ಶ್ರೀನಿವಾಸಪುರ: ಪಟ್ಟಣದ ಅಭಿವೃದ್ಧಿಗೆ ಸರ್ಕಾರದಿಂದ ಕೋಟ್ಯಂತರ ರೂಪಾಯಿ ತಂದರೂ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂಬ ಶಾಸಕ ಕೆ.ಆರ್. ರಮೇಶ್ ಕುಮಾರ್ ಅವರ ಆರೋಪ ಸತ್ಯಕ್ಕೆ ದೂರವಾದುದು ಎಂದು ಪುರಸಭೆ ಅಧ್ಯಕ್ಷೆ ಎಂ.ಎನ್. ಲಲಿತಾ ಶ್ರೀನಿವಾಸ್ ಹೇಳಿದರು.
ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಈಚೆಗೆ ನಡೆದ ಗಣರಾಜ್ಯೋತ್ಸವ ಸಮಾರಂಭದ ಬಳಿಕ ಶಾಸಕರು, ಆಡಳಿತ ಪಕ್ಷದ ಸದಸ್ಯರ ವಿರುದ್ಧ ಆರೋಪ ಮಾಡಿರುವುದು ಸರಿಯಲ್ಲ. ಈ ಹಿಂದೆ ಎಂಟು ವರ್ಷಗಳ ಕಾಲ ಪುರಸಭೆ ಕಾಂಗ್ರೆಸ್ ಪಕ್ಷದ ಆಡಳಿತಕ್ಕೆ ಒಳಪಟ್ಟಿತ್ತು. ಆಗ ಶಾಸಕರು ತಂದ ಕೋಟ್ಯಂತರ ರೂಪಾಯಿ ಅನುದಾನ ದುರ್ಬಳಕೆ ಆಗಿದೆ. ಕಳಪೆ ಕಾಮಾರಿ ಕಣ್ಣಿಗೆ ಕಟ್ಟುವಂತೆ ಕಾಣುತ್ತಿದೆ ಎಂದು ಆಪಾದಿಸಿದರು.
ಪಟ್ಟಣದಲ್ಲಿ ಕೈಗೊಳ್ಳಲಾಗಿರುವ ಚರಂಡಿ ನಿರ್ಮಾಣ ಕಾಮಗಾರಿ, ವಾಣಿಜ್ಯ ಸಂಕೀರ್ಣ ಕಟ್ಟಡಗಳು ಕಳಪೆ ಕಾಮಗಾರಿಗೆ ಉತ್ತಮ ಉದಾಹರಣೆಯಾಗಿವೆ. ಅವುಗಳ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಕೊಳಚೆ ನಿರ್ಮೂಲನಾ ಮಂಡಳಿಯಿಂದ ₹ 34 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಟ್ಟಗಳ ನಿರ್ಮಾಣದ ಕಥೆಯೂ ಇದೇ ಆಗಿದೆ. ತಮ್ಮ ಹಿಂಬಾಲಕರಿಗೆ ಉಪ ಗುತ್ತಿಗೆ ಕೊಡಿಸಿ, ಕಳಪೆ ಕಾಮಗಾರಿಗೆ ಕಾರಣರಾಗಿದ್ದಾರೆ ಎಂದುಹೇಳಿದರು.
ಉಪಾಧ್ಯಕ್ಷೆ ಆಯಿಷಾ ನಯಾಜ್, ಸದಸ್ಯರಾದ ಬಿ. ವೆಂಕಟರೆಡ್ಡಿ, ಎಸ್. ರಾಜು, ಆನಂದ್, ಶಬ್ಬೀರ್ ಖಾನ್, ಜಯಲಕ್ಷ್ಮಿ, ಜಬೀನ್ ತಾಜ್ ಹಾಜರಿದ್ದರು.