ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಎನ್‌ಆರ್‌ ಜಿಲ್ಲಾ ಆಸ್ಪತ್ರೆ ವೈದ್ಯರ ಕೊರತೆ: ನೇಮಕಾತಿಗೆ ಮೀನಮೇಷ

ಎಸ್‌ಎನ್‌ಆರ್‌ ಜಿಲ್ಲಾ ಆಸ್ಪತ್ರೆ: ಚಿಕಿತ್ಸೆಗೆ ಗಂಟೆಗಟ್ಟಲೇ ಕಾಯುವ ರೋಗಿಗಳು
Last Updated 14 ಫೆಬ್ರುವರಿ 2021, 16:21 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲಾ ಕೇಂದ್ರದ ಶ್ರೀ ನರಸಿಂಹರಾಜ (ಎಸ್‌ಎನ್ಆರ್‌) ಜಿಲ್ಲಾ ಆಸ್ಪತ್ರೆಯು ವೈದ್ಯಕೀಯ ಸಿಬ್ಬಂದಿ ಕೊರತೆಯಿಂದ ರೋಗಗ್ರಸ್ತವಾಗಿದ್ದು, ರೋಗಿಗಳು ಚಿಕಿತ್ಸೆಗೆ ಗಂಟೆಗಟ್ಟಲೇ ಕಾಯುವ ಪರಿಸ್ಥಿತಿಯಿದೆ.

ಮೈಸೂರಿನ ಮಹಾರಾಜ ಕೃಷ್ಣರಾಜ ಒಡೆಯರ್‌ ಅವರಿಂದ 1937ರಲ್ಲಿ ಲೋಕಾರ್ಪಣೆಯಾದ ಈ ಆಸ್ಪತ್ರೆಯು 84 ವರ್ಷಗಳ ಭವ್ಯ ಇತಿಹಾಸ ಹೊಂದಿದೆ. ಒಂದು ಕಾಲಕ್ಕೆ ಸರ್ಕಾರಿ ಆಸ್ಪತ್ರೆಗಳಂತೆಯೇ ಹದಗೆಟ್ಟಿದ್ದ ಈ ಆಸ್ಪತ್ರೆಯು ಕಳೆದ ಮೂರ್‌್ನಾಲ್ಕು ವರ್ಷದಲ್ಲಿ ಸಾಕಷ್ಟು ಸುಧಾರಣೆ ಕಂಡಿದೆ.

ನಗರ ಹಾಗೂ ಜಿಲ್ಲೆಯ ರೋಗಿಗಳು ಖಾಸಗಿ ಆಸ್ಪತ್ರೆಗಳ ಬದಲಿಗೆ ಎಸ್‌ಎನ್‌ಆರ್‌ ಆಸ್ಪತ್ರೆಯತ್ತ ಮುಖ ಮಾಡಿದ್ದಾರೆ. ಜತೆಗೆ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಂಧ್ರಪ್ರದೇಶ ಹಾಗೂ ತಮಿಳುನಾಡಿನಿಂದಲೂ ಚಿಕಿತ್ಸೆಗಾಗಿ ಈ ಆಸ್ಪತ್ರೆಗೆ ಬರುತ್ತಾರೆ.

ಸ್ವಚ್ಛತೆ, ಔಷಧಗಳ ಲಭ್ಯತೆ, ಸುಸಜ್ಜಿತ ವಾರ್ಡ್‌ಗಳು ಹಾಗೂ ಮೂಲಸೌಕರ್ಯ ವಿಷಯದಲ್ಲಿ ಆಸ್ಪತ್ರೆಯು ಹೆಚ್ಚಿನ ಪ್ರಗತಿ ಸಾಧಿಸುವ ಮೂಲಕ ಖಾಸಗಿ ಆಸ್ಪತ್ರೆಗಳಿಗೆ ಸೆಡ್ಡು ಹೊಡೆಯುತ್ತಿದೆ. ಆದರೆ, ಆಸ್ಪತ್ರೆಯಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಕೊರತೆಯು ರೋಗಿಗಳನ್ನು ತೀವ್ರವಾಗಿ ಬಾಧಿಸುತ್ತಿದೆ.

560 ಹಾಸಿಗೆ ಸಾಮರ್ಥ್ಯದ ಈ ಆಸ್ಪತ್ರೆಯು 162 ಎಕರೆ ವಿಸ್ತಾರವಾಗಿದೆ. ಆಸ್ಪತ್ರೆಯಲ್ಲಿ ಸದ್ಯ 19 ವಿಭಾಗಗಳಿದ್ದು, ಪ್ರತಿನಿತ್ಯ 3 ಸಾವಿರಕ್ಕೂ ಹೆಚ್ಚು ಹೊರ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಜತೆಗೆ ಸುಮಾರು 400 ಮಂದಿ ಒಳ ರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಿಂಗಳಿಗೆ ಈ ಆಸ್ಪತ್ರೆಯಲ್ಲಿ ಸರಾಸರಿ 350 ಶಸ್ತ್ರಚಿಕಿತ್ಸೆ ಆಗುತ್ತಿವೆ.

ತೀವ್ರ ಪೈಪೋಟಿ: ಮುಖ್ಯವಾಗಿ ಹೆರಿಗೆ ಪ್ರಮಾಣದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಎಸ್‌ಎನ್‌ಆರ್‌ ಆಸ್ಪತ್ರೆಯು ಖಾಸಗಿ ಆಸ್ಪತ್ರೆಗಳಿಗೆ ತೀವ್ರ ಪೈಪೋಟಿ ನೀಡುತ್ತಿದೆ. ಈ ಹಿಂದೆ ಇಲ್ಲಿನ ವೈದ್ಯಕೀಯ ಸಿಬ್ಬಂದಿಯು ಗರ್ಭಿಣಿಯರನ್ನು ಬೇರೆ ಆಸ್ಪತ್ರೆಗಳಿಗೆ ಹೆರಿಗೆಗೆ ಕಳುಹಿಸುತ್ತಿದ್ದರು ಎಂಬ ಆರೋಪವಿತ್ತು. ಈಗ ವ್ಯವಸ್ಥೆ ಬದಲಾಗಿದ್ದು, ತಿಂಗಳಿಗೆ ಸರಾಸರಿ 500 ಹೆರಿಗೆ ಆಗುತ್ತಿವೆ. ಖಾಸಗಿ ಆಸ್ಪತ್ರೆಗಳಿಂದ ಈ ಆಸ್ಪತ್ರೆಗೆ ಬರುವ ಸೂಚಿತ (ರೆಫರ್‌್ಡ) ಹೆರಿಗೆ ಪ್ರಕರಣಗಳ ಸಂಖ್ಯೆಯು ಏರಿಕೆಯಾಗಿದೆ.

ಹೆರಿಗೆ ಪ್ರಕರಣಗಳಲ್ಲಿ ಖಾಸಗಿ ಆಸ್ಪತ್ರೆಗಳು ವೈದ್ಯಕೀಯ ವೆಚ್ಚದ ನೆಪದಲ್ಲಿ ನಡೆಸುತ್ತಿದ್ದ ಬಡ ಜನರ ಸುಲಿಗೆಗೆ ಎಸ್‌ಎನ್‌ಆರ್‌ ಆಸ್ಪತ್ರೆಯು ಪರೋಕ್ಷವಾಗಿ ಕಡಿವಾಣ ಹಾಕಿದೆ. ಆದರೂ ಆರೋಗ್ಯ ಇಲಾಖೆಯು ಆಸ್ಪತ್ರೆಗೆ ಅಗತ್ಯ ವೈದ್ಯಕೀಯ ಸಿಬ್ಬಂದಿ ಮಂಜೂರು ಮಾಡದೆ ಕೈಚೆಲ್ಲಿದೆ.

ಮಾನದಂಡ: ಭಾರತೀಯ ಸಾರ್ವಜನಿಕ ಆರೋಗ್ಯ ಸೇವೆಗಳ ಮಾನದಂಡ (ಐಪಿಎಚ್‌ಎಸ್‌) ಪ್ರಕಾರ 500 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯಲ್ಲಿ ಕನಿಷ್ಠ 60 ಮಂದಿ ವೈದ್ಯರಿರಬೇಕು. ಆದರೆ, ಎಸ್‌ಎನ್‌ಆರ್‌ ಆಸ್ಪತ್ರೆಯಲ್ಲಿ ಕೇವಲ 32 ವೈದ್ಯರಿದ್ದಾರೆ.

ಐಪಿಎಚ್‌ಎಸ್‌ ಮಾನದಂಡದ ಪ್ರಕಾರ ಹೊರ ರೋಗಿಗಳ ವಿಭಾಗದಲ್ಲಿ ಒಬ್ಬ ವೈದ್ಯ ದಿನಕ್ಕೆ 30 ಮಂದಿಗೆ ಚಿಕಿತ್ಸೆ ನೀಡಬೇಕು. ಆಗ ಮಾತ್ರ ರೋಗಿಗಳಿಗೆ ಗುಣಮಟ್ಟದ ವೈದ್ಯಕೀಯ ಸೇವೆ ಸಿಗಲು ಸಾಧ್ಯ. ಆದರೆ, ಎಸ್‌ಎನ್‌ಆರ್‌ ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಿಂದ ಒಬ್ಬ ವೈದ್ಯ ದಿನದಲ್ಲಿ 150ಕ್ಕೂ ಹೆಚ್ಚು ಹೊರ ರೋಗಿಗಳಿಗೆ ಚಿಕಿತ್ಸೆ ನೀಡುವ ಪರಿಸ್ಥಿತಿ ಸೃಷ್ಟಿಯಾಗಿದೆ.

‘ವೈದ್ಯರ ಕೊರತೆಯಿಂದಾಗಿ ಹೆಚ್ಚಿನ ಅವಧಿವರೆಗೆ ಕೆಲಸ ಮಾಡುತ್ತಿದ್ದೇವೆ. ವಾರದ ರಜೆ ಸಹ ಪಡೆಯಲು ಸಾಧ್ಯವಾಗುತ್ತಿಲ್ಲ. ಇದರಿಂದ ದೈಹಿಕವಾಗಿ ತುಂಬಾ ಶ್ರಮವಾಗುತ್ತಿದೆ. ಕಾರ್ಯ ಒತ್ತಡದಿಂದ ಮಾನಸಿಕವಾಗಿ ಸಾಕಷ್ಟು ಕುಗ್ಗಿದ್ದೇವೆ’ ಎಂದು ಆಸ್ಪತ್ರೆ ವೈದ್ಯರು ‘ಪ್ರಜಾವಾಣಿ’ ಬಳಿ ಅಳಲು ತೋಡಿಕೊಂಡರು.

ವೈದ್ಯಕೀಯ ಸಿಬ್ಬಂದಿ ಸಮಸ್ಯೆಯು ಆಸ್ಪತ್ರೆಯ ದೈನಂದಿನ ಕಾರ್ಯ ಚಟುವಟಿಕೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಒಂದೆಡೆ ರೋಗಿಗಳು ಗುಣಮಟ್ಟದ ವೈದ್ಯಕೀಯ ಸೇವೆಯಿಂದ ವಂಚಿತರಾಗುತ್ತಿದ್ದಾರೆ. ಮತ್ತೊಂದೆಡೆ ಹಾಲಿ ವೈದ್ಯರ ಮೇಲೆ ಕಾರ್ಯ ಒತ್ತಡ ಹೆಚ್ಚಿದೆ. ಅತಿಯಾದ ಕಾರ್ಯ ಒತ್ತಡದಿಂದ ವೈದ್ಯರ ಕಾರ್ಯಕ್ಷಮತೆ ಕುಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT