ಕೋಲಾರ: ‘ಜಿಲ್ಲೆಯ ಜನರ ಹಾಗೂ ರೈತರ ಕಷ್ಟ ಸುಖಕ್ಕೆ ಸ್ಪಂದಿಸಿ, ನ್ಯಾಯ ಒದಗಿಸುವ ಪ್ರಯತ್ನ ಮಾಡುತ್ತೇವೆ. ಸಂಘದಿಂದ ನಿರಂತರವಾಗಿ ಜನಹಿತ ಕಾರ್ಯ ನಡೆಸುತ್ತೇವೆ’ ಎಂದು ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಸುನಿಲ್ ಹೇಳಿದರು.
ಇಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಜಿಲ್ಲೆಯಲ್ಲಿ ಸ್ವಚ್ಛತೆ, ಕುಡಿಯುವ ನೀರು ಹಾಗೂ ರಸ್ತೆ ಸೇರಿದಂತೆ ಮೂಲಸೌಕರ್ಯಕ್ಕೆ ಹೋರಾಟ ನಡೆಸಲು ಸಿದ್ಧವಾಗಿದ್ದೇವೆ. ಸಂಘಟನೆ ಮೂಲಕ ನಾಡು, ನುಡಿ, ನೆಲ, ಜಲಕ್ಕಾಗಿ ಹಾಗೂ ಜನಸಾಮಾನ್ಯರ ಹಕ್ಕುಗಳಿಗಾಗಿ 5 ವರ್ಷದಿಂದ ಹೋರಾಟ ಮಾಡುತ್ತಿದ್ದೇವೆ’ ಎಂದರು.
‘ಸಂಘಟನೆ ಸ್ಥಾಪನೆಯಾಗಿ 5 ವರ್ಷವಾಗಿದ್ದು, ಜನಪರ ಹೋರಾಟ ಹಾಗೂ ಸೇವಾ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇವೆ. ಆದರೆ, ಕೋವಿಡ್ ಕಾರಣಕ್ಕೆ ಕಳೆದ ಕೆಲ ತಿಂಗಳಿಂದ ಸಂಘದ ಚಟುವಟಿಕೆ ನಡೆಸಲು ಸಾಧ್ಯವಾಗಲಿಲ್ಲ. ಕೊರೊನಾ ಎಲ್ಲರಿಗೂ ಬದುಕಿನ ಪಾಠ ಕಲಿಸಿದೆ’ ಎಂದು ತಿಳಿಸಿದರು.
‘ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು, ಅನುದಾನವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುತ್ತೇವೆ. ಜಿಲ್ಲಾ ಕೇಂದ್ರದಲ್ಲಿ ನಡೆಯುತ್ತಿರುವ ಒಳಚರಂಡಿ ಮತ್ತು ರಸ್ತೆ ಅಗಲೀಕರಣದಿಂದ ನಗರದ ಸೌಂದರ್ಯಕ್ಕೆ ಧಕ್ಕೆಯಾಗಿದೆ. ದೂಳಿನ ಸಮಸ್ಯೆ ಹೆಚ್ಚಿದ್ದು, ಜನರು ಪ್ರತಿನಿತ್ಯ ಕಿರಿಕಿರಿ ಅನುಭವಿಸುತ್ತಿದ್ದಾರೆ’ ಎಂದು ಹೇಳಿದರು.
‘ರಸ್ತೆಗಳ ಅವ್ಯವಸ್ಥೆಯಿಂದ ಆಗಾಗ್ಗೆ ಅಪಘಾತ ಸಂಭವಿಸುತ್ತಿವೆ. ದೂಳಿನಿಂದ ವಾಣಿಜ್ಯ ಚಟುವಟಕೆಗಳಿಗೆ ತೊಂದರೆಯಾಗುತ್ತಿದೆ. ಜಿಲ್ಲಾ ಕೇಂದ್ರದ ರಸ್ತೆಗಳನ್ನು ಶೀಘ್ರವೇ ದುರಸ್ತಿ ಮಾಡಬೇಕು. ಇಲ್ಲದಿದ್ದರೆ ಹೋರಾಟ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.
ಸಂಘಟನೆ ಜಿಲ್ಲಾ ಘಟಕದ ಉಪಾಧ್ಯಕ್ಷ ಡಿ.ಎ.ಮುನಿರಾಜು, ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟೇಶ್, ಸದಸ್ಯ ಶ್ರೀನಾಥ್ ಹಾಜರಿದ್ದರು.