ಕೋಲಾರ: ‘ನೈತಿಕತೆ ಬಗ್ಗೆ ಮಾತನಾಡುವ ಬಿಜೆಪಿಯು 25ಕ್ಕೂ ಹೆಚ್ಚು ಅಪರಾಧ ಪ್ರಕರಣ ಎದುರಿಸುತ್ತಿರುವ ಹಾಗೂ ರೌಡಿಪಟ್ಟಿಯಲ್ಲಿರುವ ಮುನಿಸ್ವಾಮಿ ಅವರಿಗೆ ಟಿಕೆಟ್ ನೀಡಿದ್ದು, ಕ್ಷೇತ್ರದಲ್ಲಿ ನ್ಯಾಯಸಮ್ಮತ ಚುನಾವಣೆ ನಡೆಯುವುದೇ ಎಂಬ ಆತಂಕ ಎದುರಾಗಿದೆ’ ಎಂದು ಕಾಂಗ್ರೆಸ್ ಎಸ್ಸಿ ಘಟಕದ ಮಾಜಿ ಅಧ್ಯಕ್ಷ ಅಶ್ವತ್ಥನಾರಾಯಣ ದೂರಿದರು.
ಇಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಬೆಂಗಳೂರಿನ ಕಾಡುಗೋಡಿಯ ಎಸ್.ಮುನಿಸ್ವಾಮಿ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಅವರ ವಿರುದ್ಧ ಜಿಲ್ಲೆಯ ಮಾಸ್ತಿ ಹಾಗೂ ಬೆಂಗಳೂರಿನ ಕಾಡುಗೋಡಿ, ಎಚ್ಎಎಲ್ ಸೇರಿದಂತೆ ಹಲವು ಅಪರಾಧ ಪ್ರಕರಣಗಳು ದಾಖಲಾಗಿವೆ’ ಎಂದು ಆರೋಪಿಸಿದರು.
‘ಮುನಿಸ್ವಾಮಿ ಕ್ಷೇತ್ರದಲ್ಲಿ ಮುಗ್ಧ ಜನರನ್ನು ಬೆದರಿಸಿ ಬಿಜೆಪಿಗೆ ಮತ ಹಾಕುವಂತೆ ಮಾಡುತ್ತಿದ್ದಾರೆ. ಜಿಲ್ಲೆಯ ಮತದಾರರು ಅವರನ್ನು ತಿರಸ್ಕರಿಸಿ ಕಾಂಗ್ರೆಸ್ ಅಭ್ಯರ್ಥಿ ಸಜ್ಜನ ರಾಜಕಾರಣಿ ಕೆ.ಎಚ್.ಮುನಿಯಪ್ಪರನ್ನು ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.
‘ಮುನಿಸ್ವಾಮಿ ಹಾಗೂ ಅವರ ರೌಡಿ ಸಹಚರರು ಕೋಲಾರದಲ್ಲಿ ಬೀಡು ಬಿಟ್ಟಿದ್ದು, ಮತದಾನದ ವೇಳೆ ಅಶಾಂತಿ ಸೃಷ್ಟಿಸುವ ಸಾಧ್ಯತೆ ಇದೆ. ಪೊಲೀಸರು ನ್ಯಾಯಸಮ್ಮತ ಚುನಾವಣೆಗಾಗಿ ಮುನಿಸ್ವಾಮಿ ಹಾಗೂ ಅವರ ಸಹಚರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಬೆಂಗಳೂರಿನಲ್ಲಿ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿ ಈಗ ಮುನಿಸ್ವಾಮಿ ಪರ ಪ್ರಚಾರ ಮಾಡುತ್ತಿರುವ ವ್ಯಕ್ತಿಗಳ ವಿರುದ್ಧ ಕ್ರಮ ಜರುಗಿಸುವಂತೆ ರಾಜ್ಯ ಚುನಾವಣಾಧಿಕಾರಿಗೆ ದೂರು ನೀಡುತ್ತೇವೆ’ ಎಂದು ವಿವರಿಸಿದರು.
ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ರಾಮಚಂದ್ರಪ್ಪ, ನಗರಸಭೆ ಮಾಜಿ ಸದಸ್ಯ ವಿಜಯಕುಮಾರ್ ಹಾಜರಿದ್ದರು.