ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ಕರ್ನಾಟಕ ಬಂದ್‌: ಪೊಲೀಸ್‌ ಕಟ್ಟೆಚ್ಚರ

Last Updated 13 ಫೆಬ್ರುವರಿ 2020, 9:02 IST
ಅಕ್ಷರ ಗಾತ್ರ

ಕೋಲಾರ: ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟವು ಫೆ.13ರಂದು
ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಪೊಲೀಸ್‌ ಕಟ್ಟೆಚ್ಚರ ವಹಿಸಲಾಗಿದೆ.

ಬಂದ್‌ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲೆಡೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ. ವಿವಿಧ ಕನ್ನಡಪರ ಸಂಘಟನೆಗಳ ಸದಸ್ಯರು ಬಂದ್‌ಗೆ ಬೆಂಬಲ ನೀಡುವಂತೆ ಸಾರ್ವಜನಿಕರಿಗೆ ಹಾಗೂ ಸಂಘ ಸಂಸ್ಥೆಗಳಿಗೆ ಮನವಿ ಮಾಡಿದ್ದಾರೆ.

ಜಿಲ್ಲಾಡಳಿತವು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸದ ಕಾರಣ ಗುರುವಾರ ಎಂದಿನಂತೆ ತರಗತಿಗಳು ನಡೆಯಲಿವೆ. ಹಾಲು, ತರಕಾರಿ, ದಿನಸಿ ಹಾಗೂ ಔಷಧ ಮಾರಾಟ ಮಳಿಗೆಗಳು ತೆರೆಯಲಿವೆ. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಸೇವೆ ಒದಗಿಸಲಿವೆ. ಚಿತ್ರಮಂದಿರ, ಪೆಟ್ರೋಲ್‌ ಬಂಕ್‌, ಬ್ಯಾಂಕ್‌ಗಳಲ್ಲೂ ವಹಿವಾಟು ನಡೆಯಲಿದೆ.

ಲಾರಿ ಮಾಲೀಕರ ಸಂಘ, ಟ್ಯಾಕ್ಸಿ ಚಾಲಕರ ಸಂಘ, ಬೀದಿ ಬದಿ ವ್ಯಾಪಾರಿಗಳ ಸಂಘ, ಕೋಡಿಹಳ್ಳಿ ಚಂದ್ರಶೇಖರ್‌ ನೇತೃತ್ವದ ರೈತ ಸಂಘಟನೆ, ದಲಿತ ಸಂಘಟನೆಗಳು, ಆಟೊ ಚಾಲಕರ ಸಂಘ ಸೇರಿದಂತೆ ಕೆಲ ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ. ಆಟೊ ಚಾಲಕರು, ಸರಕು ಸಾಗಣೆ ವಾಹನ ಮಾಲೀಕರು, ಖಾಸಗಿ ಬಸ್‌ ಚಾಲಕರು ಬಂದ್‌ ಬೆಂಬಲಿಸಿ ಸಂಚಾರ ಸೇವೆ ಸ್ಥಗಿತಗೊಳಿಸಿದರೆ ಸಂಚಾರ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.

‘ಬಂದ್ ಸಂಬಂಧ ಯಾವುದೇ ಸಂಘಟನೆಗಳು ಮಾಹಿತಿ ನೀಡಿ ಅನುಮತಿ ಕೋರಿಲ್ಲ. ಶಾಲಾ ಕಾಲೇಜುಗಳಲ್ಲಿ ಎಂದಿನಂತೆ ತರಗತಿ ನಡೆಯಲಿವೆ. ಕೆಎಸ್‌ಆರ್‌ಟಿಸಿಯು ಪ್ರತಿನಿತ್ಯದಂತೆ ಬಸ್‌ ಸೇವೆ ಒದಗಿಸಲಿದೆ’ ಎಂದು ಜಿಲ್ಲಾಧಿಕಾರಿ ಜೆ.ಮಂಜನಾಥ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ಶಿಸ್ತುಕ್ರಮದ ಎಚ್ಚರಿಕೆ: ಶಾಂತಿಯುತವಾಗಿ ಬಂದ್‌ ನಡೆಸಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ ಮಾಡಿದರೆ ಶಿಸ್ತುಕ್ರಮ ಜರುಗಿಸುತ್ತೇವೆ ಎಂದು ಪೊಲೀಸರು ಸಂಘಟನೆಗಳ ಮುಖಂಡರಿಗೆ ಎಚ್ಚರಿಕೆ ನೀಡಿದ್ದಾರೆ.

ಅಂಗಡಿ ಮಾಲೀಕರು ಸ್ವಯಂಪ್ರೇರಿತರಾಗಿ ವಹಿವಾಟು ಸ್ಥಗಿತಗೊಳಿಸಿದರೆ ಅಭ್ಯಂತರವಿಲ್ಲ. ಆದರೆ, ಸಂಘಟನೆಗಳ ಮುಖಂಡರು ಬಲವಂತವಾಗಿ ಅಂಗಡಿ ಮುಚ್ಚಿಸುವಂತಿಲ್ಲ ಹಾಗೂ ವಾಹನಗಳನ್ನು ಅಡ್ಡಗಟ್ಟುವಂತಿಲ್ಲ. ಸಾರ್ವಜನಿಕ ಆಸ್ತಿಗೆ ನಷ್ಟ ಉಂಟು ಮಾಡಬಾರದು. ಬಸ್‌ಗಳ ಮೇಲೆ ಕಲ್ಲು ತೂರುವ, ಸರ್ಕಾರಿ ಕಚೇರಿಗಳನ್ನು ಬಲವಂತವಾಗಿ ಮುಚ್ಚಿಸುವ ಪ್ರಯತ್ನ ಮಾಡಬಾರದು ಎಂದು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT