕೆ ಕೆಲಸ ಮಾಡಿ ಕೊಡಬೇಕು. ನೌಕರರ ಸಮಸ್ಯೆ ಪರಿಹಾರಕ್ಕೆ ಬದ್ಧ’ ಎಂದು ಸಂಸದ ಎಸ್.ಮುನಿಸ್ವಾಮಿ ಭರವಸೆ ನೀಡಿದರು.
ಇಲ್ಲಿ ಶನಿವಾರ ಜಿಲ್ಲಾ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿ, ‘ನಾನು ಹೆಚ್ಚು ಕಾಲ ಜಿಲ್ಲಾ ಕೇಂದ್ರದಲ್ಲೇ ಇದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದೇನೆ. ಮತ ನೀಡಿರುವ ಜನರ ಹಿತ ಕಾಯುವುದು ನನ್ನ ಜವಾಬ್ದಾರಿ’ ಎಂದರು.
‘ಸರ್ಕಾರಿ ನೌಕರರು ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸದಲ್ಲಿ ನಿರ್ಲಕ್ಷ್ಯ ತೋರಬಾರದು. ಅರ್ಹ ಫಲಾನುಭವಿಗಳನ್ನು ಗುರುತಿಸಿ ವಿಳಂಬ ಮಾಡದೆ ಸರ್ಕಾರದ ಸೇವೆ ತಲುಪಿಸಬೇಕು. ಜಿಲ್ಲೆಯಲ್ಲಿ ನೌಕರರು ಜನರಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ ಎಂಬ ಗೌರವವಿದೆ. ವೃತ್ತಿ ಧರ್ಮ ಪಾಲಿಸಿ ಬದ್ಧತೆಯಿಂದ ಕೆಲಸ ಮಾಡಿ. ಹಳ್ಳಿಗಳಿಂದ ಬರುವ ಜನರ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸಿ’ ಎಂದು ಕಿವಿಮಾತು ಹೇಳಿದರು.
ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಧ್ಯಕ್ಷ ಜಿ.ಸುರೇಶ್ಬಾಬು, ಪ್ರಧಾನ ಕಾರ್ಯದರ್ಶಿ ಎಸ್.ಚೌಡಪ್ಪ, ಖಜಾಂಚಿ ವಿಜಯ್, ಗೌರವಾಧ್ಯಕ್ಷ ರವಿಚಂದ್ರ, ಉಪಾಧ್ಯಕ್ಷ ಪುರುಷೋತ್ತಮ್, ಯುವ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ಕೆ.ಎನ್.ಮಂಜುನಾಥ್ ಹಾಜರಿದ್ದರು.