ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಗಾದಿ ಆಚರಣೆಗೆ ಸಿದ್ಧತೆ: ಮಾರುಕಟ್ಟೆಯಲ್ಲಿ ಜನಜಂಗುಳಿ, ಭರ್ಜರಿ ವಹಿವಾಟು

ಬೇವು–ಬೆಲ್ಲದ ಹಬ್ಬ :ಖರೀದಿಗೆ ಮುಗಿಬಿದ್ದ ಜನ
Last Updated 1 ಏಪ್ರಿಲ್ 2022, 13:47 IST
ಅಕ್ಷರ ಗಾತ್ರ

ಕೋಲಾರ: ಬೇವು–ಬೆಲ್ಲದ ಹಬ್ಬ ಯುಗಾದಿ ಹಿನ್ನೆಲೆಯಲ್ಲಿ ಗ್ರಾಹಕರು ಪೂಜಾ ಸಾಮಗ್ರಿ ಖರೀದಿಸಲು ನಗರದ ಮಾರುಕಟ್ಟೆಗಳಿಗೆ ಶುಕ್ರವಾರ ಮುಗಿಬಿದ್ದರು. ವಸ್ತುಗಳ ಬೆಲೆ ಏರಿಕೆ ನಡುವೆಯೂ ಮಾರುಕಟ್ಟೆಯಲ್ಲಿ ವಹಿವಾಟು ಭರ್ಜರಿಯಾಗಿ ನಡೆಯಿತು.

ಹಳೇ ಬಸ್‌ ನಿಲ್ದಾಣ, ಎಂ.ಜಿ.ರಸ್ತೆ, ಹೊಸ ಬಸ್‌ ನಿಲ್ದಾಣ, ದೊಡ್ಡಪೇಟೆ, ವಾಸವಿ ದೇವಸ್ಥಾನ ರಸ್ತೆ, ಕಾಳಮ್ಮಗುಡಿ ರಸ್ತೆ, ಅಮ್ಮವಾರಿಪೇಟೆ ಸೇರಿದಂತೆ ಪ್ರಮುಖ ವಾಣಿಜ್ಯ ಸ್ಥಳಗಳ ಸುತ್ತಮುತ್ತ ಜನಜಂಗುಳಿ ಕಂಡುಬಂತು. ವರ್ತಕರ ಮೊಗದಲ್ಲಿ ಸಂತಸ ಮನೆ ಮಾಡಿತ್ತು.

ಬಟ್ಟೆ, ಹಣ್ಣು, ತರಕಾರಿ ಹಾಗೂ ದಿನಸಿ ಅಂಗಡಿಗಳು ಗ್ರಾಹಕರಿಂದ ತುಂಬಿ ಹೋಗಿದ್ದವು. ಪ್ರಮುಖ ರಸ್ತೆಗಳ ಬದಿಯಲ್ಲಿ ಹಾಗೂ ಪಾದಚಾರಿ ಮಾರ್ಗದಲ್ಲಿ ವರ್ತಕರು ಹೂವು, ಹಣ್ಣು, ಬೇವು, ಮಾವಿನ ಸೊಪ್ಪು ಮಾರುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಟಿ.ಚನ್ನಯ್ಯ ರಂಗಮಂದಿರ ಮುಂಭಾಗದ ರಸ್ತೆಯ ಅಕ್ಕಪಕ್ಕದ ಮಳಿಗೆಗಳು ಗ್ರಾಹಕರಿಂದ ಗಿಜಿಗುಡುತ್ತಿದ್ದವು. ಕೆಲ ವ್ಯಾಪಾರಿಗಳು ತಳ್ಳು ಗಾಡಿಗಳಲ್ಲಿ ಹಬ್ಬದ ಸಾಮಗ್ರಿಗಳನ್ನು ಮಾರುತ್ತಿದ್ದ ದೃಶ್ಯ ಬಡಾವಣೆಗಳಲ್ಲಿ ಕಂಡುಬಂತು.

ಸಮಯ ಕಳೆದಂತೆ ಬಿಸಿಲ ತಾಪ ಹೆಚ್ಚುತ್ತಾ ಹೋಯಿತು. ಗ್ರಾಹಕರು ಬಿಸಿಲ ಝಳ ಲೆಕ್ಕಿಸದೆ ಖರೀದಿಯಲ್ಲಿ ತೊಡಗಿದ್ದರು. ಮಾರುಕಟ್ಟೆಗಳ ಅಕ್ಕಪಕ್ಕದ ಐಸ್‌ಕ್ರೀಮ್‌, ಎಳನೀರು, ಕಬ್ಬಿನ ಹಾಲು ಹಾಗೂ ತಂಪು ಪಾನೀಯ ಅಂಗಡಿಗಳಲ್ಲಿ ಹೆಚ್ಚಿನ ವಹಿವಾಟು ನಡೆಯಿತು.

ಗಗನಕ್ಕೇರಿದ ಬೆಲೆ: ಹಬ್ಬದ ಹಿನ್ನೆಲೆಯಲ್ಲಿ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದವು. ಏಲಕ್ಕಿ ಬಾಳೆ ಕೆ.ಜಿಗೆ ₹ 70, ಪಚ್ಚ ಬಾಳೆ ₹ 30, ಕಿತ್ತಳೆ ₹ 140, ಸೇಬು ₹ 190, ದಾಳಿಂಬೆ ₹ 180, ಮೋಸಂಬಿ ₹ 90, ಕಪ್ಪು ದ್ರಾಕ್ಷಿ ₹ 200, ಬಿಳಿ ದ್ರಾಕ್ಷಿ ₹ 100, ಸಪೋಟ ₹ 50 ಇತ್ತು. ತೆಂಗಿನಕಾಯಿ ಒಂದಕ್ಕೆ ₹ 30 ಇತ್ತು. ಹಬ್ಬಕ್ಕೆ ಮುಖ್ಯವಾಗಿ ಬೇಕಾದ ಮಾವು ಹಾಗೂ ಬೇವಿನ ಸೊಪ್ಪಿನ ಬೆಲೆ ಒಂದು ಕಟ್ಟಿಗೆ ₹ 10 ಇತ್ತು. ಮತ್ತೊಂದೆಡೆ ತರಕಾರಿ ಬೆಲೆಗಳು ಗಗನಮುಖಿಯಾಗಿದ್ದವು.

ಮಲ್ಲಿಗೆ ಬಿಡಿ ಹೂವು ಕೆ.ಜಿಗೆ ₹ 500, ಕನಕಾಂಬರ ₹ 700, ಗುಲಾಬಿ ₹ 130, ಸುಗಂಧ ರಾಜ ₹ 150, ಸೇವಂತಿಗೆ ₹ 180, ಮಾರಿಗೋಲ್ಡ್‌ ₹ 200, ಚೆಂಡು ಹೂವು ₹ 50, ಕಾಕಡ ₹ 400 ಇತ್ತು. ಹೂವು, ಹಣ್ಣಿನ ಜತೆಗೆ ಸಕ್ಕರೆ, ಬೆಲ್ಲ, ಮೈದಾ, ಅಡುಗೆ ಎಣ್ಣೆ, ಕಡಲೆ ಬೇಳೆಯಂತಹ ದಿನಸಿ ಪದಾರ್ಥಗಳ ಬೆಲೆ ಏರಿಕೆಯಾಗಿದ್ದವು. ಮಾರುಕಟ್ಟೆಗೆ ಬಂದಿದ್ದ ಗ್ರಾಹಕರಿಗೆ ವಸ್ತುಗಳ ಬೆಲೆ ಏರಿಕೆ ಬಿಸಿ ತಟ್ಟಿತು.

ವಾಹನ ದಟ್ಟಣೆ: ಸಂಜೆಯಾದಂತೆ ಮಾರುಕಟ್ಟೆಗೆ ಬರುವ ಗ್ರಾಹಕರ ಸಂಖ್ಯೆ ಹೆಚ್ಚುತ್ತಾ ಹೋಯಿತು. ಇದರಿಂದ ವಾಣಿಜ್ಯ ಸ್ಥಳಗಳಲ್ಲಿ ವಾಹನ ದಟ್ಟಣೆ ಉಂಟಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ಹಾಗೂ ಭಾರಿ ವಾಹನಗಳ ಓಡಾಟ ನಿರ್ಬಂಧಿಸಲಾಗಿತ್ತು. ಮಾರುಕಟ್ಟೆಗಳ ಸುತ್ತಮುತ್ತ ಸಂಚಾರ ನಿರ್ವಹಣೆಗೆ ಹೆಚ್ಚಿನ ಪೊಲೀಸರು ಹಾಗೂ ಗೃಹರಕ್ಷಕ ದಳ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ಪರಸ್ಥಳದ ಸಾರ್ವಜನಿಕರು ಹಬ್ಬದ ಆಚರಣೆಗೆ ತಮ್ಮ ಸ್ವಂತ ಊರುಗಳಿಗೆ ಹೋಗಲು ಖಾಸಗಿ ಹಾಗೂ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಬಸ್‌ಗೆ ಕಾಯುತ್ತಾ ನಿಂತಿದ್ದ ದೃಶ್ಯ ಕಂಡುಬಂತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT