ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇ–ಶಕ್ತಿ ಯೋಜನೆಗೆ ಜಿಲ್ಲೆ ಆಯ್ಕೆ

ಪ್ರೇರಕರಿಗೆ ತರಬೇತಿ: ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಗೋವಿಂದಗೌಡ ಹೇಳಿಕೆ
Last Updated 18 ನವೆಂಬರ್ 2020, 11:27 IST
ಅಕ್ಷರ ಗಾತ್ರ

ಕೋಲಾರ: ‘ನಬಾರ್ಡ್‌ನ ಇ-ಶಕ್ತಿ ಯೋಜನೆಯಡಿ ಅವಿಭಜಿತ ಕೋಲಾರ ಜಿಲ್ಲೆಯ 7,300 ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಕಾರ್ಯ ಚಟುವಟಿಕೆಗಳನ್ನು ಆನ್‌ಲೈನ್‌ ವ್ಯಾಪ್ತಿಗೆ ತರಲು 243 ಪ್ರೇರಕರನ್ನು ಆಯ್ಕೆ ಮಾಡಿ ತರಬೇತಿ ನೀಡಲಾಗಿದೆ’ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಗೋವಿಂದಗೌಡ ತಿಳಿಸಿದರು.

ಇಲ್ಲಿ ಬುಧವಾರ ನಬಾರ್ಡ್, ಅಫೆಕ್ಸ್ ಬ್ಯಾಂಕ್ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ಇ-ಶಕ್ತಿ ಯೋಜನೆ ಅನುಷ್ಠಾನ ಕುರಿತ ಸಭೆಯಲ್ಲಿ ಮಾತನಾಡಿದರು.

‘ನಮ್ಮ ಡಿಸಿಸಿ ಬ್ಯಾಂಕ್‌ ದೇಶದಲ್ಲೇ ಅತಿ ಹೆಚ್ಚು ಸ್ತ್ರೀಶಕ್ತಿ ಸ್ವಸಹಾಯ ಸಂಘಗಳಿಗೆ ಸಾಲ ನೀಡಿದೆ. ಈ ಹಿನ್ನೆಲೆಯಲ್ಲಿ ಸ್ತ್ರೀಶಕ್ತಿ ಸಂಘಗಳ ಕಾರ್ಯ ಚಟುವಟಿಕೆಗಳನ್ನು ಇ-ಶಕ್ತಿ ಯೋಜನೆ ವ್ಯಾಪ್ತಿಗೆ ತರುವ ಪ್ರಾಯೋಗಿಕ ಪ್ರಯತ್ನಕ್ಕೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ’ ಎಂದು ವಿವರಿಸಿದರು.

‘ಯೋಜನೆಯ ಮೊದಲ ಹಂತದಲ್ಲಿ 7,300 ಮಹಿಳಾ ಸ್ವಸಹಾಯ ಸಂಘಗಳನ್ನು ಇ-ಶಕ್ತಿ ವ್ಯಾಪ್ತಿಗೆ ತರಲಾಗುತ್ತದೆ. 73 ಸಾವಿರ ಮಹಿಳೆಯರು ಈ ಸಂಘಗಳ ಸದಸ್ಯರಾಗಿದ್ದಾರೆ. 2021ರ ಮಾರ್ಚ್ ಅಂತ್ಯದೊಳಗೆ ಮೊದಲ ಹಂತ ಪೂರ್ಣಗೊಳಿಸಬೇಕು’ ಎಂದು ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು.

ಕಾಯಕ ಯೋಜನೆ: ‘ಮಹಿಳಾ ಸ್ವಸಹಾಯ ಸಂಘಗಳಿಗೆ ಕಾಯಕ ಯೋಜನೆಯಡಿ ಮೇಣದ ಬತ್ತಿ, ಊದು ಬತ್ತಿ ತಯಾರಿಕೆ, ಹೊಲಿಗೆ ಸೇರಿದಂತೆ ಸ್ವಯಂ ಉದ್ಯೋಗ ಕೈಗೊಳ್ಳಲು ₹ 10 ಲಕ್ಷದವರೆಗೆ ಸಾಲ ಸಿಗಲಿದೆ. ಸಾಲ ಯೋಜನೆಗೆ ನಬಾರ್ಡ್ ಹಾಗೂ ಅಫೆಕ್ಸ್ ಬ್ಯಾಂಕ್ ಪ್ರೇರಣೆಯಾಗಿ ನಿಂತಿವೆ’ ಎಂದು ಮಾಹಿತಿ ನೀಡಿದರು.

‘ಮಹಿಳಾ ಸ್ವಸಹಾಯ ಸಂಘಗಳ ಮಾಸಿಕ ಸಭೆ, ಸಾಲ ವಿತರಣೆ, ಸಾಲ ಮರುಪಾವತಿ, ಉಳಿತಾಯ ಸೇರಿದಂತೆ ಎಲ್ಲಾ ಚಟುವಟಿಕೆಗಳು ಆನ್‌ಲೈನ್‌ನಲ್ಲಿ ದಾಖಲಾಗುತ್ತವೆ. ಎಲ್ಲಾ ಸಂಘಗಳಿಗೂ ಬಳಕೆದಾರರ ಐ.ಡಿ ಹಾಗೂ ಪಾಸ್‌ವರ್ಡ್‌ ನೀಡಲಾಗುತ್ತದೆ. 30 ಸಂಘಗಳಿಗೆ ಒಬ್ಬರಂತೆ ನೇಮಕಗೊಂಡ ಪ್ರೇರಕರು ಆನ್‌ಲೈನ್‌ಗೆ ದತ್ತಾಂಶ ಅಡಕ ಮಾಡುತ್ತಾರೆ’ ಎಂದು ತಿಳಿಸಿದರು.

‘ಸಂಘಗಳ ಸಂಪೂರ್ಣ ದತ್ತಾಂಶದ ಮಾಹಿತಿ ಡಿಸಿಸಿ ಬ್ಯಾಂಕ್ ಸಾಫ್ಟ್‌ವೇರ್‌ಗೆ ಬರುವುದರಿಂದ ಸಂಘಗಳ ಸದೃಢತೆ ಸಾಧ್ಯವಾಗುತ್ತದೆ. ಇ-ಶಕ್ತಿ ಯೋಜನೆಯಿಂದ ಮಹಿಳಾ ಸ್ವಸಹಾಯ ಸಂಘಗಳ ಕಾರ್ಯ ಚಟುವಟಿಕೆಗಳಲ್ಲಿ ಪಾರದರ್ಶಕತೆ ಬರಲಿದೆ ಮತ್ತು ಅವ್ಯವಹಾರಕ್ಕೆ ಅವಕಾಶ ಇರುವುದಿಲ್ಲ. ಜತೆಗೆ ಸದಸ್ಯರ ಹಣಕ್ಕೆ ಭದ್ರತೆ ಇರುತ್ತದೆ’ ಎಂದರು.

ಗೌರವಧನ: ‘ಮಹಿಳಾ ಸ್ವಸಹಾಯ ಸಂಘಗಳಲ್ಲಿ ಹೆಚ್ಚು ಶಿಕ್ಷಣ ಪಡೆದ ಬುದ್ಧಿವಂತ ಹೆಣ್ಣು ಮಕ್ಕಳನ್ನೇ ಪ್ರೇರಕರಾಗಿ ಆಯ್ಕೆ ಮಾಡಲಾಗಿದೆ. ಇವರಿಗೆ  ತಿಂಗಳಿಗೆ ₹ 4,200 ಗೌರವಧನ ಸಿಗಲಿದೆ. ಜತೆಗೆ ಮೊಬೈಲ್‌ ಬಳಕೆ ಸೇವೆಗಾಗಿ ₹ 250 ಸಿಗಲಿದೆ’ ಎಂದು ನಬಾರ್ಡ್ ಸಹಾಯಕ ಪ್ರಧಾನ ವ್ಯವಸ್ಥಾಪಕ ನಟರಾಜನ್ ವಿವರಿಸಿದರು.

ಅಫೆಕ್ಸ್ ಬ್ಯಾಂಕ್ ಮುಖ್ಯ ಪ್ರಧಾನ ವ್ಯವಸ್ಥಾಪಕಿ ದಾಕ್ಷಾಯಿಣಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ನಾಗಿರೆಡ್ಡಿ, ವ್ಯವಸ್ಥಾಪಕ ನಿರ್ದೇಶಕ ರವಿ, ಜಿಲ್ಲಾ ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕ ಶ್ರೀರಾಮಯ್ಯ, ಸಹಕಾರ ಸಂಘಗಳ ಉಪ ನಿಬಂಧಕ ಸಿದ್ದನಗೌಡ ನೀಲಪ್ಪನವರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT