ಶ್ರೀನಿವಾಸಪುರ: ತಾಲ್ಲೂಕು ಆಡಳಿತ ಹಾಗೂ ಪುರಸಭೆ ಕೊರೊನಾ ವೈರಾಣು ಹರಡದಂತೆ ತಡೆಯಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಬೇಕು. ಗಡಿ ಭಾಗದಲ್ಲಿ ವಾಹನ ಸಂಚಾರದ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಕುಡಿಯುವ ನೀರು ಪೂರೈಕೆ ಹಾಗೂ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು.ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಲ್ಲಿ ವೈರಾಣು ನಿರೋಧಕ ಔಷಧ ಸಿಂಪಡಣೆ ಮಾಡಬೇಕು ಹಾಗೂ ಚರಂಡಿ ಸ್ವಚ್ಛಗೊಳಿಸಿ ಬ್ಲೀಚಿಂಗ್ ಪೌಡರ್ ಸಿಂಪಡಿಸಬೇಕು ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಸಿಬ್ಬಂದಿ ಮನೆ ಮನೆಗೆ ಹೋಗಿ ಕಸ ಪಡೆದು ವಿಲೇವಾರಿಮಾಡಬೇಕು. ತಾಲ್ಲೂಕಿನ 53 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಕೊಳವೆ ಬಾವಿ ಕೊರೆಸಬೇಕು. ನೀರಿನ ಲಭ್ಯತೆ ಇಲ್ಲದ ಕಡೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು ಎಂದು ಹೇಳಿದರು.
ಪ್ರತಿ ವರ್ಷ ಪಟ್ಟಣದಲ್ಲಿ ಜನ್ಮಭೂಮಿ ವೇದಿಕೆ ವತಿಯಿಂದ ನಡೆಸಲಾಗುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಈ ವರ್ಷ ರದ್ದುಪಡಿಸಲಾಗಿದೆ ಎಂದು ಹೇಳಿದರು.