ಕೋಲಾರ: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ (ಕೋಚಿಮುಲ್) ಅಧ್ಯಕ್ಷ, ನಿರ್ದೇಶಕರು ಹಾಗೂ ಅಧಿಕಾರಿಗಳು ವಿದೇಶಿ ಪ್ರವಾಸ ಕೈಗೊಂಡಿದ್ದಾರೆ.
ನಿರ್ದೇಶಕರು, ಅಧಿಕಾರಿಗಳ ಜೊತೆ ಕುಟುಂಬದವರೂ ಪ್ರವಾಸಕ್ಕೆ ತೆರಳುತ್ತಿದ್ದಾರೆ ಎಂಬುದು ಗೊತ್ತಾಗಿದೆ.
‘ಅ.20ರಿಂದ ನ.1ರವರೆಗೆ ಕ್ಷೇತ್ರದಲ್ಲಿ ನಾನು ಇರುವುದಿಲ್ಲ. ಕುಟುಂಬದ ಜೊತೆ ಬೇರೆ ಕಡೆ ಹೋಗುತ್ತಿದ್ದೇನೆ. ಕ್ಷೇತ್ರದ ಜನರು ಸಹಕರಿಸಬೇಕು’ ಎಂದು ಕೋಚಿಮುಲ್ ಅಧ್ಯಕ್ಷರೂ ಆಗಿರುವ ಶಾಸಕ ಕೆ.ವೈ.ನಂಜೇಗೌಡ ಫೇಸ್ಬುಕ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.
‘ರಾಜ್ಯದಲ್ಲಿ ಬರ ಪರಿಸ್ಥಿತಿ ನೆಲೆಸಿದ್ದು, ಈ ಸಂದರ್ಭದಲ್ಲಿ ಪ್ರವಾಸ ಅಗತ್ಯವಿತ್ತೇ’ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಂಪನಿಯೊಂದು ಪ್ರಾಯೋಜಕತ್ವ ವಹಿಸಿದೆ ಎಂಬ ಆರೋಪವನ್ನೂ ಮಾಡಿದ್ದಾರೆ.
ಆದರೆ, ಸ್ವಂತ ಹಣದಲ್ಲಿ ಪ್ರವಾಸಕ್ಕೆ ತೆರಳುತ್ತಿರುವುದಾಗಿ ಕೋಚಿಮುಲ್ ನಿರ್ದೇಶಕರೊಬ್ಬರು ಹೇಳಿಕೊಂಡಿದ್ದಾರೆ.
ಪ್ಯಾರಿಸ್, ಇಟಲಿ, ಸ್ವಿಟ್ಜರ್ಲೆಂಡ್ ಸೇರಿದಂತೆ ವಿವಿಧ ದೇಶಗಳಿಗೆ ಅಧ್ಯಯನ ಉದ್ದೇಶಕ್ಕೆ ತೆರಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.