ಕೋಲಾರ: ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಿದ್ದರಾಮಯ್ಯ ಹಿಂದೇಟು ಹಾಕುತ್ತಿರುವುದರಿಂದ ಶಾಸಕ ಕೆ.ಆರ್.ರಮೇಶ್ ಕುಮಾರ್ ಮುನಿಸಿಕೊಂಡಿದ್ದು, ಅವರ ನಿವಾಸಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಭೇಟಿ ನೀಡಿದ್ದಾರೆ.
ಶ್ರೀನಿವಾಸಪುರ ತಾಲ್ಲೂಕಿನ ಅಡ್ಡಗಲ್ ಗ್ರಾಮದ ನಿವಾಸದಲ್ಲಿ ಶನಿವಾರ ಬೆಳಿಗ್ಗೆ ಸುರ್ಜೇವಾಲಾ ಹಾಗೂ ಶಾಸಕ ಬೈರತಿ ಸುರೇಶ್ ಮಾತುಕತೆ ನಡೆಸಿ ಮನವೊಲಿಸುತ್ತಿದ್ದಾರೆ. ಜೊತೆಗೆ ಉಪಾಹಾರ ಸೇವಿಸಿದರು.
'ಕೋಲಾರದಲ್ಲಿ ಭಾನುವಾರ ನಡೆಯಲಿರುವ ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ಹೋಗಲ್ಲ, ಕ್ಷೇತ್ರದಿಂದ ಜನರನ್ನೂ ಕರೆತರಲ್ಲ' ಎಂಬುದಾಗಿ ರಮೇಶ್ ಕುಮಾರ್ ಹಟ ಹಿಡಿದಿದ್ದಾರೆ ಎನ್ನಲಾಗಿದೆ. ಪಕ್ಷದ ವಿರುದ್ಧವೂ ಮುನಿಸಿಕೊಂಡಿದ್ದಾರೆ.
ಕೋಲಾರದಲ್ಲೇ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಅವರನ್ನು ಜಿಲ್ಲೆಯ ಶಾಸಕರಾದ ರಮೇಶ್ ಕುಮಾರ್, ಕೆ.ವೈ.ನಂಜೇಗೌಡ, ಎಸ್.ಎನ್.ನಾರಾಯಣಸ್ವಾಮಿ ಪದೇಪದೇ ಒತ್ತಾಯಿಸುತ್ತಿದ್ದಾರೆ.
ಪುನರಾಯ್ಕೆ ಬಯಸಿರುವ ಈ ಶಾಸಕರು ಸಿದ್ದರಾಮಯ್ಯ ಸ್ಪರ್ಧೆಯಿಂದ ತಮಗೆ ನೆರವಾಗಲಿದೆ ಎಂದು ಭಾವಿಸಿದ್ದಾರೆ. ಆದರೆ, ಸಿದ್ದರಾಮಯ್ಯ ಅವರ ಸ್ಪರ್ಧೆಗೆ ಹೈಕಮಾಂಡ್ ಇನ್ನೂ ಹಸಿರು ನಿಶಾನೆ ತೋರಿಲ್ಲ.