ಮಾಲೂರು: ವಿಧಾನ ಪರಿಷತ್ ಮುಖ್ಯ ಸಚೇತಕ ವೈ.ಎ. ನಾರಾಯಣಸ್ವಾಮಿ ಅವರು ಅಧಿಕಾರಿಗಳೊಂದಿಗೆ ಶನಿವಾರ ಸಂಜೆತಾಲ್ಲೂಕಿನ ಉಳ್ಳೇರಹಳ್ಳಿಗೆ ಭೇಟಿ ನೀಡಿಸಂತ್ರಸ್ತೆ ಶೋಭಾ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.
ನೊಂದ ಕುಟುಂಬಕ್ಕೆ ಧೈರ್ಯ ತುಂಬಿ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿದರು.
ಬಳಿಕ ಮಾತನಾಡಿದ ಅವರು, ಗ್ರಾಮದಲ್ಲಿ ಭೂತಮ್ಮ ದೇವಿ ಉತ್ಸವ ಮೂರ್ತಿ ಮೆರವಣಿಗೆ ವೇಳೆ ನಡೆದ ಘಟನೆ ಹಿನ್ನೆಲೆಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಬಾಲಕನ ಕುಟುಂಬಕ್ಕೆ ದಂಡ ಪಾವತಿಸಬೇಕು. ಇಲ್ಲವಾದರೆ ಗ್ರಾಮದಿಂದ ಹೊರಹಾಕುವುದಾಗಿ ಬೆದರಿಕೆ ಹಾಕಿರುವುದು ದುರದೃಷ್ಟಕರ ಸಂಗತಿ. ಇದರಿಂದ ಸಮಾಜ ತಲೆತಗ್ಗಿಸುವಂತಾಗಿದೆ ಎಂದು ತಿಳಿಸಿದರು.
ಸರ್ಕಾರ ಹಾಗೂ ಜಿಲ್ಲಾಡಳಿತ ನಿಮ್ಮೊಂದಿಗಿದೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತಾಲ್ಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಎಚ್ಚರ ವಹಿಸುವಂತೆ ಹೇಳಿದರು.
ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಸಹ ಕೈಗೊಳ್ಳಲಾಗಿದೆ ಎಂದರು.
ತಹಶೀಲ್ದಾರ್ ಮಲ್ಲಿಕಾರ್ಜುನ್, ಉಪ ತಹಶೀಲ್ದಾರ್ ಜಗನ್ನಾಥ್, ಕಂದಾಯ ಅಧಿಕಾರಿ ಹರಿಪ್ರಸಾದ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಚನ್ನಬಸಪ್ಪ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಶಿವಕುಮಾರ್, ಪಿಡಿಒ ಮಂಜುಳಾ, ಪುರಸಭೆ ಸದಸ್ಯ ಎಂ.ವಿ. ವೇಮನ, ಪೊಲೀಸ್ ಉಪ ನಿರೀಕ್ಷಕರಾದ ರವೀಂದ್ರ ಗೌಡ, ದಿವ್ಯ ಹಾಜರಿದ್ದರು.