ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯರಗೋಳ್‌ ಯೋಜನೆ ಶೀಘ್ರವೇ ಲೋಕಾರ್ಪಣೆ

ನೀರಿನ ಸಮಸ್ಯೆ ಬಗೆಹರಿಯಲಿದೆ: ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ವಿಶ್ವಾಸ
Last Updated 26 ಜನವರಿ 2022, 13:59 IST
ಅಕ್ಷರ ಗಾತ್ರ

ಕೋಲಾರ: ‘ಯರಗೋಳ್‌ ಯೋಜನೆಯನ್ನು ಶೀಘ್ರವೇ ಲೋಕಾರ್ಪಣೆ ಮಾಡುತ್ತೇವೆ. ಇದರಿಂದ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಮುನಿರತ್ನ ವಿಶ್ವಾಸ ವ್ಯಕ್ತಪಡಿಸಿದರು.

ಇಲ್ಲಿ ಬುಧವಾರ ಗಣರಾಜ್ಯೋತ್ಸವದಲ್ಲಿ ಮಾತನಾಡಿ, ‘ಈಗಾಗಲೇ ಜಿಲ್ಲೆಗೆ ಕೆ.ಸಿ ವ್ಯಾಲಿ ಯೋಜನೆ ನೀರು ಹರಿದು ಬಂದಿದ್ದು, ಸಾಕಷ್ಟು ಕೆರೆಗಳು ತುಂಬಿವೆ. ಎತ್ತಿನಹೊಳೆ ಯೋಜನೆ ಪೂರ್ಣಗೊಂಡರೆ ಜಿಲ್ಲೆಯ ಕುಡಿಯುವ ನೀರಿನ ಬವಣೆ ಸಂಪೂರ್ಣ ನೀಗಲಿದೆ’ ಎಂದು ಅಭಿಪ್ರಾಯಪಟ್ಟರು.

‘ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಜಿಲ್ಲೆಗೆ ಅತ್ಯಗತ್ಯವಾಗಿ ಆಗಬೇಕಿರುವ ಅಭಿವೃದ್ಧಿ ಕೆಲಸಗಳನ್ನು ಪಟ್ಟಿ ಮಾಡಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಬಜೆಟ್‍ನಲ್ಲಿ ಹೆಚ್ಚಿನ ಅನುದಾನ ಪಡೆಯುತ್ತೇವೆ. ಜಿಲ್ಲೆಯ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವಂತೆ ಸಭೆ ನಡೆಸಿ ಸೂಚಿಸುತ್ತೇವೆ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆ.15ರೊಳಗೆ ಸಿಂಥೆಟೆಕ್‌ ಟ್ರ್ಯಾಕ್‌ ನಿರ್ಮಿಸಲಾಗುವುದು’ ಎಂದು ಭರವಸೆ ನೀಡಿದರು.

‘ಜಿಲ್ಲೆಯ ರೈತರು ನೀರಿನ ಸಮಸ್ಯೆ ನಡುವೆಯೂ ಸಂಕಷ್ಟ, ಸವಾಲುಗಳಿಗೆ ಎದೆಯೊಡ್ಡಿ ಸ್ವಾವಲಂಬಿ ಬದುಕು ಕಟ್ಟಿಕೊಂಡು ಇಡೀ ನಾಡಿಗೆ ಮಾದರಿಯಾಗಿದ್ದಾರೆ. ಇಂತಹ ಜಿಲ್ಲೆಯಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡುವ ಅವಕಾಶ ಸಿಕ್ಕಿರುವುದು ಸುದೈವ. ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದಲ್ಲಿ ಸಂವಿಧಾನ ಜಾರಿಗೆ ಬಂದ ದಿನವಾದ ಗಣರಾಜ್ಯೋತ್ಸವದಂದು ಧ್ವಜಾರೋಹಣ ಮಾಡುತ್ತಿರುವುದಕ್ಕೆ ಸಂತಸವಾಗುತ್ತಿದೆ’ ಎಂದರು.

‘ಗಂಗರ ರಾಜಧಾನಿಯಾಗಿದ್ದ ಕೋಲಾರವನ್ನು ಚೋಳರು, ಚಾಲುಕ್ಯರು, ಹೊಯ್ಸಳರು, ರಾಷ್ಟ್ರಕೂಟರು ಮೈಸೂರು ಅರಸರು ಆಳಿದ್ದಾರೆ. ಜಿಲ್ಲೆಯ ಮುಳಬಾಗಿಲಿನ ಐತಿಹಾಸಿಕ ಕುರುಡುಮಲೆ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರ ಆರಂಭಿಸಿರುವುದು ಈ ನೆಲದ ಶಕ್ತಿಗೆ ನಿದರ್ಶನ. ರಾಜ್ಯದ ಮೊದಲ ಮುಖ್ಯಮಂತ್ರಿ ಕೆ.ಚಂಗಲರಾಯರೆಡ್ಡಿ ಅವರನ್ನು ಕೊಟ್ಟ ಹೆಗ್ಗಳಿಕೆ ಜಿಲ್ಲೆಯದು’ ಎಂದು ಬಣ್ಣಿಸಿದರು.

‘ಜಗತ್ತಿಗೆ ಚಿನ್ನದ ನೀಡಿದ ಕೋಲಾರ ಜಿಲ್ಲೆಯು ಹಾಲು, ರೇಷ್ಮೆ ಮತ್ತು ಮಾವು ಉತ್ಪಾದನೆಗೆ ಹೆಸರಾಗಿದೆ. ಜಿಲ್ಲೆಯು ವಿಶ್ವೇಶ್ವರಯ್ಯ, ಶಿಕ್ಷಣ ತಜ್ಞ ಎಚ್.ನರಸಿಂಹಯ್ಯ, ಡಿ.ವಿ.ಗುಂಡಪ್ಪ, ಮಾಸ್ತಿ ವೆಂಕಟೇಶ್ ಅಯ್ಯಂಗಾರ್‌ ಅವರಂತಹ ಮೇಧಾವಿಗಳು, ಸಾಹಿತಿಗಳು, ಕವಿಗಳಿಗೆ ಜನ್ಮ ನೀಡಿದೆ. ನಾಡಿನ ಕೃಷಿ, ಸಾಹಿತ್ಯ, ರಾಜಕೀಯ, ವಿಜ್ಞಾನ, ತಂತ್ರಜ್ಞಾನ ಕ್ಷೇತ್ರಕ್ಕೆ ವಿಶಿಷ್ಟ ಕೊಡುಗೆ ನೀಡಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ದೇಶಕ್ಕೆ ಮಾದರಿ: ‘ಕೃಷಿ, ಪಶು ಸಾಕಾಣಿಕೆ, ಕುಕ್ಕುಟೋದ್ಯಮ, ಪುಷ್ಪೋದ್ಯಮ ಮತ್ತು ರೇಷ್ಮೆ ಉದ್ಯಮದ ಮೂಲಕ ಜಿಲ್ಲೆಯ ರೈತರು ಬದುಕು ಕಟ್ಟಿಕೊಂಡಿದ್ದಾರೆ. ಇಸ್ರೆಲ್ ಮಾದರಿಯಲ್ಲಿ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಂಡು ಕೃಷಿ ಮಾಡುತ್ತಿರುವ ರೈತರು ದೇಶಕ್ಕೆ ಮಾದರಿಯಾಗಿದ್ದಾರೆ. ರೈತರ ಮಕ್ಕಳ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ನೂತನ ಶಿಷ್ಯ ವೇತನ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ ಜಾರಿಗೊಳಿಸಲಾಗಿದೆ’ ಎಂದು ವಿವರಿಸಿದರು.

‘ಜಿಲ್ಲೆಯು ಹಲವು ಸಾಮಾಜಿಕ ಹೋರಾಟಗಳ ಕರ್ಮಭೂಮಿ. ಜಿಲ್ಲೆಯು ದಲಿತ ಸಾಹಿತಿಗಳು, ಹೋರಾಟಗಾರರು, ಶ್ರೇಷ್ಠ ಆಡಳಿತಗಾರರನ್ನು ಕೊಡುಗೆಯಾಗಿ ನೀಡಿದೆ. ರಾಜ್ಯದಲ್ಲಿ ಹಣ್ಣು ಮತ್ತು ತರಕಾರಿ ಬೆಳೆಗಳನ್ನು ಹೆಚ್ಚಾಗಿ ಬೆಳೆಯುತ್ತಿರುವ ಜಿಲ್ಲೆಗಳಲ್ಲಿ ಕೋಲಾರ ಪ್ರಮುಖ ಸ್ಥಾನದಲ್ಲಿದೆ. ಜತೆಗೆ ಕೈಗಾರಿಕಾಭಿವೃದ್ಧಿಯಲ್ಲೂ ಜಿಲ್ಲೆಯು ಮುಂಚೂಣಿಯಲ್ಲಿದೆ’ ಎಂದು ಅಭಿಪ್ರಾಯಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT