ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ನಿರೀಕ್ಷೆಗೂ ಮೀರಿ ಗುಣಮುಖರಾಗುತ್ತಿದ್ದು, ಸೋಂಕಿತರ ಸಾವಿನ ಸಂಖ್ಯೆಯೂ ತಗ್ಗಿದೆ.
ಕಳೆದೆರಡು ದಿನಗಳಿಂದ ಸೋಂಕಿತರ ಗುಣಮುಖ ಪ್ರಮಾಣದಲ್ಲಿ ದಾಖಲೆಯ ಏರಿಕೆಯಾಗಿದ್ದು, ಆರೋಗ್ಯ ಇಲಾಖೆ ನಿಟ್ಟುಸಿರು ಬಿಡುವಂತಾಗಿದೆ. ಭಾನುವಾರ 168 ಮಂದಿ ಗುಣಮುಖರಾಗಿ ಮನೆಗೆ ಹೋಗಿದ್ದು, ಈವರೆಗಿನ ಗರಿಷ್ಠ ದಾಖಲೆಯಾಗಿತ್ತು. ಇದರ ಬೆನ್ನೆಲ್ಲೇ ಸೋಮವಾರ ಗುಣಮುಖರಾದವರ ಸಂಖ್ಯೆಯು ದ್ವಿಶತಕದ ಗಡಿ ದಾಟಿದೆ.
ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 202 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 113 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.
ಉಳಿದಂತೆ ಮಾಲೂರು ತಾಲ್ಲೂಕಿನ 40 ಮಂದಿ, ಬಂಗಾರಪೇಟೆ ತಾಲ್ಲೂಕು 13, ಕೆಜಿಎಫ್ ತಾಲ್ಲೂಕು 21, ಮುಳಬಾಗಿಲು ತಾಲ್ಲೂಕು 4 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 11 ಮಂದಿಯನ್ನು ಮನೆಗೆ ಕಳುಹಿಸಲಾಯಿತು.
104 ಮಂದಿಗೆ ಸೋಂಕು: ಜಿಲ್ಲೆಯಲ್ಲಿ ಹೊಸದಾಗಿ 104 ಮಂದಿಗೆ ಸೋಂಕು ಹರಡಿರುವುದು ಸೋಮವಾರ ದೃಢಪಟ್ಟಿದೆ. ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಕಾಣಿಸಿಕೊಂಡಿದೆ. ಸೋಂಕಿತರ ಸಂಪರ್ಕದಿಂದ 46 ಮಂದಿಗೆ ಸೋಂಕು ಹರಡಿರುವುದು ಗೊತ್ತಾಗಿದೆ.
ಮಾಲೂರು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರವಿರುವ 6 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ 15 ಮಂದಿಗೆ ಸೋಂಕು ತಗುಲಿದೆ. ಬಂಗಾರಪೇಟೆ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ 6 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ ಒಬ್ಬರಿಗೆ ಸೋಂಕು ಹರಡಿದೆ.
ಕೆಜಿಎಫ್ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಪೀಡಿತ 12 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ ಒಬ್ಬರಿಗೆ ಸೋಂಕು ಬಂದಿದೆ. ಮುಳಬಾಗಿಲು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಕ್ಕೆ ತುತ್ತಾಗಿರುವ 3 ಮಂದಿಗೆ ಹಾಗೂ ಸೋಂಕಿತರ ಸಂಪರ್ಕದಿಂದ ಮೂವರಿಗೆ ಸೋಂಕು ಬಂದಿರುವುದು ಖಚಿತವಾಗಿದೆ.
ಶ್ರೀನಿವಾಸಪುರ ತಾಲ್ಲೂಕಿನ 4 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಇವರೆಲ್ಲರೂ ವಿಷಮ ಶೀತ ಜ್ವರದಿಂದ ಬಳಲುತ್ತಿದ್ದಾರೆ. ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಸೀಲ್ಡೌನ್ ಮಾಡಲಾಗಿದೆ. ಸುರಕ್ಷತಾ ಕ್ರಮವಾಗಿ ಇಡೀ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.