ಕೋಲಾರ: ನಗರದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ನೀರಿನ ಪೈಪು ಅಳವಡಿಸಲು ಕಲ್ಲು ಒಡೆಯುವ, ಚಪ್ಪಡಿ ಕಲ್ಲು ಎತ್ತುವ ಹಾಗೂ ಮಣ್ಣು ಹೊರುವುದು ಸೇರಿದಂತೆ ವಿವಿಧ ಕೆಲಸಗಳಿಗೆ ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿಗಳನ್ನು ಬಳಸಿಕೊಂಡಿರುವುದು ಗೊತ್ತಾಗಿದೆ.
ಶುಕ್ರವಾರ (ಮಾರ್ಚ್15) ಮಧ್ಯಾಹ್ನ 8, 9 ಹಾಗೂ 10ನೇ ತರಗತಿಯ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಈ ಕೆಲಸ ಮಾಡಿಸಿಕೊಂಡಿರುವುದು ತಿಳಿದುಬಂದಿದೆ. ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪಕ್ಕವೇ ಈ ಪ್ರೌಢಶಾಲೆ ಇದೆ.
ಮಕ್ಕಳು ಕೆಲಸ ಮಾಡುವ ದೃಶ್ಯಗಳನ್ನು ಸ್ಥಳದಲ್ಲಿದ್ದವರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಪ್ರೊಫೆಸರ್ ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಯುವ ಘಟಕದ ಅಧ್ಯಕ್ಷ ಕಲ್ವಮಂಜಲಿ ರಾಮುಶಿವಣ್ಣ ಅವರು ವಿಡಿಯೊ ಹಾಗೂ ಫೋಟೊ ಹಂಚಿಕೊಂಡಿದ್ದಾರೆ.
ಪ್ರೌಢಶಾಲೆ ವಿಭಾಗದ ಉಪಪ್ರಾಂಶುಪಾಲೆ ರಾಧಮ್ಮ, ಶಿಕ್ಷಕರು ಹಾಗೂ ಸಿಬ್ಬಂದಿಯು ಮಕ್ಕಳನ್ನು ಈ ಕೆಲಸಕ್ಕೆ ಬಳಸಿಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
‘ಇಂಥ ಕೆಲಸಗಳಿಗೆ ಮಕ್ಕಳನ್ನು ಬಳಸಿ ಕೊಂಡಿರುವುದು ಮೊದಲ ತಪ್ಪು. ಅಲ್ಲದೇ, ಇದೇ 25ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದೆ. ಪರೀಕ್ಷೆಗೆ ಸಿದ್ಧರಾಗಬೇಕಿದ್ದ ವಿದ್ಯಾರ್ಥಿಗಳಿಂದ ಮೂರು ದಿನ ಕೆಲಸ ಮಾಡಿಸಿದ್ದಾರೆ’ ಎಂದು ಅವರು ದೂರಿದ್ದಾರೆ.