ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿಕೊಳ್ಳಿ

ಕೊರಗಂಡಹಳ್ಳಿ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕಿ ಸುನಂದಮ್ಮ ಸಲಹೆ
Last Updated 9 ಡಿಸೆಂಬರ್ 2019, 15:26 IST
ಅಕ್ಷರ ಗಾತ್ರ

ಕೋಲಾರ: ‘ವಿದ್ಯಾರ್ಥಿಗಳು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು’ ಎಂದು ತಾಲ್ಲೂಕಿನ ಕೊರಗಂಡಹಳ್ಳಿ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕಿ ಸುನಂದಮ್ಮ ಸಲಹೆ ನೀಡಿದರು.

ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ ದ್ವಿತೀಯ ಸೋಪಾನ್ ಪರೀಕ್ಷಾ ಶಿಬಿರ ಉದ್ಘಾಟಿಸಿ ಮಾತನಾಡಿ, ‘ಯುವಕ ಯುವತಿಯರಿಗೆ ಶಿಸ್ತು ಮೂಡಿಸಲು ಸ್ಕೌಟ್ಸ್‌ ಗೈಡ್ಸ್‌ ಚಟುವಟಿಕೆಗಳು ಸಹಕಾರಿ. ಸಂಸ್ಥೆಯ ಚಟುವಟಿಕೆಗಳಿಗೆ ಶಾಲೆಯಿಂದ ಸಂಪೂರ್ಣ ಸಹಕಾರ ನೀಡುತ್ತೇವೆ’ ಎಂದರು.

‘ಪೋಷಕರಿಗೆ ಮಕ್ಕಳು ಹೆಚ್ಚು ಅಂಕ ಗಳಿಸುವುದೇ ಮುಖ್ಯವಾಗಿದೆ. ಹೀಗಾಗಿ ಮಕ್ಕಳ ಮೇಲೆ ಮಾನಸಿಕ ಒತ್ತಡ ಹೇರುತ್ತಿದ್ದಾರೆ. ಇದರಿಂದ ಮಕ್ಕಳು ಖಿನ್ನರಾಗುತ್ತಿದ್ದಾರೆ. ಪೋಷಕರು ಮಕ್ಕಳಲ್ಲಿ ಸ್ಕೌಟ್ಸ್‌ ಗೈಡ್ಸ್‌ ಚಟುವಟಿಕೆಗಳ ಬಗ್ಗೆ ಆಸಕ್ತಿ ಬೆಳೆಸಬೇಕು. ಮಕ್ಕಳ ಮಾನಸಿಕ, ದೈಹಿಕ ಮತ್ತು ಸಾಮಾಜಿಕ ಸದೃಢತೆಗೆ ಸ್ಕೌಟ್ಸ್‌ ಗೈಡ್ಸ್‌ ಚಟುವಟಿಕೆಗಳು ಸಹಕಾರಿ’ ಎಂದು ಕಿವಿಮಾತು ಹೇಳಿದರು.

ಸ್ಕೌಟ್ಸ್ ತರಬೇತಿ ಪಡೆದ ವಿದ್ಯಾರ್ಥಿಗಳು ಇತರೆ ವಿದ್ಯಾರ್ಥಿಗಳಿಗಿಂತ ಭಿನ್ನವಾಗಿ ಕಾಣುತ್ತಾರೆ. ಅವರಲ್ಲಿ ಪರಿಸರ ಪ್ರಜ್ಞೆ, ಶಿಸ್ತು, ಸಂಯಮ, ಮಾನವೀಯ ಮೌಲ್ಯ, ಸಮಸ್ಯೆ ಎದುರಿಸುವ ಛಲ ಹಾಗೂ ನಾಯಕತ್ವ ಗುಣ ಕಾಣಬಹುದು. ಉತ್ತಮ ಸಮಾಜ ನಿರ್ಮಾಣದಲ್ಲಿ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆಯ ಪಾತ್ರ ನಿರ್ಣಾಯಕ’ ಎಂದು ಅಭಿಪ್ರಾಯಪಟ್ಟರು.

ಶಿಸ್ತುಬದ್ಧ ಜೀವನ: ‘ವಿದ್ಯಾರ್ಥಿಗಳು ಜೀವನದಲ್ಲಿ ಮುಖ್ಯವಾಗಿ ಶಿಸ್ತು, ಸಂಯಮ, ದೇಶಪ್ರೇಮ ಬೆಳೆಸಿಕೊಳ್ಳಬೇಕು. ಶಿಸ್ತುಬದ್ಧ ಜೀವನದಿಂದ ಯಶಸ್ಸು ಸಾಧಿಸಬಹುದು. ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಗುರುತಿಸಿಕೊಂಡರೆ ಗುರಿ ಸಾಧನೆಗೆ ಸಹಕಾರಿಯಾಗುತ್ತದೆ. ಸಮಯಪಾಲನೆ ಮಾಡದವರು ಗುರಿ ಸಾಧಿಸಲು ಸಾಧ್ಯವಾಗುವುದಿಲ್ಲ’ ಎಂದು ಶಿಕ್ಷಕ ನಾರಾಯಣಸ್ವಾಮಿ ಹೇಳಿದರು.

‘ಮಕ್ಕಳು ಇತ್ತೀಚಿನ ದಿನಗಳಲ್ಲಿ ಅನಗತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಮೊಬೈಲ್ ಬಳಕೆ ಗೀಳಿನಿಂದ ಮಕ್ಕಳು ಕಲಿಕೆ ಕಡೆ ಆಸಕ್ತಿ ತೋರುತ್ತಿಲ್ಲ. ಪೋಷಕರು ಮಕ್ಕಳ ಕಡೆ ಗಮನಹರಿಸಿ ಸರಿ ದಾರಿಗೆ ತರಬೇಕು. ವಿದ್ಯಾರ್ಥಿಗಳು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಸ್ವಚ್ಛತೆಯಿಂದ ಆರೋಗ್ಯಕರ ಸಮಾಜ ನಿರ್ಮಾಣವಾಗುತ್ತದೆ’ ಎಂದು ತಿಳಿಸಿದರು.

‘ವಿದ್ಯಾರ್ಥಿಗಳು ತರಬೇತಿ ಪಡೆದು ತಂಡಗಳನ್ನು ಆರಂಭಿಸಿದ ಮಾತ್ರಕ್ಕೆ ಶಿಕ್ಷಕರ ಜವಾಬ್ದಾರಿ ಮುಗಿಯುವುದಿಲ್ಲ. ದೈನಂದಿನ ಶಾಲೆಯ ಶಿಸ್ತು ಪಾಲನೆಯಲ್ಲಿ ಕ್ರಿಯಾಶೀಲವಾಗಿ ಸ್ಕೌಟ್ ಗೈಡ್‌ನ ತತ್ವಸಿದ್ಧಾಂತ ಅಳವಡಿಸಿಕೊಳ್ಳಬೇಕು’ ಎಂದರು.

ನಿವೃತ್ತ ಮುಖ್ಯ ಶಿಕ್ಷಕ ಎಲ್.ಕೃಷ್ಣಪ್ಪ, ಶಾಲೆ ಶಿಕ್ಷಕಿ ಕಾಂತಮ್ಮ, ಸ್ಕೌಟ್ಸ್‌ ಮತ್ತು ಗೈಡ್ಸ್‌ನ ಜಿಲ್ಲಾ ಆಯುಕ್ತ ಸುರೇಶ್, ಸಂಘಟನಾ ಆಯುಕ್ತ ವಿ.ಬಾಬು, ಸಂಘಟಕರಾದ ಬಾಬು, ವಿಶ್ವನಾಥ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT