ಶ್ರೀನಿವಾಸಪುರ: ಪಟ್ಟಣದಲ್ಲಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೃಷಿ ಮತ್ತು ಎಪಿಎಂಸಿಗೆ ಸಂಬಂಧಿಸಿದಂತೆ ಹೊರಡಿಸಿರುವ ತಿದ್ದುಪಡಿ ಮಸೂದೆಗಳನ್ನು ಖಂಡಿಸಿ ಸಂಪೂರ್ಣ ಶಾಂತಿಯುತ ಬಂದ್ ಆಚರಿಸಲಾಯಿತು.
ಪಟ್ಟಣದಲ್ಲಿ ಅಂಗಡಿಗಳನ್ನು ಮುಚ್ಚಲಾಗಿತ್ತು. ಯಾವುದೇ ವಾಹನ ಸಂಚಾರ ಇರಲಿಲ್ಲ. ಪೆಟ್ರೋಲ್ ಬಂಕ್ಗಳು ಕಾರ್ಯನಿರ್ವಹಿಸಲಿಲ್ಲ. ಸರ್ಕಾರಿ ಕಚೇರಿಗಳು ತೆರೆದಿದ್ದವಾದರೂ ಜನರಿಲ್ಲದೆ ಬಿಕೋ ಎನ್ನುತ್ತಿದ್ದವು. ಬೆಳಿಗ್ಗೆ ಗ್ರಾಮೀಣ ಪ್ರದೇಶದಿಂದ ಅಗತ್ಯ ವಸ್ತುಗಳ ಮಾರಾಟ ಹಾಗೂ ಖರೀದಿಗಾಗಿ ಬಂದಿದ್ದ ಜನರು ಸಮೀಪದ ಗ್ರಾಮಗಳಿಗೆ ನಡೆದು ಹೋಗುವ ದೃಶ್ಯ ಕಂಡುಬಂತು.
ತಾಲ್ಲೂಕು ರೈತ, ಕಾರ್ಮಿಕ, ದಲಿತ ಹಾಗೂ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು.
ಕಾರ್ಯಕರ್ತರು ಬೈಕ್ ರ್ಯಾಲಿ ನಡೆಸಿ ಸರ್ಕಾರಗಳ ಜನ ವಿರೋಧಿ ನೀತಿಗಳ ವಿರುದ್ಧ ಗ್ರಾಮೀಣ ಪ್ರದೇಶದ ಜನರಲ್ಲಿ ಅರಿವು ಮೂಡಿಸಿದರು.
ತಾಲ್ಲೂಕಿನ ರಾಯಲ್ಪಾಡ್, ಗೌನಿಪಲ್ಲಿ, ಸೋಮಯಾಜಲಹಳ್ಳಿ, ಲಕ್ಷ್ಮೀಸಾಗರ, ರೋಜೇನಹಳ್ಳಿ ಕ್ರಾಸ್, ರೋಣೂರು, ಯಲ್ದೂರು ಗ್ರಾಮಗಳಲ್ಲಿ ಬಂದ್ ಆಚರಿಸಲಾಯಿತು. ಬೆಂಗಳೂರು– ಮದನಪಲ್ಲಿ ರಸ್ತೆ, ಶ್ರೀನಿವಾಸಪುರ– ಮುಳಬಾಗಿಲು ರಸ್ತೆಯಲ್ಲಿ ಕೆಪಿಆರ್ಎಸ್, ಕೆಆರ್ಆರ್ಎಸ್, ಸಿಐಟಿಯು, ದಲಿತ ಹಾಗೂ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.