ಕೋಲಾರ: ತಾಲ್ಲೂಕಿನಲ್ಲಿ ಮಂಗಳವಾರ ರಾತ್ರಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ನಷ್ಟವಾಗಿದೆ.
ಸಂಜೆ ತುಂತುರು ಮಳೆಯಾಗಿತ್ತು. ರಾತ್ರಿ 9 ಗಂಟೆ ಸುಮಾರಿಗೆ ಬಿರುಗಾಳಿ ಸಹಿತ ಆರಂಭವಾದ ಮಳೆ ಅರ್ಧ ತಾಸು ಎಡಬಿಡದೆ ಸುರಿಯಿತು. ಗಾಳಿಯ ತೀವ್ರತೆಗೆ ಹಲವೆಡೆ ಮರಗಳು ಮತ್ತು ವಿದ್ಯುತ್್ ಕಂಬಗಳು ಧರೆಗುರುಳಿವೆ. ವಿದ್ಯುತ್ ತಂತಿಗಳು ತುಂಡಾಗಿ ಬಿದ್ದಿವೆ. ನಗರ ಹಾಗೂ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಆಕಾಶಕ್ಕೆ ತೂತು ಬಿದ್ದಂತೆ ಸುರಿದ ಮಳೆರಾಯ ಮಾವು ಬೆಳೆಗಾರರಿಗೆ ಕಣ್ಣೀರು ತರಿಸಿದ್ದಾನೆ. ಮಾವಿನ ಕಾಯಿ ರಾಶಿ ರಾಶಿಯಾಗಿ ಉದುರಿವೆ. ಮತ್ತೊಂದೆಡೆ ಮರದ ಕೊಂಬೆಗಳು ತುಂಡಾಗಿ ಬಿದ್ದಿವೆ. ಮಾವಿನ ತೋಪುಗಳಲ್ಲಿ ಮರದ ಕೆಳಗೆ ಕಾಯಿ ರಾಶಿಯಾಗಿ ಬಿದ್ದಿರುವ ದೃಶ್ಯ ಸಾಮಾನ್ಯವಾಗಿದೆ. ಪಪ್ಪಾಯ (ಪರಂಗಿ), ಬಾಳೆ ಗಿಡಗಳು ಸಂಪೂರ್ಣ ನೆಲಕಚ್ಚಿವೆ.
ಕೆಲವೆಡೆ ಮನೆಗಳ ಗೋಡೆ ಹಾಗೂ ಮೇಲ್ಚಾವಣಿ ಶಿಥಿಲಗೊಂಡಿದ್ದು, ಪಾಲಿಹೌಸ್ಗಳಿಗೆ ಹಾನಿಯಾಗಿದೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ದಿನಸಿ ಪದಾರ್ಥ, ಪೀಠೋಪಕರಣ ಹಾಗೂ ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದೆ. ವರುಣನ ಅಬ್ಬರಕ್ಕೆ ಹಲವೆಡೆ ಮನೆಗಳು ಕುಸಿದಿವೆ. ಮಳೆಯಿಂದಾಗಿ ಜನರ ಬದುಕು ನೀರು ಪಾಲಾಗಿದೆ.