ಕೋಲಾರ: ‘ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಸ್ಥಾನಗಳಿಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಪೈಕಿ ಒಕ್ಕಲಿಗ ಸಮುದಾಯದ ಏಳಿಗೆಗೆ ಶ್ರಮಿಸುವ ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ’ ಎಂದು ಅಭ್ಯರ್ಥಿ ಪಿ.ಎನ್.ರಮೇಶ್ ಮನವಿ ಮಾಡಿದರು.
ಇಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಸಮುದಾಯದ ಬೆಳವಣಿಗೆಗೆ ಶ್ರಮಿಸುವ ಯೋಗ್ಯ ಅಭ್ಯರ್ಥಿಗಳು ಚುನಾವಣೆಯಲ್ಲಿ ಆಯ್ಕೆಯಾಗಬೇಕು’ ಎಂದು ಆಶಿಸಿದರು.
‘ಕೃಷಿ ಕುಟುಂಬ ಹಿನ್ನೆಲೆಯಿಂದ ಬಂದಿರುವ ನಾನು ಹಲವು ವರ್ಷಗಳಿಂದ ಜನಸೇವೆ ಮಾಡುತ್ತಾ ಮತ್ತು ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಸಮುದಾಯದ ಸುಮಾರು 64 ಸಾವಿರ ಮತದಾರರಿದ್ದು, ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿದರೆ ಅವಳಿ ಜಿಲ್ಲೆಯಲ್ಲಿ ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಮತ್ತು ಆರೋಗ್ಯ ಸೇವೆ ಕಲ್ಪಿಸುತ್ತೇನೆ’ ಎಂದು ಭರವಸೆ ನೀಡಿದರು.
‘ಮಾಲೂರು ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷನಾಗಿ ಜನಸೇವೆ ಮಾಡುತ್ತಿದ್ದೇನೆ. ಒಕ್ಕಲಿಗ ಸಮುದಾಯದ ಕೆಲಸ ಮಾಡಲು ಪಣ ತೊಟ್ಟಿದ್ದು, ಮತದಾರರು ನನ್ನನ್ನು ಗೆಲ್ಲಿಸುವ ಮೂಲಕ ಸೇವೆಗೆ ಅವಕಾಶ ಕಲ್ಪಿಸಬೇಕು. ಡಿ.12ರಂದು ನಡೆಯುವ ಚುನಾವಣೆಯಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಿಂದ 3 ಮಂದಿಯನ್ನು ಆಯ್ಕೆ ಮಾಡಲು ಅವಕಾಶವಿದ್ದು, ನನ್ನನ್ನು ಜಯಶೀಲನಾಗಿ ಮಾಡಬೇಕು’ ಎಂದು ಕೋರಿದರು.
ಒಕ್ಕಲಿಗ ಸಮುದಾಯದ ಮುಖಂಡರಾದ ಬೈರಣ್ಣ, ಮಂಜುನಾಥ್, ಬಾಬು, ಲಕ್ಷ್ಮೀನಾರಾಯಣ, ಶ್ರೀರಾಮಪ್ಪ, ರಾಘವೇಂದ್ರ ಹಾಜರಿದ್ದರು.