ಕೋಲಾರ: ‘ನಾನು ಕೇವಲ ಒಮ್ಮೆ ಶಾಸಕನಾದವನಲ್ಲ. ಸಚಿವನಾಗಿಯೂ ಕೆಲಸ ಮಾಡಿದ್ದೇನೆ. ಯಾವ ಸಂದರ್ಭದಲ್ಲಿ ಏನು ಮಾಡಬೇಕು ಎಂಬುದು ನನಗೂ ಗೊತ್ತಿದೆ’ ಎಂದು ಶಾಸಕ ಕೆ.ಶ್ರೀನಿವಾಸಗೌಡ ತಿಳಿಸಿದರು.
ನಗರದ ತಾಲ್ಲೂಕು ಕಚೇರಿಯಲ್ಲಿ ಮಂಗಳವಾರ ಸಾರ್ವಜನಿಕರ ಕುಂದುಕೊರತೆ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
‘ನಮ್ಮ ವಿರುದ್ಧ ಕೆಲವರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ.ಶಾಸಕ ಕೆ.ಆರ್.ರಮೇಶ್ ಕುಮಾರ್ ನೇತೃತ್ವದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾಗ ಬಾದಾಮಿ ಕ್ಷೇತ್ರದ ಮತದಾರರ ಅಭಿಪ್ರಾಯ ಪಡೆದು ಹೇಳುವುದಾಗಿ ತಿಳಿಸಿದ್ದರು. ನಾವು ಹೋಗಿ ಬಂದ ಮೇಲೆ ಹಲವರು ಭೇಟಿ ನೀಡಿ ಆಹ್ವಾನಿಸಿದ್ದಾರೆ. ಒಬ್ಬ ವ್ಯಕ್ತಿ ಮಾತು ಹೇಳಿಕೊಂಡು ಅವರು ನಿರ್ಧಾರ ಬದಲಾಯಿಸಿಕೊಳ್ಳಲು ಸಾಧ್ಯವಿಲ್ಲ. ಅವರುಇಲ್ಲಿಗೆ ಬಂದರೆ ಕ್ಷೇತ್ರ ಬಿಟ್ಟು ಕೊಡಲು ಸಿದ್ಧನಿದ್ದೇನೆ. ಅವರು ಬರದಿದ್ದರೆ ನಾನೇ ಸ್ಪರ್ಧಿಸುತ್ತೇನೆ’ ಎಂದು ಹೇಳಿದರು.
‘ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕೆ.ಎಚ್. ಮುನಿಯಪ್ಪ ಸ್ಪರ್ಧಿಸಿದರೆ ಅವರ ಪರ ಕೆಲಸ ಮಾಡುತ್ತೇನೆ’ ಎಂದರು.
‘ಯರಗೋಳ್ ಜಲಾಶಯ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಪಂಪ್ಸೆಟ್ ಅಳವಡಿಕೆ ಪ್ರಗತಿಯಲ್ಲಿದೆ’ ಎಂದು ತಿಳಿಸಿದರು.
‘ತಾಲ್ಲೂಕು ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆ ಸಭೆ ನಡೆಸಿದಾಗಿನಿಂದ ಆಡಳಿತ ಚುರುಕುಗೊಂಡಿದೆ. ಪ್ರತಿವಾರ ಬಡವರಿಗೆ ಹಕ್ಕು ಪತ್ರ ನೀಡಲಾಗುತ್ತಿದೆ. ಏನೇ ಸಮಸ್ಯೆ ಇದ್ದರೂ ಸ್ಥಳದಲ್ಲೇ ಅರ್ಜಿ ವಿಲೇವಾರಿ ಮಾಡಲಾಗುತ್ತಿದೆ’ ಎಂದರು.
ಶಿಕ್ಷಣ, ಚಿಕಿತ್ಸೆಗೆ ನೆರವು:ಇಫ್ಕೊ ಟೋಕಿಯೊ ಸಂಸ್ಥೆಯ ಅಧ್ಯಕ್ಷರೂ ಆಗಿರುವ ಶ್ರೀನಿವಾಸಗೌಡ,ನಗರದತಮ್ಮ ನಿವಾಸದಲ್ಲಿ ಶಿಕ್ಷಣ ಮತ್ತು ವೈದ್ಯಕೀಯ ವೆಚ್ಚಕ್ಕೆ ಆರ್ಥಿಕ ನೆರವು ವಿತರಿಸಿದರು.
‘ಶಾಸಕ ಮತ್ತು ಸಚಿವನಾಗಿ ಕೆಲಸ ಮಾಡಿದ್ದೇನೆ. ಆದರೆ, ಶಿಕ್ಷಣ ಮತ್ತು ವೈದ್ಯಕೀಯ ವೆಚ್ಚಕ್ಕೆ ನೆರವು ಕಲ್ಪಿಸುವುದು ಹೆಚ್ಚು ಸಂತಸ ತಂದಿದೆ’ ಎಂದರು.
‘ಸಂಸ್ಥೆಯ ನೆರವಿನಿಂದ ಹಲವಾರು ವಿದ್ಯಾರ್ಥಿಗಳು ಶಿಕ್ಷಣ ಮುಂದುವರಿಸಿದ್ದಾರೆ. ರೈತರ ವೈದ್ಯಕೀಯ ವೆಚ್ಚವನ್ನು ಸಂಸ್ಥೆ ಭರಿಸಿದೆ. ಈ ದಿನ ₹ 2.5 ಲಕ್ಷ ಮೊತ್ತದ ಚೆಕ್ ವಿತರಿಸಲಾಗಿದೆ’ ಎಂದು ಹೇಳಿದರು.