ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಕೆಶಿ–ಶಾಸಕ ಶ್ರೀನಿವಾಸಗೌಡ ಭೇಟಿ: ಕುತೂಹಲ ಕೆರಳಿಸಿದ ಉಭಯ ನಾಯಕರ ಮಾತುಕತೆ

Last Updated 15 ಸೆಪ್ಟೆಂಬರ್ 2021, 16:26 IST
ಅಕ್ಷರ ಗಾತ್ರ

ಕೋಲಾರ: ಜೆಡಿಎಸ್‌ ಶಾಸಕ ಕೆ.ಶ್ರೀನಿವಾಸಗೌಡರು ಕಾಂಗ್ರೆಸ್‌ ಸೇರುವ ಮಾತು ಬಲವಾಗಿ ಕೇಳಿಬರುತ್ತಿರುವ ಬೆನ್ನಲ್ಲೇ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಬುಧವಾರ ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ.

ಶ್ರೀನಿವಾಸಗೌಡರು ಜೆಡಿಎಸ್‌ ತೊರೆಯುವ ಬಗ್ಗೆ ಕ್ಷೇತ್ರದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಚರ್ಚೆಯಾಗುತ್ತಿದೆ. ಈ ನಡುವೆ ಕೆ.ಸಿ ವ್ಯಾಲಿ ಯೋಜನೆ ವಿಚಾರವಾಗಿ ಎಚ್‌.ಡಿ.ಕುಮಾರಸ್ವಾಮಿ ಅವರ ಹೇಳಿಕೆಯನ್ನು ಶ್ರೀನಿವಾಸಗೌಡರು ಸಾರ್ವಜನಿಕವಾಗಿ ಟೀಕಿಸಿದ್ದರು.

ಶ್ರೀನಿವಾಸಗೌಡರ ಈ ನಡೆಯಿಂದ ಕೆರಳಿದ್ದ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರು ಪಕ್ಷವು ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಿದೆ ಎಂದು ಇತ್ತೀಚೆಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದರು. ಈ ಎಲ್ಲಾ ಬೆಳವಣಿಗೆಗಳ ನಡುವೆ ಶ್ರೀನಿವಾಸಗೌಡರು ವರಿಷ್ಠರಿಗೆ ಸೆಡ್ಡು ಹೊಡೆದು ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್‌ರನ್ನು ಭೇಟಿಯಾಗಿ ಒಂದು ತಾಸಿಗೂ ಹೆಚ್ಚು ಕಾಲ ಚರ್ಚೆ ನಡೆಸಿ ಪಕ್ಷ ತೊರೆಯುವ ಸಂದೇಶ ರವಾನಿಸಿದ್ದಾರೆ.

ಶ್ರೀನಿವಾಸಗೌಡರು ಕಳೆದ ಕೆಲ ದಿನಗಳಿಂದ ಜೆಡಿಎಸ್‌ನ ಸಭೆ, ಸಮಾರಂಭಗಳಿಂದ ದೂರ ಉಳಿದಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪುತ್ರನನ್ನು ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದಿಂದ ಕಣಕ್ಕಿಳಿಸಲು ತೆರೆಮರೆಯ ಕಸರತ್ತು ನಡೆಸಿರುವ ಅವರು ಶಿವಕುಮಾರ್‌ರನ್ನು ಭೇಟಿಯಾಗಿರುವುದು ಹೆಚ್ಚು ಮಹತ್ವ ಪಡೆದಿದೆ.

ಭೇಟಿ ಸಂಬಂಧ ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದ ಶ್ರೀನಿವಾಸಗೌಡರು, ‘ವೈಯಕ್ತಿಕ ವಿಚಾರಕ್ಕೆ ಶಿವಕುಮಾರ್‌ರನ್ನು ಭೇಟಿಯಾಗಿದ್ದೇನೆ. ಅವರೊಂದಿಗೆ ಯಾವುದೇ ರಾಜಕೀಯ ವಿಚಾರ ಚರ್ಚಿಸಿಲ್ಲ. ಜೆಡಿಎಸ್‌ ತೊರೆಯುವುದಾದರೆ ಸಾರ್ವಜನಿಕವಾಗಿಯೇ ಹೇಳುತ್ತೇನೆ’ ಎಂದು ತಿಳಿಸಿದರು.

‘ನಾನು 4 ಬಾರಿಯೂ ಬೇರೆ ಬೇರೆ ಪಕ್ಷದಿಂದ ಗೆದ್ದು ಶಾಸಕನಾಗಿದ್ದೇನೆ. ಮಾಧ್ಯಮಗಳಿಗೆ ಸುಳ್ಳು ಹೇಳುವುದಿಲ್ಲ. ಸಮಯ ಬಂದಾಗ ಎಲ್ಲಾ ಮಾತನಾಡುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT