ಕೋಲಾರ: ‘ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಪ್ರಾಂತ್ಯಗಳನ್ನು ಒಗ್ಗೂಡಿಸಿ ಏಕೀಕರಣದ ಮೂಲಕ ಅಖಂಡ ಭಾರತ ಕಟ್ಟಿದ ಮಹಾನ್ ನಾಯಕ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಸ್ಮರಿಸಿದರು.
ಇಲ್ಲಿ ಶನಿವಾರ ಕಾಂಗ್ರೆಸ್ನ ಜಿಲ್ಲಾ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಇಂದಿರಾಗಾಂಧಿ ಪುಣ್ಯ ಸ್ಮರಣೆ, ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮ ದಿನಾಚರಣೆಯಲ್ಲಿ ಮಾತನಾಡಿದರು.
‘ಇಂದಿರಾಗಾಂಧಿಯವರು ಪ್ರಧಾನಿಯಾಗಿದ್ದಾಗ ಸಾಮಾಜಿಕ ಸುಧಾರಣೆ ಮೂಲಕ ದೇಶವನ್ನು ಆರ್ಥಿಕವಾಗಿ ಬಲಿಷ್ಠಗೊಳಿಸಿದರು. ದೇಶದ ಸಂವಿಧಾನ ರಚನೆಯಲ್ಲಿ ವಲ್ಲಭಭಾಯಿ ಪಟೇಲ್ರ ಪಾತ್ರವಿದೆ. ಅವರು ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸಿ ದೇಶದ ಏಕತೆಗೆ ಶ್ರಮಿಸಿದ ಮಹಾನ್ ಚೇತನ’ ಎಂದು ಬಣ್ಣಿಸಿದರು.
‘ಪಟೇಲ್ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಧೀಮಂತ ನಾಯಕರು. ಅವರು ದೇಶದ ರಕ್ಷಣಾ ವ್ಯವಸ್ಥೆ ಬಲಪಡಿಸುವ ಮತ್ತು ದೇಶ ಒಗ್ಗೂಡಿಸುವ ಕನಸ್ಸು ಕಂಡಿದ್ದರು. ಅಧಿಕಾರ ವಿಕೇಂದ್ರೀಕರಣ, ಧಾರ್ಮಿಕ ಸಮಾನತೆ ಪಾಲಿಸುವಲ್ಲಿ ಮುಂಚೂಣಿಯಲ್ಲಿದ್ದರು’ ಎಂದು ಹೇಳಿದರು.
ಕಾಂಗ್ರೆಸ್ ಕಿಸಾನ್ ಖೇತ್ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್, ಕಾಂಗ್ರೆಸ್ ಜಿಲ್ಲಾ ಎಸ್ಸಿ ಘಟಕದ ಅಧ್ಯಕ್ಷ ಕೆ.ಜಯದೇವ್, ಜಿಲ್ಲಾ ಎಸ್ಟಿ ಘಟಕದ ಅಧ್ಯಕ್ಷ ಎಸ್.ಎಂ.ನಾಗರಾಜ್, ಹಿಂದುಳಿದ ವರ್ಗಗಳ ಜಿಲ್ಲಾ ಘಟಕದ ಉಪಾಧ್ಯಕ್ಷ ಮಂಜುನಾಥ್, ನಗರಸಭೆ ಮಾಜಿ ಸದಸ್ಯ ಪ್ಯಾರೇಜಾನ್ ಪಾಲ್ಗೊಂಡರು.