ಬಂಗಾರಪೇಟೆ: ಬಾಲಕನಿಗೆ ವಿದ್ಯುತ್ ಸ್ಪರ್ಶವಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತಮ್ಮೇನಹಳ್ಳಿ ಗ್ರಾಮದ ಬಳಿ ಸೋಮವಾರ ನಡೆದಿದೆ.
ತಮ್ಮೇನಹಳ್ಳಿ ಗ್ರಾಮದ ಕೃಷ್ಣಮೂರ್ತಿ, ಭುವನೇಶ್ವರಿ ದಂಪತಿ ಮಗ ಪ್ರಜ್ವಲ್(16) ಮೃತರು. ಬಾಲಕ ಪಟ್ಟಣದ ಖಾಸಗಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ. ಗಣೇಶ ಹಬ್ಬಕ್ಕೆ ರಜೆ ಇದ್ದ ಕಾರಣ ಗ್ರಾಮದ ಹೊರವಲಯದಲ್ಲಿ ಹಸು ಮೇಯಿಸಲು ತೆರಳಿದ್ದ. ಆ ಸಂದರ್ಭದಲ್ಲಿ ವಿದ್ಯುತ್ ಕಂಬದಿಂದ ವಿದ್ಯುತ್ ಸ್ಪರ್ಶಗೊಂಡು ಬಾಲಕ ಮೃತಪಟ್ಟಿದ್ದಾನೆ.
ಬಾಲಕನ ಕಾಲು ಹಾಗೂ ದೇಹದ ಸ್ವಲ್ಪ ಭಾಗ ಸುಟ್ಟು ಕರಕಲಾಗಿದೆ. ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಬಾಲಕ ಬಲಿಯಾಗಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
‘ಬೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿ ದಿನೇ ದಿನೇ ಹೆಚ್ಚಾಗುತ್ತಿದೆ. ಸರ್ವಾಧಿಕಾರಿಗಳ ಹಾಗೆ ವರ್ತಿಸುತ್ತಿದ್ದಾರೆ. ಬಾಲಕನ ಸಾವಿಗೆ ಅಧಿಕಾರಿಗಳೇ ನೇರ ಹೊಣೆ. ಮೃತ ಬಾಲಕನ ಕುಟುಂಬಕ್ಕೆ ಪರಿಹಾರ ಒದಗಿಸಬೇಕು. ಇಲ್ಲದೆ ಹೋದರೆ ಪ್ರತಿಭಟನೆ ನಡೆಸಲಾಗುವುದು’ ಎಂದು ಗ್ರಾಮ ಪಂಚಾಯಿತಿ ಸದಸ್ಯೆ ಉಮಾ ಲಕ್ಷ್ಮಯ್ಯ ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.