ಕೋಲಾರ: ಜಿಲ್ಲೆಯ ಮಕ್ಕಳಲ್ಲಿ ವೈರಾಣು ಜ್ವರ ಕಾಣಿಸಿಕೊಂಡಿದ್ದು, ಪೋಷಕರಿಗೆ ಕೋವಿಡ್ 3ನೇ ಅಲೆಯ ಆತಂಕ ಎದುರಾಗಿದೆ.
2 ತಿಂಗಳಿಂದ 3 ವರ್ಷದೊಳಗಿನ ವಯೋಮಾನದ ಮಕ್ಕಳಲ್ಲಿ ಜ್ವರ, ಕಫಾ. ಕೆಮ್ಮು, ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗುತ್ತಿರುವ ಮಕ್ಕಳ ಸಂಖ್ಯೆ ದಿಢೀರ್ ಏರಿಕೆಯಾಗಿದೆ. ಮುಖ್ಯವಾಗಿ ಪಕ್ಕದ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕು, ಜಿಲ್ಲೆಯ ಮುಳಬಾಗಿಲು ಮತ್ತು ಮಾಲೂರು ತಾಲ್ಲೂಕಿನ ಮಕ್ಕಳು ಜ್ವರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ.
ಆಗಸ್ಟ್ ತಿಂಗಳಲ್ಲಿ 284 ಮಕ್ಕಳು ಅನಾರೋಗ್ಯದ ಕಾರಣಕ್ಕೆ ಎಸ್ಎನ್ಆರ್ ಜಿಲ್ಲಾ ಆಸ್ಪತ್ರೆಗೆ ಒಳ ರೋಗಿಗಳಾಗಿ ದಾಖಲಾಗಿದ್ದರು. ಸೆಪ್ಟೆಂಬರ್ ತಿಂಗಳ 17 ದಿನದಲ್ಲೇ 231 ಮಕ್ಕಳು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮತ್ತೊಂದೆಡೆ ಆಸ್ಪತ್ರೆಯಲ್ಲಿ ನಿತ್ಯ ಸುಮಾರು 100 ಮಕ್ಕಳು ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದು ಮನೆಗೆ ಮರಳುತ್ತಿದ್ದಾರೆ.
ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಲ್ಲಿ ಹೆಚ್ಚು ಮಳೆಯಾಗಿತ್ತು. ಜತೆಗೆ ಇಡೀ ತಿಂಗಳು ಮೋಡ ಮುಸುಕಿದ ವಾತಾವರಣವಿದ್ದ ಕಾರಣ ತೇವಾಂಶ ಹೆಚ್ಚಿತ್ತು. ಸೆಪ್ಟೆಂಬರ್ ಮೊದಲ ವಾರದಲ್ಲಿ ವಾತಾವರಣದಲ್ಲಿ ಬದಲಾವಣೆಯಾಗಿ ತಾಪಮಾನ ಏರಿಕೆಯಾಯಿತು. ಈ ಬದಲಾವಣೆಯಿಂದಾಗಿ ಮಕ್ಕಳಲ್ಲಿ ಅನಾರೋಗ್ಯ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ.
‘ಹವಾಮಾನ ವೈಪರಿತ್ಯದಿಂದಾಗಿ ಮಕ್ಕಳಿಗೆ ವೈರಾಣು ಜ್ವರ ಬರುತ್ತಿದೆ. ಆಸ್ಪತ್ರೆಗೆ ದಾಖಲಾಗಿರುವ ಎಲ್ಲಾ ಮಕ್ಕಳಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ಯಾರಲ್ಲೂ ಕೊರೊನಾ ಸೋಂಕು ದೃಢಪಟ್ಟಿಲ್ಲ. ಹೀಗಾಗಿ ಪೋಷಕರು ಆತಂಕಪಡುವ ಅಗತ್ಯವಿಲ್ಲ’ ಎಂದು ಮಕ್ಕಳ ತಜ್ಞ ಡಾ.ಬಾಲಸುಂದರ್ ‘ಪ್ರಜಾವಾಣಿ’ಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.